
ಬೆಂಗಳೂರು (ಜೂ.06) ಡಿಕೆ ಶಿವಕುಮಾರ್ ಸಚಿವ ಸಂಪುಟದ ಹಿರಿಯ ನಾಯಕರ ಅಸಮಾಧಾನದಲ್ಲಿ ಮಹತ್ವದ ತಿರುವು ಎದುರಾಗಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲು ಪಟ್ಟು ಹಿಡಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ ಇದೀಗ ರಾಜೀನಾಮೆ ವಾಪಸ್ ಪಡೆದಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ರಾಮಲಿಂಗಾ ರೆಡ್ಡಿ ಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸುರ್ಜೆವಾಲ ಹೇಳಿದ್ದಾರೆ.
ಸುರ್ಜೆವಾಲಾ ಸುದ್ದಿಗೋಷ್ಠಿ ಮೂಲಕ ಈ ಮಾತು ಸ್ಪಷ್ಟಪಡಿಸಿದ್ದಾರೆ. ರಾಮಲಿಂಗಾ ರೆಡ್ಡಿ ತಮ್ಮ ರಾಜೀನಾಮೆ ಹಿಂಪಡೆದಿದ್ದಾರೆ. ಕೆಲ ಗೊಂದಲಗಳು ಸೃಷ್ಟಿಯಾಗಿತ್ತು. ಎಲ್ಲವೂ ಬಗೆ ಹರಿದಿದೆ. ಸಚಿವರಾಗಿಯೇ ಮುಂದುವರಿಯಲಿದ್ದಾರೆ ಎಂದಿದ್ದಾರೆ. ಇದೇ ವೇಳೆ ಮಾಧ್ಯಮಗಳ ಪ್ರಶ್ನೆಯನ್ನು ತೆಗೆದುಕೊಳ್ಳದೇ ಹೇಳಿಕೆ ನೀಡಿ ಸುರ್ಜೆವಾಲ ಹೊರಟಿದ್ದಾರೆ.
ರಾಮಲಿಂಗಾ ರೆಡ್ಡಿ ರಾಜೀನಾಮೆ ಘಟನೆ ಹಾಗೂ ಸುಳ್ಳು ಪ್ರಚಾರ ಮಾಡುವಲ್ಲಿ ಬಿಜೆಪಿ ನಾಯಕರು ನಿರತರವಾಗಿದ್ದಾರೆ. ಇದು ಬಿಜೆಪಿ ಮಾಡಿದ ಪ್ರಹಸ. ರಾಮಲಿಂಗಾ ರೆಡ್ಡಿ ಕಾಂಗ್ರೆಸ್ ಪಕ್ಷದ ಪ್ರಮುಖ ಹಾಗೂ ಹಿರಿಯ ನಾಯಕ. 8 ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ರಾಮಲಿಂಗಾ ರೆಡ್ಡಿ ಕಾಂಗ್ರೆಸ್ ಪಕ್ಷದ ಆಸ್ತಿ ಎಂದು ಸುರ್ಜೆವಾಲ ಹೇಳಿದ್ದಾರೆ. ಬಿಜೆಪಿ ನಾಯಕರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ರೀತಿಯ ಸುಳ್ಳು ಆರೋಪಗಳು, ಸುಳ್ಳು ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ ಎಂದು ಸುರ್ಜೆವಾಲ ಹೇಳಿದ್ದಾರೆ.
ರಾಮಲಿಂಗಾ ರೆಡ್ಡಿ ರಾಜೀನಾಮೆ ಮಾಹಿತಿ ಹೊರಬೀಳುತ್ತಿದ್ದಂತೆ ನಾನು, ಡಿಕೆ ಶಿವಕುಮಾರ್, ಬಿಕೆ ಹರಿಪ್ರಸಾದ್ ಹಾಗೂ ಸಿದ್ದರಾಮಯ್ಯ ನಾಲ್ವರು ಚರ್ಚಿಸಿದ್ದೇವೆ. ಬಿಕೆ ಹರಿಪ್ರಸಾದ್ ಜೊತೆಗೆ ಸ್ವತಃ ರಾಮಲಿಂಗಾ ರೆಡ್ಡಿ ಮಾತನಾಡಿದ್ದಾರೆ. ಯಾವುದೇ ಗೊಂದಲಗಳಿಲ್ಲ. ರಾಮಲಿಂಗಾ ರೆಡ್ಡಿ ಸಚಿವರಾಗಿ ಮುಂದುವರಿಯುತ್ತಾರೆ ಎಂದು ಸುರ್ಜೆವಾಲ ಹೇಳಿದ್ದಾರೆ.
ಸುದ್ದಿಗೋಷ್ಠಿಗೂ ಮೊದಲು ರಣದೀಪ್ ಸುರ್ಜೆವಾಲ ಜೊತೆ ಮಹತ್ವದ ಚರ್ಚೆ ನಡೆಸಿ ಹೊರಬಂದ ರಾಮಲಿಂಗಾ ರೆಡ್ಡಿ ಮಾಧ್ಯಮ ಜೊತೆ ಯಾವುದೇ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ. ಸಭೆ ಬಳಿಕ ಗರಂ ಆಗಿ ಹೊರಬಂದ ರಾಮಲಿಂಗಾ ರೆಡ್ಡಿ ನನ್ನನ್ನು ಫಾಲೋ ಮಾಡಬೇಡಿ. ಸದ್ಯ ನಾನು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 8 ಗಂಟೆವರೆಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ