
ಶಿವಮೊಗ್ಗ (ಡಿ.05): ರಾಜ್ಯದಲ್ಲಿ ಮುಸ್ಲಿಂ ಮಹಿಳಾ ಕಾಲೇಜುಗಳನ್ನು ತೆರೆಯಲು ಅವಕಾಶ ಇಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಅವರೇ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಒಂದೇ ಒಂದು ಮುಸ್ಲಿಂ ಕಾಲೇಜಿಗೆ ಅನುಮತಿ ಕೊಡುವುದಿಲ್ಲ ಎಂದಿದ್ದಾರೆ. ಹಾಗಾದರೆ ಮುಖ್ಯಮಂತ್ರಿ ಅವರ ಮಾತು ನಂಬಬೇಕಾ? ಯಾರೋ ಅಟೆಂಡರ್ ಮಾತು ನಂಬಬೇಕಾ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆ ಆಗುವುದಿಲ್ಲ.
ಮುಸ್ಲಿಂ ಕಾಲೇಜು ಸ್ಥಾಪನೆಯ ಪ್ರಸ್ತಾವನೆಯೇ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಿದ್ದಾರೆ. ಹೀಗಿರುವಾಗ, ಯಾವುದೋ ಅಟೆಂಡರ್ ಹೇಳುವ ಮಾತುಗಳಿಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆ ಆಗುವುದಿಲ್ಲ ಎಂದರು. ರಾಜ್ಯಪಾಲರ ದೀಢೀರ್ ಶಿವಮೊಗ್ಗ ಭೇಟಿ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಪಾಲರು ಕಾರವಾರದಿಂದ ಬೆಂಗಳೂರಿಗೆ ಹೆಲಿಕಾಪ್ಟರ್ ಮೂಲಕ ಹೋಗುತ್ತಿದ್ದರು. ಮಾರ್ಗ ಮಧ್ಯೆ ಇಂಧನ ತುಂಬಿಸಿಕೊಳ್ಳಲು ಶಿವಮೊಗ್ಗದಲ್ಲಿ ಇಳಿದಿತ್ತು. ಶಿವಮೊಗ್ಗದ ಜನತೆ ಪರವಾಗಿ ಅವರಿಗೆ ಶಾಲು ಹೊದೆಸಿ ಸನ್ಮಾನಿಸಿದ್ದೇನೆ ಎಂದರು.
ಸಿದ್ದರಾಮಯ್ಯ ‘ನಾನು’ ಎಂಬ ಅಹಂಕಾರ ಬಿಡಲಿ: ಈಶ್ವರಪ್ಪ
ಭದ್ರಗಿರಿ ದೇವಸ್ಥಾನ ಜಾಗದ ಸಮಸ್ಯೆ ಬಗೆಹರಿಸಿಕೊಳ್ಳಲು ಹೋರಾಟ ಅಗತ್ಯ: ತರೀಕೆರೆ ರಸ್ತೆಯ ಶ್ರೀ ಶಿವಸುಬ್ರಹ್ಮಣ್ಯಸ್ವಾಮಿ(ಮಠ) ಆಶ್ರಮದ ಎಂ.ಸಿ ಹಳ್ಳಿಯ ಶ್ರೀ ಕ್ಷೇತ್ರ ಭದ್ರಗಿರಿ ದೇವಸ್ಥಾನದ ಜಾಗಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆಯನ್ನು ಸರ್ಕಾರ ತಕ್ಷಣ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು. ಸೋಮವಾರ ಶ್ರೀ ಕ್ಷೇತ್ರದಲ್ಲಿ ಶ್ರೀ ಭದ್ರಗಿರಿ ಸಿದ್ದರ್ ಮಹಾ ಸ್ವಾಮೀಜಿ (ದವತ್ತಿರು ಸ್ವಾಮೀಜಿ)ಯವರ 6ನೇ ವರ್ಷದ ಗುರುಪೂಜೆ ಮತ್ತು ಪುತ್ಥಳಿ ಪ್ರತಿಷ್ಠಾಪನೆ ಹಾಗೂ ಕಾರ್ತಿಕ ದೀಪೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುರುವಂದನೆ ಮತ್ತು ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು.
ಶ್ರೀ ಕ್ಷೇತ್ರದ ಜಾಗಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ದೃಢಸಂಕಲ್ಪ ಕೈಗೊಳ್ಳಬೇಕಾಗಿದೆ. ಈ ಮೂಲಕ ಭವಿಷ್ಯದಲ್ಲಿ ಶ್ರೀ ಕ್ಷೇತ್ರ ಮತ್ತಷ್ಟುಅಭಿವೃದ್ಧಿ ಹೊಂದುವಂತಾಗಲಿ ಎಂದರು. ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ತಮಿಳು ಸಮಾಜ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಈ ಸಮಾಜದ ಏಳಿಗೆಗೆ ಬದ್ಧವಾಗಿದ್ದೇನೆ. ಬಿಎಸ್ವೈ ಇಎಂ ಆಗಿದ್ದಾಗ ತಮಿಳುನಾಡಿನೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಿಕೊಂಡಿದ್ದರು. ಪ್ರಸ್ತುತ ಶ್ರೀ ಕ್ಷೇತ್ರದ ಜಾಗಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆಯನ್ನು ಸಹ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.
ಸ್ಮಾರ್ಟ್ ಸಿಟಿ ಕಾಮಗಾರಿಗಳ ಬಗ್ಗೆ ತೃಪ್ತಿಯಿದೆ: ಕೆ.ಎಸ್.ಈಶ್ವರಪ್ಪ
ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಚನ್ನಗಿರಿ ಪಾಂಡೋಮಟ್ಟಿ ವಿರಕ್ತಮಠದ ಶ್ರೀ ಗುರುಬಸವ ಸ್ವಾಮೀಜಿ, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಸ್ವಾಮಿ ವಿವೇಕಾನಂದ, ಮಹಾತ್ಮಗಾಂಧಿ, ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹಾನ್ ಆದರ್ಶ ವ್ಯಕ್ತಿಗಳು, ಸಾಧು-ಸಂತರು ಜನಿಸಿರುವ ದೇಶ ನಮ್ಮದಾಗಿದೆ. ಇಂತಹ ಪುಣ್ಯ ನೆಲದಲ್ಲಿ ನಮ್ಮ ನಡೆ-ನುಡಿ, ಚಿಂತನೆಗಳು ಬದಲಾಗಿವೆ. ಸಮಾಜಕ್ಕೆ ಅನನ್ಯ ಸೇವೆ ನೀಡಿರುವವರನ್ನು ಸ್ಮರಿಸಿ ಅವರಿಗೆ ಗೌರವ ನೀಡುವ ಕೃತಜ್ಞತಾ ಭಾವನೆ ಸಹ ಇಲ್ಲವಾಗಿರುವುದು ವಿಷಾದಕರ ಸಂಗತಿಯಾಗಿದೆ ಎಂದರು. ಚಿತ್ರದುರ್ಗ ಬಂಜಾರ ಮಠದ ಪೀಠಾಧ್ಯಕ್ಷರಾದ ಶ್ರೀ ಸೇವಾಲಾಲ್ ಸರ್ದಾರ್ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀ ಕ್ಷೇತ್ರದ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಎ. ಚಂದ್ರಘೋಷನ್ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ