14 ಸೈಟ್ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ,ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ!

Published : Sep 30, 2024, 10:12 PM ISTUpdated : Sep 30, 2024, 10:24 PM IST
14 ಸೈಟ್ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ,ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ!

ಸಾರಾಂಶ

ಮುಡಾ ಪ್ರಕರಣದಲ್ಲಿ ಇಡಿ ಮದ್ಯ ಪ್ರವೇಶಿಸುತ್ತಿದ್ದಂತೆ ಮಹತ್ವದ ಬೆಳವಣಿಯಾಗಿದೆ. ಪಡೆದಿರುವ 14 ಸೈಟ್ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ನಿರ್ಧರಿಸಿದ್ದಾರೆ. 

ಬೆಂಗಳೂರು(ಸೆ.30) ಮುಡಾ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಒಂದೆಡೆ ಲೋಕಾಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಇತ್ತ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬರುತ್ತಿರುವ ಕಾರಣ ಜಾರಿ ನಿರ್ದೇಶನಾಲಯ(ಇಡಿ) ಮುಡಾ ಪ್ರಕರಣದ ಮಧ್ಯಪ್ರವೇಶಿದೆ. ಇಡೀ ಎಂಟ್ರಿಕೊಡುತ್ತಿದ್ದಂತೆ ಪ್ರಕರಣದ ಗಂಭೀರತೆ ಹಾಗೂ ವ್ಯಾಪ್ತಿ ವಿಸ್ತಾರಗೊಂಡಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಪತ್ನಿ ಪಾರ್ವತಿ ಇದೀಗ ಪಡೆದಿರುವ 14 ಸೈಟ್‌ಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದಾರೆ. 

ಸೈಟ್ ಹಿಂದಿರುಗಿಸುವ ಕುರಿತು ಸಿದ್ದರಾಮಯ್ಯ ಪತ್ನಿ ಪಾರ್ವತಿ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಸೈಟ್ ಪಡೆದಿರುವ ಹಾಗೂ ಇದೀಗ ಹಿಂದಿರುಗಿಸುತ್ತಿರುವ ಕಾರಣವನ್ನು ಪಾರ್ವತಿ ವಿವರಿಸಿದ್ದಾರೆ. ಆದರೆ ಮುಡಾ ಸೈಟ್‌ನಿಂದ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಎದುರಾಗಿರುವ ಕಾರಣ ಸಿದ್ದರಾಮಯ್ಯ ಪತ್ನಿ ಪಾರ್ವತಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಅನ್ನೋ ಮಾತಗಳು ಕೇಳಿಬಂದಿದೆ. 

ಸಿದ್ದು ಸುತ್ತ ತ್ರಿಶೂಲ ವ್ಯೂಹ! ಆ 16 ಪುಟಗಳ ದೂರಿನಲ್ಲಿರೋ ರಹಸ್ಯವೇನು?

ಸಿದ್ದರಾಮಯ್ಯ ಪತ್ನಿ ಪಾರ್ವತಿ ತಮ್ಮ ಪತ್ರದಲ್ಲಿ ಕೆಲ ಮಹತ್ವದ ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು.

ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ - ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ.

ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ. ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ.

ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

ಮುಡಾ ಕೇಸಿಗೆ ಎಂಟ್ರಿಕೊಟ್ಟ ಇಡಿ; ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ!

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ.

ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಪಾರ್ವತಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು
Karnataka Winter Session: ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿಧೇಯಕಗಳು