188 ವಿಧಾನಸಭಾ ಕ್ಷೇತ್ರದಲ್ಲಿ 97,134 ಮನೆಗಳ ನಿರ್ಮಾಣ ಕಾಮಗಾರಿಯನ್ನು ಸೆ.16ರೊಳಗೆ ಪ್ರಾರಂಭಿಸಲು ತೀರ್ಮಾನ| ರಾಜೀವ್ ಗಾಂಧಿ ವಸತಿ ನಿಗಮದಲ್ಲಿ 1.56 ಲಕ್ಷ ಮನೆಗಳನ್ನು ನೀಡಲು ತೀರ್ಮಾನ|
ಬೆಂಗಳೂರು(ಸೆ.05): ಕೇಂದ್ರ ಸರ್ಕಾರವು 1.80 ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರು ಮಾಡಿ ನಾಲ್ಕು ವರ್ಷ ಕಳೆದರೂ ಫಲಾನುಭವಿಗಳಿಗೆ ಯೋಜನೆಯನ್ನು ಸಮರ್ಪಕವಾಗಿ ತಲುಪಿಸಲು ಸಾಧ್ಯವಾಗಿರಲಿಲ್ಲ. ಇದೀಗ 34,900 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಿದ್ದೇವೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಶೀಘ್ರದಲ್ಲಿಯೇ 34,900 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗುವುದು. 188 ವಿಧಾನಸಭಾ ಕ್ಷೇತ್ರದಲ್ಲಿ 97,134 ಮನೆಗಳ ನಿರ್ಮಾಣ ಕಾಮಗಾರಿಯನ್ನು ಸೆ.16ರೊಳಗೆ ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದಲ್ಲಿ 1.56 ಲಕ್ಷ ಮನೆಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಸೂರು ಇಲ್ಲದವರು ಮನೆ ಕಟ್ಟಿಸಿಕೊಳ್ಳಲು 5 ಲಕ್ಷ: ವಸತಿ ಸಚಿವ ವಿ.ಸೋಮಣ್ಣ
ಗ್ರಾಮೀಣ ಭಾಗದ ಬಡ ಜನತೆಗಾಗಿ ಒಂದು ಗ್ರಾಮ ಪಂಚಾಯತ್ಗೆ ತಲಾ 20 ಮನೆಗಳನ್ನು ನೀಡಲು ನಿರ್ಧರಿಸಲಾಗಿದೆ. 1700ಕ್ಕೂ ಹೆಚ್ಚು ಕೊಳಗೇರಿಯಲ್ಲಿ 3.12 ಲಕ್ಷ ಮನೆಗಳನ್ನು ಸಕ್ರಮಗೊಳಿಸಲಾಗುತ್ತಿದೆ. ಏಳು ಸಾವಿರ ಎಕರೆಯಲ್ಲಿ ಮೂಲಭೂತ ಸೌಕರ್ಯ ನೀಡಲು ಕ್ರಮ ಕೈಗೊಳ್ಳಲಾಗುವುದು. 3.16 ಕುಟುಂಬಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದರು.
ರಾಜ್ಯದ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮಾಡಬೇಕು ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ. ಅವರು ಎಲ್ಲವನ್ನೂ ನಿಭಾಯಿಸುತ್ತಾರೆ. ವಸತಿ ಇಲಾಕೆಗೆ ಹಣ ಕೊರತೆ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.