
ಬೆಂಗಳೂರು (ಜು.20): ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಅಜ್ಜಿ ಚನ್ನಮ್ಮ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಜೈಲು ಮುಖ್ಯ ಅಧೀಕ್ಷಕರಿಗೆ ತುರ್ತು ಪೆರೋಲ್ ನೀಡುವಂತೆ ಅರ್ಜಿ ಸಲ್ಲಿಸಿಲ್ಲ ಎಂದು ಜೈಲಿನ ಮೂಲಗಳು ತಿಳಿಸಿವೆ. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಜೈಲು ಮುಖ್ಯ ಅಧೀಕ್ಷಕರಿಗೆ ತುರ್ತು ಪೆರೋಲ್ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿತ್ತು. ಆದರೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿಲ್ಲ ಎಂದು ಜೈಲಿನ ಮೂಲಗಳು ಸ್ಪಷ್ಟಪಡಿಸಿವೆ. ಪ್ರಜ್ವಲ್ ರೇವಣ್ಣ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.
ಇಹಲೋಕ ತ್ಯಜಿಸಿದ ತಮ್ಮ ಪತ್ನಿ ಚನ್ನಮ್ಮ ಅವರ ಪಾರ್ಥಿವ ಶರೀರದ ಮುಂದೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭಾನುವಾರ ತಮ್ಮ ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ದುಃಖೋನ್ಮಾದದಿಂದ ಕಣ್ಣೀರಧಾರೆ ಹರಿಸಿದರು. ಅಂತಿಮ ದರ್ಶನದ ಬಳಿಕ ಚನ್ನಮ್ಮ ಅವರ ಪಾರ್ಥಿವ ಶರೀರ ಹೊಳೆನರಸೀಪುರದತ್ತ ಪಯಣ ಬೆಳೆಸಿತು. ಸೋಮವಾರ ಅಂತ್ಯಕ್ರಿಯೆ ಗೌಡರ ಹುಟ್ಟೂರು ಹರದನಹಳ್ಳಿ ಸಮೀಪದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನ ಕ್ಯಾತನಹಳ್ಳಿ ಬಳಿ ಇರುವ ಸ್ವಂತ ಜಮೀನಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಚನ್ನಮ್ಮ ಪಾರ್ಥಿವ ಶರೀರವನ್ನು ಭಾನುವಾರ ಬೆಂಗಳೂರಿನಿಂದ ಅವರ ಸ್ವಗ್ರಾಮ ಹಾಸನ ಜಿಲ್ಲೆಯ ಹರದನಹಳ್ಳಿಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ನೆಲಮಂಗಲದ ಬಳಿ ಅಂತಿಮ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಜನಸಾಗರವೇ ಹರಿದುಬಂದಿತ್ತು.
ನೆಲಮಂಗಲ ಕುಣಿಗಲ್ ಬೈಪಾಸ್ ಬಳಿ ಸಾರ್ವಜನಿಕರ ದರ್ಶನಕ್ಕಾಗಿ ವಿಶೇಷ ಪೆಂಡಾಲ್ಹಾಕಿ ವ್ಯವಸ್ಥೆ ಮಾಡಲಾಗಿತ್ತು. ಗೊರಗುಂಟೆಪಾಳ್ಯ, ನೆಲಮಂಗಲ ಹಾಗೂ ಸೋಲೂರು ಮಾರ್ಗವಾಗಿ ಪಾರ್ಥಿವ ಶರೀರ ಹೊತ್ತ ವಾಹನ ಸಾಗುತ್ತಿದ್ದಂತೆ ರಸ್ತೆಯ ಎರಡೂ ಬದಿಗಳಲ್ಲಿದ್ದ ಸಾವಿರಾರು ಸಾರ್ವಜನಿಕರು ಪುಷ್ಪವೃಷ್ಟಿ ಸುರಿಸಿದರು. ಜಮಾಯಿಸಿದ್ದ ಅಭಿಮಾನಿಗಳು, ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾವುಕರಾಗಿ ತಮ್ಮ ನೆಚ್ಚಿನ ''''ಅಮ್ಮ''''ನಿಗೆ ಅಂತಿಮ ನಮನ ಸಲ್ಲಿಸಿದರು.
ಆದರ್ಶ ದಂಪತಿಗಳಾಗಿ ಇಡೀ ಕುಟುಂಬಕ್ಕೆ ನೆರಳಾಗಿದ್ದ ಮಾತೃ ಚನ್ನಮ್ಮ ಅವರ ಅಗಲಿಕೆ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಸಾರ್ವಜನಿಕರು ಕಂಬನಿ ಮಿಡಿದರು. ಇದೇ ವೇಳೆ ತಮ್ಮ ನೆಚ್ಚಿನ ನಾಯಕ ಎಚ್.ಡಿ.ದೇವೇಗೌಡರ ಕಾರನ್ನು ಸುತ್ತುವರಿದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಭಾವುಕರಾಗಿ ಸಾಂತ್ವನ ಹೇಳಿದರು.
ಚನ್ನಮ್ಮ ದೇವೇಗೌಡರ ಅಂತಿಮ ದರ್ಶನ ಪಡೆಯಲು ನೆಲಮಂಗಲದಲ್ಲಿ ಪಕ್ಷಾತೀತವಾಗಿ ಮುಖಂಡರು, ಕಾರ್ಯಕರ್ತರು ಧಾವಿಸಿ ಬಂದು ಅಂತಿಮ ನಮನ ಸಲ್ಲಿಸಿದರು. ಮಾಜಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಪಾರ್ಥಿವ ಶರೀರಕ್ಕೆ ಪುಪ್ಪಾರ್ಚನೆ ಮಾಡಿ ಭಾವಪೂರ್ಣ ಗೌರವ ಸಮರ್ಪಿಸಿದರು.
ಬಮೂಲ್ ನಿರ್ದೇಶಕ ಭವಾನಿ ಶಂಕರ್ ಬೈರೇಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ತಿಮ್ಮರಾಯಪ್ಪ, ಕರವೇ ರಾಜ್ಯ ಉಪಾಧ್ಯಕ್ಷ ಉಮೇಶ್ ಗೌಡ, ನಗರಸಭೆ ಸದಸ್ಯರಾದ ಅಂಜನಮೂರ್ತಿ, ಸುನಿಲ್ ಮೂಡ್, ವಕೀಲರ ಸಂಘದ ಅಧ್ಯಕ್ಷ ಕೇಶವಮೂರ್ತಿ, ಮುಖಂಡರಾದ ಭಾರತೀಪುರ ಮೋಹನ್ ಕುಮಾರ್, ಭವಾನಿ ಶಂಕರ್ ಮಂಜುನಾಥ್, ಗುರುಪ್ರಕಾಶ್, ಜಯಣ್ಣ, ಜಗಜ್ಯೋತಿ ಬಸವೇಶ್ವರ, ಸುರೇಂದ್ರ, ಗೋಪಿ ಹಾಗೂ ಭಟ್ಟರಹಳ್ಳಿ ಹಾಲಿನ ಡೇರಿ ಅಧ್ಯಕ್ಷ ಮಂಜುನಾಥ್, ವೀರಸಾಗರ ಮಂಜುನಾಥ್, ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಧಾವಿಸಿ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ