
ಬೆಂಗಳೂರು (ಆ.07): ಧರ್ಮಸ್ಥಳದಲ್ಲಿ ಶವಗಳನ್ನು ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಪಂಥೀಯ ಸಂಘಟನೆಗಳ ಒತ್ತಡದಿಂದಾಗಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಾಗಿದೆ ಎಂದು ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದರು. ಈ ಕುರಿತು ತನಿಖೆ ಗಂಭೀರವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಯೂಟ್ಯೂಬ್ಗಳ ವೈಭವೀಕರಣಕ್ಕೆ ಆಕ್ಷೇಪ
ಈ ಪ್ರಕರಣದ ತನಿಖೆ ಸ್ಪಷ್ಟವಾಗಿ ನಡೆಯುತ್ತಿದ್ದು, ಯಾವುದೇ ಮಾಧ್ಯಮಗಳು ಅಥವಾ ಯೂಟ್ಯೂಬ್ ಚಾನೆಲ್ಗಳು ಈ ಘಟನೆಯನ್ನು ವೈಭವೀಕರಿಸುವುದು ಸರಿಯಲ್ಲ. ಹಾಗೆಯೇ ಶಾಸಕ ಸುನೀಲ್ ಕುಮಾರ್ ಅವರು ಹಿಂದೂ ಧರ್ಮದ ಬಗ್ಗೆ ಹಾಗೂ ಧಾರ್ಮಿಕ ಸ್ಥಳದ ಬಗ್ಗೆ ಅಪಪ್ರಚಾರ ಆಗುತ್ತಿದೆ ಎಂಬುದನ್ನು ಯಾವ ಆಧಾರದಲ್ಲಿ ಮಾತನಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.
ಚುನಾವಣಾ ಆಯೋಗದ ವಿರುದ್ಧ ಕಿಡಿ:
ಇದೇ ವೇಳೆ, ಮತ ಕಳವು ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ನನ್ನದೇ ವಿಧಾನಸಭಾ ಕ್ಷೇತ್ರ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆ ವಾರ್ಡ್ನಲ್ಲಿ 8,500 ಮತಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಯಾರು ಮತದಾರರು ಅನ್ನೋದೇ ಗೊತ್ತಿಲ್ಲ. ಈ ಬಗ್ಗೆ ನಾನು ಚುನಾವಣಾ ಆಯೋಗಕ್ಕೆ ಪತ್ರ ಬರೆದರೂ ಯಾವುದೇ ಮಾಹಿತಿ ನೀಡಲಿಲ್ಲ ಎಂದು ಆಕ್ರೋಶ ಹೊರಹಾಕಿದರು
ಚುನಾವಣಾ ಆಯೋಗ ಬಿಜೆಪಿಯ ಪರವಾಗಿ ಕೆಲಸ ಮಾಡುತ್ತಿದೆ
ಇಲ್ಲಿ ಚುನಾವಣಾ ಆಯೋಗದ ನಡೆ ಸರಿಯಿಲ್ಲ. ಈ ರೀತಿಯ ಸಮಸ್ಯೆಗಳಾದಾಗ ಬಂದು ನೋಡುವ ಕೆಲಸವನ್ನು ಚುನಾವಣಾ ಆಯೋಗ ಮಾಡುತ್ತಿಲ್ಲ. ಈಗ ಬಂದಿರುವ ಚುನಾವಣಾ ಆಯೋಗ ಸರಿಯಿಲ್ಲ, ಇದು ಬಿಜೆಪಿಯ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಯೋಚಿಸುವುದಾಗಿ ಹೇಳಿದರು.
ಆರೋಗ್ಯ ಇಲಾಖೆಯಲ್ಲಿ ಪಾರದರ್ಶಕ ಮತ್ತು ಸುಧಾರಿತ ಆಡಳಿತ ಜಾರಿಗೆ ತರಲು ಸರ್ಕಾರವು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇಲಾಖೆಯಲ್ಲಿ ಕಾನೂನು ಪ್ರಕಾರ ವರ್ಗಾವಣೆ ನಿಯಮಗಳು ಇದ್ದರೂ ಸರಿಯಾಗಿ ಪಾಲನೆ ಆಗಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾವು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದೇವೆ. ಯಾವುದೇ ರೀತಿಯ ಒತ್ತಡ ಅಥವಾ ಹಸ್ತಕ್ಷೇಪಕ್ಕೆ ಒಳಗಾಗದೆ, ಕಡ್ಡಾಯ ಹುದ್ದೆಗಳನ್ನು ಗುರುತಿಸಿ, ಅದಕ್ಕೆ ತಕ್ಕಂತೆ 5,676 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಯತ್ನ ಮಾಡಲಾಗಿದೆ ಎಂದರು.
ತಾಲ್ಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ನೇಮಕ
ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ತಾಲ್ಲೂಕು ಆಸ್ಪತ್ರೆಗಳನ್ನು ಬಲಪಡಿಸಲು ಸರ್ಕಾರ ಮುಂದಾಗಿದೆ. ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ ಮೂವರು ತಜ್ಞ ವೈದ್ಯರು ಕಡ್ಡಾಯವಾಗಿ ಇರಬೇಕು ಎಂದು ಆದೇಶ ಮಾಡಲಾಗಿದೆ. ಮುಂದಿನ ದಿನಗಳಲ್ಲಿ, ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಇಬ್ಬರು ಸ್ತ್ರೀರೋಗ ತಜ್ಞರು, ಇಬ್ಬರು ಅರವಳಿಕೆ ತಜ್ಞರು ಮತ್ತು ಇಬ್ಬರು ಮಕ್ಕಳ ತಜ್ಞರು ಇರಬೇಕು ಎಂಬ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಇಡುತ್ತೇನೆ. ಸಂಪುಟದ ಅನುಮೋದನೆ ದೊರೆತ ನಂತರ ಈ ನಿರ್ಧಾರವನ್ನು ಜಾರಿಗೆ ತರಲಾಗುವುದು.
ಇದರಿಂದ ಪ್ರಸ್ತುತ ತಾಲ್ಲೂಕು ಆಸ್ಪತ್ರೆಗಳಲ್ಲಿ ನಡೆಯುತ್ತಿರುವ 100 ಹೆರಿಗೆಗಳ ಸಂಖ್ಯೆಯನ್ನು 200ಕ್ಕೆ ಏರಿಸಬಹುದು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉತ್ತಮ ಚಿಕಿತ್ಸೆ ಸಿಗುವಂತೆ ಮಾಡಬಹುದು. ಈ ಯೋಜನೆ ಮುಂದಿನ ಒಂದು ತಿಂಗಳಿನಲ್ಲಿ ಜಾರಿಗೆ ಬರುವ ನಿರೀಕ್ಷೆ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ