
ಬೆಂಗಳೂರು (ಮಾ.10): ಸಾರ್ವಜನಿಕ ವಲಯದ ಭಾರತೀಯ ಜೀವವಿಮಾ ನಿಗಮ (ಎಲ್ಐಸಿ)ಯ ಖಾಸಗೀಕರಣ ವಿರೋಧಿಸಿ ಮಾರ್ಚ್ 18ರಂದು ವಿವಿಧ ಸಂಘಟನೆಗಳ ಬೆಂಬಲದಿಂದ ಮುಷ್ಕರ ನಡೆಸಲು ವಿಮಾ ಕಾರ್ಪೊರೇಷನ್ ನೌಕರರ ಸಂಘ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವಿಮಾ ನೌಕರರ ಸಂಘ ಬೆಂಗಳೂರು ವಿಭಾಗ 2ರ ಪ್ರಧಾನ ಕಾರ್ಯದರ್ಶಿ ಕೆ. ಗೋಪಾಲ್ ಮಾತನಾಡಿ, ಕೇಂದ್ರ ಸರ್ಕಾರ ಎಲ್ಐಸಿ ಅನ್ನು ಖಾಸಗೀಕರಣಗೊಳಿಸಲು ಹೊರಟಿದೆ.
ಇನ್ನೊಂದೆಡೆ ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳವನ್ನು ಶೇ.49ರಿಂದ ಶೇ.74ಕ್ಕೆ ಏರಿಸಲು ನಿರ್ಧರಿಸಲಾಗಿದೆ. ಒಂದು ಸಾಮಾನ್ಯ ವಿಮಾ ಕಂಪನಿ ಹಾಗೂ ಎರಡು ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರಿಂದ ಸಾರ್ವಜನಿಕ ವಲಯದ ವಿಮಾ ಉದ್ಯಮ, ಭಾರತೀಯ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ. ಹೀಗಾಗಿ ದೇಶದ ಜನರ ಹಿತದೃಷ್ಟಿಯಿಂದ ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಂಕಷ್ಟ ಕಾಲದಲ್ಲೂ ದಾಖಲೆಯತ್ತ ಎಲ್ಐಸಿ
ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸಿದರೆ ಉದ್ಯಮಶೀಲತೆ ಹೆಚ್ಚಾಗಲಿದೆ ಎಂಬ ಕೇಂದ್ರ ಸರ್ಕಾರದ ವಾದ ಬರಿ ಪೊಳ್ಳು. ಈ ಹಿನ್ನೆಲೆಯಲ್ಲಿ ಮಾರ್ಚ್ 18ರಂದು ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ವಿವಿಧ ಸಂಘಟನೆಗಳ ಜತೆಗೂಡಿ ಮುಷ್ಕರ ನಡೆಸಲಾಗುವುದು.
ಮುಷ್ಕರಕ್ಕೆ ಕನ್ನಡ ಪರ ಸಂಘಟನೆಗಳು, ದಲಿತ ಸಂಘಟನೆಗಳು, ಖಾಸಗಿ ವಲಯದ ವಿಮಾ ಕಂಪನಿಗಳು, ಬ್ಯಾಂಕುಗಳು, ಬಿಎಚ್ಇಎಲ್ ಇತರೆ ಸಂಘಗಳ ಬೆಂಬಲವಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ