
ಬೆಂಗಳೂರು(ಜೂ.03): ಕೋವಿಡ್ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ದುಃಖದಲ್ಲಿ ಭಾಗಿಯಾಗಿ, ಅವರ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಅಂತಹ ಮಕ್ಕಳೊಂದಿಗೆ ನಾವಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಇಂದು(ಗುರುವಾರ) ಕೋವಿಡ್-19 ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳು ಹಾಗೂ ಅವರನ್ನು ಪಾಲನೆ ಮಾಡುತ್ತಿರುವ ಪಾಲಕರ ಜೊತೆಗೆ ಗೂಗಲ್ ಮೀಟ್ ಮೂಲಕ ವಿಡಿಯೋ ಸಂವಾದ ನಡೆಸಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ಮಕ್ಕಳನ್ನು ಕಳೆದುಕೊಂಡ ಪಾಲಕರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, ಅವರ ಮನಸ್ಸಿನ ನೋವು, ಸಮಸ್ಯೆಗಳನ್ನು ಮನಗಂಡು, ಸರ್ಕಾರದಿಂದ ನೀಡಲಾಗುವ ನೆರವಿನ ಕುರಿತು ಮಾಹಿತಿ ನೀಡಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಂದೆ ತಾಯಿಗಳನ್ನು ಕಳೆದುಕೊಂಡ 19 ಮಕ್ಕಳ ಜೊತೆಗೆ ಸಚಿವರು ಸುಮಾರು ಮೂರು ಗಂಟೆಗಳ ಕಾಲ ವಿಡಿಯೋ ಸಂವಾದ ನಡೆಸಿದ್ದಾರೆ. ಈ ಅವಧಿಯಲ್ಲಿ ಪ್ರತಿಯೊಬ್ಬ ಮಗುವಿನ ಜೊತೆಗೂ ವೈಯಕ್ತಿಕವಾಗಿ ಚರ್ಚೆ ನಡೆಸಿ, ತಂದೆ ತಾಯಿಗಳನ್ನು ಕಳೆದುಕೊಂಡ ಮಕ್ಕಳ ಪೋಷಕರ ಕಷ್ಟಗಳ ಬಗ್ಗೆ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ಪಡೆದುಕೊಂಡಿದ್ದಾರೆ.
ಅನಾಥ ಮಕ್ಕಳ ಪಾಲಿಗೆ ತಾಯಿಯಾದ ಶಶಿಕಲಾ ಜೊಲ್ಲೆ
ಮಕ್ಕಳಿಗೆ ಸಚಿವರಿಂದ ಕಿವಿ ಮಾತು
ಕಷ್ಟದ ಸಂದರ್ಭದಲ್ಲಿ ಧೃತಿಗೆಡದೆ ಜೀವನದ ಸವಾಲುಗಳನ್ನು ಎದುರಿಸಿ ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬೆಳೆಯುವಂತೆ ಮಕ್ಕಳಿಗೆ ಸಚಿವರು ಕಿವಿ ಮಾತು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವೆ ಶಶಿಕಲಾ ಜೊಲ್ಲೆ, ಪೋಷಕರನ್ನು ಕಳೆದುಕೊಂಡ ಆ ಮಕ್ಕಳ ನೋವು ಕಂಡು ಮನಸ್ಸು ಭಾರವಾಯಿತು. ಹೀಗಾಗಿ ಇಂತಹ ಮಕ್ಕಳಿಗೆ ಯಾವುದೇ ರೀತಿಯಲ್ಲಿ ಪೋಷಕರು ಇಲ್ಲ ಎಂಬ ಕೊರಗು ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದ್ದೇವೆ. ಈಗಾಗಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ‘ಬಾಲ ಸೇವಾ’ ಯೋಜನೆಯನ್ನು ಘೋಷಿಸಿದ್ದಾರೆ. ಸರ್ಕಾರದಿಂದ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಅತೀ ಶೀಘ್ರದಲ್ಲಿ ನೀಡುತ್ತೇವೆ. ಮುಂದೇನಾದರೂ ಅಗತ್ಯವಿದ್ದಲ್ಲಿ ಅಗತ್ಯ ನೆರವು ನೀಡಲು ಸರ್ಕಾದ ಸದಾ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಜಾಗೃತಿ ಕಾರ್ಯಕ್ರಮ:
ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಬಾಲ ಸೇವಾ ಯೋಜನೆಯ ಬಗ್ಗೆ ಪ್ರತಿ ಗ್ರಾಮ ಮಟ್ಟದಲ್ಲಿಯೂ ಎಲ್ಲರಿಗೂ ತಲುಪುವಂತೆ ಮಾಡಲು ಎಲ್ಲ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ಸಾಮಾಜಿಕ ಜಾಲತಾಣ ಹಾಗೂ ಇತರ ಮಾಧ್ಯಮಗಳ ಮೂಲಕ ಜನರಿಗೆ ಮಾಹಿತಿ ಒದಗಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಮಾಸಿಕ 3500 ರೂ. ನೀಡುವುದು. 10 ವರ್ಷದ ಒಳಗಿನ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ವಸತಿ ಶಾಲೆಗಳಲ್ಲಿ ವ್ಯವಸ್ಥೆ ಕಲ್ಪಿಸುವುದು ಹಾಗೂ 21 ವರ್ಷ ಪೂರೈಸಿರುವ ತಂದೆ ತಾಯಿಗಳನ್ನು ಕಳೆದುಕೊಂಡ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ಸಹಾಯಧನವನ್ನು ನೇರವಾಗಿ ಅವರ ಅಕೌಂಟ್ಗೆ ತಲುಪಿಸಲು ಇಲಾಖೆಯಿಂದ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆ ಅನುಷ್ಠಾನದಲ್ಲಿ ಯಾವುದೇ ರೀತಿಯ ಮಧ್ಯವರ್ತಿಗಳ ಹಾವಳಿಯಾಗದಂತೆ ಕ್ರಮ ವಹಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಪಲ್ಲವಿ ಆಕೃತಿ, ನೋಡಲ್ ಅಧಿಕಾರಿಗಳಾದ ಮೋಹನರಾಜ, ವಿವಿಧ ಜಿಲ್ಲೆಗಳ ಡಿ.ಸಿ.ಪಿ.ಓ. ಹಾಗೂ ಸಿ.ಡಿ.ಪಿ.ಓ ಅಧಿಕಾರಿಗಳು ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ