‘ಹೂ’ ಮಳೆಯಲ್ಲಿ ಶಿಸ್ತುಬದ್ಧ ದಸರಾ ಜಂಬೂಸವಾರಿ: ಸತತ 6ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು!

Published : Oct 03, 2025, 05:59 AM IST
Mysuru Dasara 2025

ಸಾರಾಂಶ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಯು ಗುರುವಾರ ಹೂ ಮಳೆಯೂ ನಡುವೆಯು ಅತ್ಯಂತ ಶಿಸ್ತುಬದ್ಧ ಹಾಗೂ ಅದ್ಧೂರಿಯಾಗಿ ನಡೆದು ಲಕ್ಷಾಂತರ ಮಂದಿಯ ಮನಸೂರೆಗೊಂಡಿತು.

ಅಂಶಿ ಪ್ರಸನ್ನಕುಮಾರ್‌

ಮೈಸೂರು (ಅ.03): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ‘ಜಂಬೂಸವಾರಿ’ಯು ಗುರುವಾರ ಹೂ ಮಳೆಯೂ ನಡುವೆಯು ಅತ್ಯಂತ ಶಿಸ್ತುಬದ್ಧ ಹಾಗೂ ಅದ್ಧೂರಿಯಾಗಿ ನಡೆದು ಲಕ್ಷಾಂತರ ಮಂದಿಯ ಮನಸೂರೆಗೊಂಡಿತು. ಈ ಬಾರಿ ಹೆಚ್ಚು ಬಿಸಿಲಿಲ್ಲದ ಆಹ್ಲಾದಕರ ವಾತಾವರಣದಲ್ಲಿ ಜಂಬೂಸವಾರಿ ಆರಂಭವಾಯಿತಾದರೂ ನಂತರ ಮೂರು ಬಾರಿ ಹೂ ಮಳೆ. ಒಮ್ಮೆ ಸ್ವಲ್ಪ ಜೋರು ಹನಿಗಳು ಬಿದ್ದವು. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಮೆರವಣಿಗೆಯು ಅತ್ಯಂತ ಶಿಸ್ತುಬದ್ಧವಾಗಿ ನಡೆಯಿತು.

ಅರಮನೆಯ ಉತ್ತರದಲ್ಲಿರುವ ‘ಬಲರಾಮ’ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 1ರಿಂದ 1.18ರವರೆಗೆ ಸಲ್ಲುವ ಶುಭ ಧನುರ್‌ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿಸಿದರು. ಸತತ ಆರನೇ ಬಾರಿಗೆ 750 ಕೇಜಿ ತೂಕದ ಚಿನ್ನದ ಅಂಬಾರಿಯನ್ನು ಗಜರಾಜ ‘ಅಭಿಮನ್ಯು’ ಹೊತ್ತು ಸಂಗಾತಿಗಳಾದ ‘ಕಾವೇರಿ’ ಹಾಗೂ ‘ರೂಪಾ’ ಜೊತೆ ಗಾಂಭಿರ್ಯದಿಂದ ಹೆಜ್ಜೆ ಹಾಕುತ್ತಾ ಅರಮನೆ ಆವರಣದ ವಿಶೇಷ ವೇದಿಕೆ ಎದುರು ಬಂದವು. ಸಂಜೆ 4.44ರಲ್ಲಿ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ನೆರವೇರಿಸಿದರು.

ಪುಷ್ಪಾರ್ಚನೆ ಆಗುತ್ತಿದ್ದಂತೆಯೇ 21 ಸುತ್ತು ಕುಶಾಲತೋಪುಗಳನ್ನು ಸಿಡಿಸಿ, ರಾಷ್ಟ್ರಗೀತೆ ನುಡಿಸಲಾಯಿತು. ನಂತರ ಅಂಬಾರಿ ಆನೆಯು ಪೊಲೀಸ್‌ ಅಶ್ವದಳದ ಬೆಂಗಾವಲಿನಲ್ಲಿ ಸಾಗಿ, ರಾಜರ ಕಾಲದ ಗತವೈಭವವನ್ನು ನೆನಪಿಸಿತು. ಮೆರವಣಿಗೆಯು ಅರಮನೆಯಿಂದ ಸಂಪೂರ್ಣವಾಗಿ ಹೊರಗೆ ಹೋಗಲು ಸುಮಾರು ಎರಡು ತಾಸು ಬೇಕಾಯಿತು. ಚಾಮರಾಜ ವೃತ್ತ, ಕೃಷ್ಣರಾಜ ವೃತ್ತ, ಸಯ್ಯಾಜಿರಾವ್‌ ರಸ್ತೆ, ಆಯುರ್ವೇದ ಕಾಲೇಜು ವೃತ್ತ, ನ್ಯೂ ಸಯ್ಯಾಜಿರಾವ್‌ ರಸ್ತೆ, ಹೈವೆ ವೃತ್ತದ ಮೂಲಕ ಐದು ಕಿ.ಮೀ. ದೂರದ ಬನ್ನಿಮಂಟಪ ತಲುಪಿತು.

ದಸರಾ ಮಹೋತ್ಸವಕ್ಕೆ ತೆರೆ

ಅರಮನೆ ಆವರಣದಲ್ಲಿ ಮಾತ್ರವಲ್ಲದೇ ಮೆರವಣಿಗೆ ಸಾಗಿದ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ ನಿಂತು, ಮೆರವಣಿಗೆಯನ್ನು ಕಣ್ತುಂಬಿಕೊಂಡರು. ಸಂಜೆ ಬನ್ನಿಮಂಟಪದಲ್ಲಿ ಚಿತ್ತಾಕರ್ಷಕ ಪಂಜಿನ ಕವಾಯತು ನಡೆಯಿತು. ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಗೌರವ ವಂದನೆ ಸ್ವೀಕರಿಸಿದರು. ಇದರೊಂದಿಗೆ ಕಳೆದ ಹನ್ನೊಂದು ದಿನಗಳಿಂದ ನಡೆಯತ್ತಿದ್ದ ದಸರಾ ಮಹೋತ್ಸವಕ್ಕೆ ತೆರೆ ಬಿದ್ದಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌