ಕನ್ನಡಿಗರನ್ನು ನಿಂದಿಸಿ ಜೈಲು ಸೇರಿದ್ದ MES ಮುಖಂಡ ಶುಭಂ ಶಳಕೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಘಟನೆಗೆ ಕನ್ನಡಿಗರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ, ಕೆಲವರು ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನು ಕೆಲವರು ಕಾನೂನು ಪ್ರಕ್ರಿಯೆಯನ್ನು ಗೌರವಿಸುವುದಾಗಿ ತಿಳಿಸಿದ್ದಾರೆ.
ಬೆಳಗಾವಿ (ಮಾ.26): ಕನ್ನಡಿಗರನ್ನು 'ನಾಲಾಯಕ್' ಎಂದು ಕರೆದು, ಕರ್ನಾಟಕ ಬಂದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಜೈಲು ಸೇರಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡ ಶುಭಂ ಶಳಕೆ ಅವರು ಇಂದು ಸಂಜೆ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಶುಭಂ ಶಳಕೆ ಅವರು ಕನ್ನಡಿಗರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಅಲ್ಲದೇ, ಕರ್ನಾಟಕ ಬಂದ್ನ ಸಂದರ್ಭದಲ್ಲಿ ಅಪಹಾಸ್ಯ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಘಟನೆಯು ಕನ್ನಡ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು ಬಂಧಿಸುವಂತೆ ಒತ್ತಾಯಿಸಿದ್ದರು. ಪೊಲೀಸರು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು.
ಇದನ್ನೂ ಓದಿ: 'ಬೆಳಗಾವಿ ಬಂದ್ ಮಾಡೋ ತಾಕತ್ ಇರೋದು ನಮಗಷ್ಟೇ' ಕರ್ನಾಟಕ ಬಂದ್ ನೀರಸ ಪ್ರತಿಕ್ರಿಯೆಬೆನ್ನಲ್ಲೇ ಶಿವಸೇನೆ ಪೋಸ್ಟ್ ವೈರಲ್!
ಇಂದು ಸಂಜೆ ಜಾಮೀನು ಮಂಜೂರಾಗುತ್ತಿದ್ದಂತೆ ಶುಭಂ ಶಳಕೆ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಈ ಬಗ್ಗೆ ಕನ್ನಡಿಗರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದನ್ನು ನ್ಯಾಯ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ಎಂದು ಭಾವಿಸಿದರೆ, ಇನ್ನು ಕೆಲವರು ಕಾನೂನು ಪ್ರಕ್ರಿಯೆಯನ್ನು ಗೌರವಿಸುವುದಾಗಿ ತಿಳಿಸಿದ್ದಾರೆ.
ಈ ಘಟನೆಯು ಬೆಳಗಾವಿ ಜಿಲ್ಲೆಯಲ್ಲಿ ಭಾಷಾ ಸಂಘರ್ಷದ ಸೂಕ್ಷ್ಮ ವಿಷಯವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ಶುಭಂ ಶಳಕೆ ಅವರ ಬಿಡುಗಡೆಯ ಬಗ್ಗೆ ಎಂಇಎಸ್ ಬೆಂಬಲಿಗರು ಸಂತಸ ವ್ಯಕ್ತಪಡಿಸಿದ್ದರೆ, ಕನ್ನಡಪರ ಸಂಘಟನೆಗಳು ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚಿಸುತ್ತಿವೆ.