ಕರ್ನಾಟಕದಲ್ಲಿ ಇನ್ನೂ 4-5 ದಿನಗಳ ಕಾಲ ಮಳೆಯಾಗುವ ಮೂನ್ಸೂಚನೆ

By Govindaraj SFirst Published Sep 2, 2022, 3:15 AM IST
Highlights

ಈಗಾಗಲೇ ಭಾರಿ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಮೂನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮಂಗಳವಾರದ ತನಕ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು (ಸೆ.02): ಈಗಾಗಲೇ ಭಾರಿ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಮೂನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮಂಗಳವಾರದ ತನಕ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಿರಲಿದೆ.

ಶುಕ್ರವಾರ ಬೆಳಗ್ಗೆ 8.30ರ ತನಕ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್‌ ಅಲರ್ಟ್‌ (11.5 ಸೆಂ.ಮೀ ನಿಂದ 20.5 ಸೆಂ.ಮೀ) ನೀಡಲಾಗಿದೆ. ಉಳಿದಂತೆ ಬೀದರ್‌, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಉತ್ತರಕನ್ನಡ, ಹಾವೇರಿ, ದಾವಣಗೆರೆ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್‌ (6.5 ಸೆಂ.ಮೀ ನಿಂದ 11.5 ಸೆಂ.ಮೀ) ನೀಡಲಾಗಿದೆ.

Bengaluru Rain: ಸಂಜೆ 4 ಗಂಟೆಗೆ ಸಿಎಂ ಬೊಮ್ಮಾಯಿ‌ ಸಿಟಿ ರೌಂಡ್ಸ್

ಶುಕ್ರವಾರದಿಂದ ಶನಿವಾರ ಬೆಳಗ್ಗೆ 8.30ರ ತನಕ ಮಲೆನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿಗೆ, ಶನಿವಾರದಿಂದ ಭಾನುವಾರ ಬೆಳಗ್ಗೆ 8.30ರ ತನಕ ಮಲೆನಾಡಿನ ಜಿಲ್ಲೆಗಳ ಜೊತೆಗೆ ಮೈಸೂರು, ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಭಾನುವಾರದಿಂದ ಸೋಮವಾರ ಬೆಳಗ್ಗೆ 8.30ರ ತನಕ ಕರಾವಳಿ, ಮಲೆನಾಡು ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜ ನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ಭಾರಿ ಮಳೆ ಅಪ್ಪಳಿಸಲಿದೆ.

ಆದರೆ ಸೋಮವಾರದ ಬಳಿಕ ಮಳೆ ಇನ್ನಷ್ಟುವ್ಯಾಪಕವಾಗಲಿದ್ದು ಮಲೆನಾಡು, ಕರಾವಳಿ ಜಿಲ್ಲೆಗಳ ಜೊತೆಗೆ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರು ರಾಜಕಾಲುವೆ ನಿರ್ಮಾಣಕ್ಕೆ 1500 ಕೋಟಿ ಬಿಡುಗಡೆ: ಸಿಎಂ ಬೊಮ್ಮಾಯಿ

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಉತ್ತರ ಒಳನಾಡಿನಲ್ಲಿ ಮಾನ್ಸೂನ್‌ ತೀವ್ರವಾಗಿತ್ತು, ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು. ಕರಾವಳಿಯ ಬಹುತೇಕ ಕಡೆ ಮಳೆಯಾಗಿದೆ. ಶಿವಮೊಗ್ಗದ ಆನವಟ್ಟಿಯಲ್ಲಿ 18 ಸೆಂ. ಮೀ., ಚಿಕ್ಕಮಗಳೂರಿನ ಜಯಪುರ 9, ಉತ್ತರ ಕನ್ನಡದ ಜಗಲ್‌ಪೆಟ್‌ 8, ಯಲ್ಲಾಪುರ, ಸಿದ್ದಾಪುರ ಬೆಳಗಾವಿಯ ಬೈಲಹೊಂಗಲದಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.

click me!