
ಬೆಳಗಾವಿ (ನ.3): ರಾಜ್ಯ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ ಎಂಬ ವದಂತಿ ನಡುವೆಯೇ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು 3 ದಿನಗಳ ದೆಹಲಿ ಪ್ರವಾಸಕ್ಕೆ ಹೊರಟಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ. ಅವರು ಸೋಮವಾರ ದೆಹಲಿಗೆ ಹೋಗುವರು ಎಂದು ಮಾಹಿತಿ ಲಭ್ಯವಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಪ್ರವಾಸ ಮುಂದೂಡಿಕೆ ಆಗಿದೆ. ಮಂಗಳವಾರ ಅವರು ದೆಹಲಿಗೆ ತೆರಳುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಲ್ಲಿ ಜಾರಕಿಹೊಳಿ ಅವರು ಯಾರನ್ನು ಭೇಟಿ ಮಾಡಲಿದ್ದಾರೆ ಎನ್ನುವ ಮಾಹಿತಿ ಇನ್ನೂ ಅಧಿಕೃತವಾಗಿ ಹೊರಬಿದ್ದಿಲ್ಲ. ಮೂಲಗಳ ಪ್ರಕಾರ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೇವಾಲ ಅವರನ್ನು ಸೇರಿದಂತೆ ವಿವಿಧ ನಾಯಕರನ್ನು ಭೇಟಿ ಆಗುವ ಸಾಧ್ಯತೆ ಇದೆ. ಆದರೆ ಬಿಹಾರ ಚುನಾವಣೆ ನಡೆಯುತ್ತಿರುವುದರಿಂದ ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಕಷ್ಟ ಸಾಧ್ಯ ಎನ್ನಲಾಗುತ್ತಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ಸಿದ್ದರಾಮಯ್ಯನವರ ನಂತರ ಸತೀಶ್ ಅವರೇ ಅಹಿಂದ ಸಂಘಟನೆಯ ಸಿದ್ಧಾಂತ ಮುಂದುವರಿಸಬೇಕು ಎಂದು ಮಾರ್ಮಿಕವಾಗಿ ನುಡಿದಿದ್ದರು. ಈ ಎಲ್ಲ ಬೆಳವಣಿಗೆ ನಡುವೆಯ ಸತೀಶ್ ಅವರು ದೆಹಲಿಗೆ ಹೊರಟಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ