Karnataka Politics: ಕುರ್ಚಿಗೆ ಅಂಟಿಕೊಂಡ ಹೇಡಿ ಸಿದ್ದರಾಮಯ್ಯ: ಸಿಎಂ ವಿರುದ್ಧ ಜನಾರ್ದನ ರೆಡ್ಡಿ ಕಿಡಿ

Kannadaprabha News, Ravi Janekal |   | Kannada Prabha
Published : Feb 11, 2026, 11:07 AM IST
MLA janardana reddy on sasikanth senthil

ಸಾರಾಂಶ

ಶಾಸಕ ಜನಾರ್ದನ ರೆಡ್ಡಿ, ಹೈಕಮಾಂಡ್ ಕೃಪೆಯಿಂದ ಕುರ್ಚಿಗೆ ಅಂಟಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಹೇಡಿ ಎಂದು ಟೀಕಿಸಿದ್ದಾರೆ. ಸಿಎಂ-ಡಿಸಿಎಂ ಅಧಿಕಾರ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು, ಜನ ಸರ್ಕಾರದಿಂದ ರೋಸಿ ಹೋಗಿದ್ದಾರೆ ಎಂದರು.

ಹೊಸಪೇಟೆ(ಫೆ.11): ಧೀರನಾಗಿ, ಶೂರನಾಗಿದ್ದರೆ ಸ್ವಂತ ಬಲದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯಬೇಕು. ಆದರೆ, ಹೈಕಮಾಂಡ್ ಹೇಳಿದರೆ ಕುರ್ಚಿ ಬಿಟ್ಟು ಬಿಡುತ್ತೇನೆ ಎಂದು ಹೇಡಿತನದ ಮಾತನಾಡುತ್ತಾ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಲೇವಡಿ ಮಾಡಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಹಳ ಹಗುರವಾಗಿ ಮಾತಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಂತೂ ಹೇಡಿಯಲ್ಲ. ಸಿದ್ದರಾಮಯ್ಯನವರೇ ಹೇಡಿ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾರೇ ಮಾತನಾಡಿದರೆ ಸಿದ್ದರಾಮಯ್ಯನವರು ಮಾತೆತ್ತಿದರೆ ಹೈಕಮಾಂಡ್‌ ಕುರಿತು ಹೇಳುತ್ತಾ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡಿದ್ದಾರೆ. ಸಿದ್ದರಾಮಯ್ಯನವರು ಇನ್ನು ಮುಂದೆಯೂ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಕೆಲ ತಿಂಗಳಿಂದ ನಡೆಯುತ್ತಿರುವ ಕುರ್ಚಿ ಕಿತ್ತಾಟದಿಂದ ಕಾಂಗ್ರೆಸ್ ಶಾಸಕರು ಹಾಗೂ ಅಧಿಕಾರಿಗಳು ಗೊಂದಲದಲ್ಲಿ ಸಿಲುಕಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಎಲ್ಲ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎನ್ನುವ ಅನುಮಾನಗಳು ಜನರಲ್ಲಿ ಇವೆ. ಈ ಸರ್ಕಾರದ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಮತ್ತೆ ಬಿಜೆಪಿಯನ್ನೇ ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎಂದು ರಾಜ್ಯದ ಜನರು ಕಾಯುತ್ತಿದ್ದಾರೆ. 2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯವಾಗಿದೆ ಎಂದರು.

ನನಗೆ ರಾಜಕೀಯವಾಗಿ ಪುನರ್ಜನ್ಮ ನೀಡಿದ ಗಂಗಾವತಿ ಕ್ಷೇತ್ರವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ನಾನು ಗಂಗಾವತಿಯ ಕ್ಷೇತ್ರದಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವೆ. ಹೊಸಪೇಟೆಗೆ ನಾನು ಬಂದರೆ ಏನೋ ಹೊಸತನ ಮತ್ತು ಹೊಸ ಹುಮ್ಮಸ್ಸು ಅರಳಿಸುತ್ತದೆ. ನಾನು ಸಚಿವನಾಗಿದ್ದಾಗ ಹಂಪಿ ಮತ್ತು ಹೊಸಪೇಟೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆದಿವೆ. ಅವೆಲ್ಲವೂ ಈಗ ಕಣ್ಣುಮುಂದೆ ಕಾಣುತ್ತಿವೆ ಎಂದು ಹಿಂದಿನ ತಮ್ಮ ಅಧಿಕಾರದ ದಿನಗಳನ್ನು ಸ್ಮರಿಸಿಕೊಂಡರು.

ನಾನು ಸಚಿವನಾಗಿದ್ದಾಗ ಹಂಪಿಯಲ್ಲಿ ಥೀಮ್‌ ಪಾರ್ಕ್‌ ನಿರ್ಮಿಸುವ ಕನಸು ಆಗಿತ್ತು. ಹೊಸಪೇಟೆ ಮತ್ತು ಬಳ್ಳಾರಿ ಮಧ್ಯೆ ವಿಮಾನ ನಿಲ್ದಾಣ ನಿರ್ಮಿಸಿ, ವಿಮಾನ ನಿಲ್ದಾಣದಿಂದಲೇ ನೇರವಾಗಿ ಹಂಪಿಗೆ ಉತ್ತಮ ರಸ್ತೆಯನ್ನು ಅಭಿವೃದ್ಧಿ ಪಡಿಸಿ, ಹಂಪಿಗೆ ದೇ‍ಶ, ವಿದೇಶ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ನಿತ್ಯ ಬರುವಂತಹ ವ್ಯವಸ್ಥೆ ರೂಪಿಸಲಾಗಿತ್ತು. ಹಂಪಿಯಲ್ಲಿ ಹಂಪಿ ಬೈ ಸ್ಕೈ ಯೋಜನೆ ಸಿದ್ಧಪಡಿಸ

ಲಾಗಿತ್ತು. ಅದನ್ನು ಈಗ ಮುಂದುವರೆಸಿಕೊಂಡು ಹೋಗುತ್ತಿಲ್ಲ ಎಂದು ಅವರು ಹೇಳಿದರು.

ಬಳ್ಳಾರಿಯಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯ ಬಗ್ಗೆ ನನಗೆ ನಂಬಿಕೆಯೇ ಇಲ್ಲ. ದಾಖಲೆಗಳನ್ನು ಸಂಗ್ರಹಿಸಿದ್ದು, ಸಿಬಿಐ ತನಿಖೆ ವಹಿಸಬೇಕು ಎಂದು ಕೋರಿ ಇನ್ನು ಎರಡು ದಿನದಲ್ಲಿ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಲಿದ್ದೇನೆ ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Koppal: ಗವಿಸಿದ್ದೇಶ್ವರ ಮಠದ ಶಾಖೆಗಳಿಗೆ ಉತ್ತರಾಧಿಕಾರಿಗಳ ನೇಮಕ
ತಮನ್ನಾ ಬರ್ತಿದ್ದಂತೆ 22 ವರ್ಷ ಹಿಂದಿನ ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತು ವೈರಲ್