ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ: ಕೇಂದ್ರ ಸಚಿವ ವಿ.ಸೋಮಣ್ಣ

Kannadaprabha News   | Kannada Prabha
Published : Jul 12, 2025, 11:57 PM IST
v somanna

ಸಾರಾಂಶ

ಒಂದು ಸಾವಿರ ಕೋಟಿ ರು. ವೆಚ್ಚದಲ್ಲಿ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ನಡೆಯುತ್ತಿದೆ. ಇದೊಂದೇ ರಾಜ್ಯಕ್ಕೆ ಹತ್ತು ಒಂದೇ ಭಾರತ್ ರೈಲುಗಳು ಬರುತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಚಿಕ್ಕಮಗಳೂರು (ಜು.12): ಒಂದು ಸಾವಿರ ಕೋಟಿ ರು. ವೆಚ್ಚದಲ್ಲಿ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ನಡೆಯುತ್ತಿದೆ. ಇದೊಂದೇ ರಾಜ್ಯಕ್ಕೆ ಹತ್ತು ಒಂದೇ ಭಾರತ್ ರೈಲುಗಳು ಬರುತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ನಗರದ ರೈಲ್ವೆ ನಿಲ್ದಾಣದಲ್ಲಿ ಚಿಕ್ಕಮಗಳೂರು - ತಿರುಪತಿ ರೈಲಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, 2014 ರಿಂದ ಇದುವರೆಗೆ ರಾಜ್ಯದಲ್ಲಿ 664 ರೈಲ್ವೆ ಮೇಲ್ಸೇತುವೆ ಹಾಗೂ ಕೆಳ ಸೇತುವೆ ನಿರ್ಮಾಣ ಮಾಡಲಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅರಸೀಕೆರೆ ತುಮಕೂರು ಮಧ್ಯೆ ಡಬ್ಲಿಂಗ್ ಕಾರ್ಯ ₹750 ಕೋಟಿ ರು. ವೆಚ್ಚದಲ್ಲಿ ಪೂರ್ಣಗೊಂಡಿದೆ. ಇದಲ್ಲದೆ ಬೀರೂರು ಶಿವಮೊಗ್ಗ ಡಬ್ಲಿಂಗ್ ಕಾರ್ಯ ಶೀಘ್ರವೇ ಆರಂಭ ಮಾಡುತ್ತೇವೆ. ಹಾಸನ ಬೇಲೂರು ಚಿಕ್ಕಮಗಳೂರು ರೈಲ್ವೆ ಮಾರ್ಗ ಇನ್ನೆರಡು ವರ್ಷದ ಒಳಗೆ ಮುಕ್ತಾಯಗೊಳ್ಳಲಿದ್ದು, ಆಗ ಚಿಕ್ಕಮಗಳೂರಿಗೆ ಹೆಚ್ಚಿನ ರೈಲುಗಳು ಸಂಚರಿಸುತ್ತವೆ ಎಂದು ಹೇಳಿದರು. ಚಿಕ್ಕಮಗಳೂರು ರೈಲ್ವೆ ನಿಲ್ದಾಣವನ್ನು ₹24 ಕೋಟಿ ವೆಚ್ಚದಲ್ಲಿ, ಸಕಲೇಶಪುರ ರೈಲ್ವೆ ನಿಲ್ದಾಣವನ್ನು ₹26 ಕೋಟಿ ವೆಚ್ಚದಲ್ಲಿ, ಹಾಸನ ₹23 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಿ ಮೇಲ್ದರ್ಜೆಗೇರಿಸಲಾಗುತ್ತಿದೆ.

ಇದೇ ರೀತಿ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸುವ ಕಾರ್ಯ ನಿರಂತರವಾಗಿ ಮುಂದುವರಿದಿದೆ ಎಂದರು. ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಸಚಿವ ವಿ ಸೋಮಣ್ಣ ರಾಜ್ಯ ರಾಜಕಾರಣದಲ್ಲಿ ಕಳೆದು ಹೋಗಿದ್ದರು ಎಂಬ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ಫಿನಿಕ್ಸ್ ಹಕ್ಕಿಯಂತೆ ಎದ್ದು ಬಂದ ಸೋಮಣ್ಣ ಕೇಂದ್ರ ಸಚಿವರಾಗಿದ್ದಾರೆ. ಇದು ಅವರ ರಾಜಕೀಯ ಚಾಣಾಕ್ಷತನಕ್ಕೆ ಹಿಡಿದ ಕೈಗನ್ನಡಿ ಎಂದು ಹೇಳಿದರು.

ಚಿಕ್ಕಮಗಳೂರು ತಿರುಪತಿ ರೈಲು ಸಂಚಾರ ಆರಂಭ ಮಾಡುವಂತೆ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದಾಗ ಇಷ್ಟು ಬೇಗನೆ ರೈಲು ಸೇವೆ ಆರಂಭಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ. ನೂತನ ರೈಲಿಗೆ ದತ್ತಪೀಠವನ್ನು ಕೇಂದ್ರವಾಗಿಟ್ಟುಕೊಂಡು ಹೆಸರನ್ನು ಇಡಬೇಕು. ದತ್ತಪೀಠ ತಿರುಪತಿ ಎಕ್ಸ್ ಪ್ರೆಸ್, ದತ್ತಪೀಠ ಹೀಗೆ ಕೆಲ ಹೆಸರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸಿ.ಟಿ. ರವಿ ಅಂತಿಮ ತೀರ್ಮಾನ ಕೈಗೊಳ್ಳಬೇಕು ಎಂದರು. ಪ್ರಸ್ತುತ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬೆಳಗ್ಗೆ 8:15ಕ್ಕೆ ರೈಲು ತೆರಳುತ್ತಿದೆ. ಆದರೆ ಬೆಳಗಿನ ಜಾವ 5.15ಕ್ಕೆ ರೈಲು ಸಂಚಾರ ಆರಂಭಿಸಿದರೆ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಈ ಬಗ್ಗೆ ರೈಲ್ವೆ ಸಚಿವರು ಗಮನಹರಿಸಬೇಕು ಎಂದು ಮನವಿ ಮಾಡಿದರು.

ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಡೀ ದೇಶಾ ದ್ಯಂತ ಸಂಪರ್ಕ ಕ್ರಾಂತಿಯನ್ನೇ ಮಾಡುತ್ತಿದೆ. ರಸ್ತೆ, ರೈಲ್ವೆ, ಡಿಜಿಟಲ್, ಏರ್ ಕನೆಕ್ಟಿವಿಟಿ ಕ್ಷೇತ್ರದಲ್ಲಿ ಕ್ರಾಂತಿಯೇ ನಡೆಯುತ್ತಿದೆ. ಇದರ ಭಾಗವಾಗಿಯೇ ರಾಜ್ಯದಲ್ಲೂ ರೈಲ್ವೆ ಇಲಾಖೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಮಾಜಿ ಶಾಸಕ ಡಿ.ಎಸ್.ಸುರೇಶ್, ನಗರ ಸಭೆ ಅಧ್ಯಕ್ಷೆ ಶೀಲಾ ದಿನೇಶ್, ಪ್ರಮುಖರಾದ ಎಚ್.ಸಿ.ಕಲ್ಮರುಡಪ್ಪ, ಎಂ.ಆರ್.ದೇವರಾಜ ಶೆಟ್ಟಿ, ಮಧುಕುಮಾರ್‌ ರಾಜ್‌ ಅರಸ್‌ ಉಪಸ್ಥಿತರಿದ್ದರು.

ನನಗೆ ಆದಂತೆ ಆಗಿದ್ದರೆ ಊರು ಬಿಡುತ್ತಿದ್ರು: ಕೆಲವೊಮ್ಮೆ ಜಾಸ್ತಿ ಬುದ್ಧಿವಂತರಿಗೆ ತೊಂದರೆಯಾಗುತ್ತದೆ. ಹೀಗೆ ತೊಂದರೆ ಅನುಭವಿಸಿದವರಲ್ಲಿ ನಾನು ಒಬ್ಬ ಹಾಗೆ ಸಿ.ಟಿ. ರವಿಯು ಒಬ್ಬ. ನನಗೆ ಆದಂತೆ ಆಗಿದ್ದರೆ ಸಿ.ಟಿ. ರವಿ ಊರು ಬಿಟ್ಟು ಓಡಿ ಹೋಗುತ್ತಿದ್ದ. ಒಂದೇ ಸೋಲಿಗೆ ಒದ್ದಾಡುತ್ತಿದ್ದಾರೆ ಆದರೆ ನಾನು ಐದು ಬಾರಿ ಸೋತಿದ್ದೇನೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ನಾನು ಐದು ಬಾರಿ ಸೋತರು ಹೇಗೆ ಸೋತಿದ್ದೇನೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಭಗವಂತನ ಮೇಲೆ ನಂಬಿಕೆ ಇಟ್ಟುಕೊಂಡು ಇರಬೇಕು. ಸಾರ್ವಜನಿಕ ಜೀವನ ಎಂಬುದು ಮುಳ್ಳಿನ ಹಾಸಿಗೆ ಇದ್ದಂತೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌