
ರಾಮನಗರ (ಜೂ.26) : ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿಗಳು ಇನ್ನು ಮುಂದೆ ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ವಾಸ್ತವ್ಯ ಹೂಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಎಷ್ಟುಮಂದಿ ಕೇಂದ್ರ ಸ್ಥಾನದಲ್ಲಿ ಮನೆ ಮಾಡಿದ್ದೀರಿ ಕೈ ಎತ್ತಿ ಎಂದಾಗ ಬೆರಳಣಿಕೆಯಷ್ಟುಮಂದಿ ಮಾತ್ರ ಕೈ ಎತ್ತಿದರು.
ಡಿ.ಕೆ.ಶಿವಕುಮಾರ್ ಭೇಟಿ ಬಗ್ಗೆ ಯತ್ನಾಳ್, ಬೊಮ್ಮಾಯಿ ಮಧ್ಯೆ ಘರ್ಷಣೆ
ನಿಮಗೆ ಒಂದು ತಿಂಗಳು ಕಾಲಾವಕಾಶ ಕೊಡುತ್ತೇನೆ. ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡಬೇಕು. ಕೇಂದ್ರ ಸ್ಥಾನ ಬಿಟ್ಟು ಹೋದರೆ ನಮಗೆ ಮಾಹಿತಿ ಕೊಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ. ಜನಸಾಮಾನ್ಯರ ಕೆಲಸ ಕಾರ್ಯಗಳು ಮಂದಗತಿಯಲ್ಲಿ ನಡೆಯುತ್ತಿವೆ.ಅಧಿಕಾರಿಗಳನ್ನು ಭೇಟಿ ಮಾಡಲು ಜನರು ಕಚೇರಿಗಳಿಗೆ ಅಲೆದಾಡುವ ಸನ್ನಿವೇಶ ಸೃಷ್ಟಿಯಾಗಿರುವ ಕುರಿತು ವ್ಯಾಪಕ ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ಗ್ರಾಪಂನಿಂದ ಹಿಡಿದು ಜಿಲ್ಲಾ ಮಟ್ಟದ ಅಧಿಕಾರಿಗಳವರೆಗೆ ಎಲ್ಲರು ಕಡ್ಡಾಯವಾಗಿ ಕೇಂದ್ರ ಸ್ಥಾನಗಳಲ್ಲಿಯೇ ವಾಸ್ತವ್ಯ ಹೂಡಬೇಕು. ಬಾಡಿಗೆ ಮನೆ ಮಾಡುತ್ತೀರೊ ಇಲ್ಲ ಬೇರೇನು ಮಾಡುತ್ತೀರೊ ನನಗೆ ಗೊತ್ತಿಲ್ಲ. ಕೇಂದ್ರ ಸ್ಥಾನದಲ್ಲಿ ಇಲ್ಲದೆ ಹೋದರೆ ಅಮಾನತು ಪಡಿಸುವುದಾಗಿ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
ಸರ್ಕಾರಿ ಇಲಾಖೆ ಯಾವ ಅಧಿಕಾರಿ, ಎಲ್ಲಿ ಸಿಗುತ್ತಾರೆ, ಅವರ ಮನೆ ವಿಳಾಸ, ಮೊಬೈಲ್ ನಂಬರ್ ಗಳನ್ನು ಪ್ರತಿ ಸರ್ಕಾರಿ ಕಚೇರಿಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಸಾರ್ವಜನಿಕರ ಅನುಕೂಲಕ್ಕಾಗಿ ಇಂತಹ ಮಾಹಿತಿಯನ್ನು ಒಳಗೊಂಡ ಪುಟ್ಟಕೈಪಿಡಿಯೊಂದನ್ನು ಮುದ್ರಿಸಿ ಹೊರತರಬೇಕು. ಸರ್ಕಾರಿ ಅಧಿಕಾರಿಗಳನ್ನು ಒಳಗೊಂಡು ಗ್ರೂಪ್ ಒಂದನ್ನು ಕ್ರಿಯೇಟ್ ಮಾಡುವಂತೆ ವಾರ್ತಾ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಮಾಡಬೇಕು. ಬೇಕಾದರೆ ನಾನೇ ಬಯೋಮೆಟ್ರಿಕ್ ಮಿಷಿನ್ ಕೊಡಿಸುತ್ತೇನೆ. ನೀವು ಯಾರಿಗೂ ಲಂಚ ಕೊಡಬೇಡಿ. ನೀವು ಲಂಚ ತೆಗೆದುಕೊಳ್ಳಬೇಡಿ. ನಾನು ಯಾರನ್ನು ವರ್ಗಾವಣೆ ಮಾಡಿಸುವುದಿಲ್ಲ. ನಿಮ್ಮ ಬಳಿ ಯಾವ ರೀತಿ ಕೆಲಸ ಮಾಡಿಸಬೇಕು ಎಂದು ಗೊತ್ತಿದೆ. ಔಚ್ ಆಫ್ ದಿ ವೇ ಯಾರೂ ಹೋಗಬೇಡಿ ಎಂದು ಶಿವಕುಮಾರ್ ತಾಕೀತು ಮಾಡಿದರು.
ನಮ್ಮನ್ನು ಜನ ಆಯ್ಕೆ ಮಾಡಿದ್ದಾರೆ. ಜನರ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಸರ್ಕಾರದ ಸೇವೆ ಮಾಡಲು ನೀವಿದ್ದೀರಿ. ರಾಜಕಾರಣಿಗಳು ಅಧಿಕಾರಿಗಳ ಬಳಿ ಜನ ಬರೋದು ಸಮಸ್ಯೆ ಬಗೆಹರಿಯದೆ ಇದ್ದಾಗ. ಆ ಸಮಸ್ಯೆ ಬಗೆಹರಿಸಬೇಕಾದ್ದು ನಮ್ಮ ಕರ್ತವ್ಯ. ಕಾನೂನು ಚೌಕಟ್ಟಿನೊಳಗೆ ಪರಿಹರಿಸುವಂತೆ ತಿಳಿಸಿದ ಅವರು, ನಮ್ಮ ಸರ್ಕಾರವನ್ನು ಜನತೆ ಸುಮ್ಮನೆ ಆಯ್ಕೆ ಮಾಡಿಲ್ಲ. ಉತ್ತಮ ಆಡಳಿತ ಕೊಡ್ತೀವಿ ಅಂತ ಆಯ್ಕೆ ಮಾಡಿದ್ದಾರೆ. ಬಿಜೆಪಿ ಆಡಳಿತ ವೈಖರಿಯನ್ನು ನೋಡಿದ್ದಾರೆ. ಅದು ಜನರಿಗೆ ಹತ್ತಿರವಾಗುವ ಆಡಳಿತವಲ್ಲ, ಕರೆಪ್ಷನ್ ಕ್ಯಾಪಿಟಲ… ಎಂಬ ಕಾರಣಕ್ಕೆ ಬಿಜೆಪಿ ಬದಲಾಯಿಸಿ ನಮ್ಮನ್ನು ಅಧಿಕಾರದಲ್ಲಿ ಕೂರಿಸಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ಸರ್ಕಾರಿ ಕಚೇರಿಗಳಲ್ಲಿ ಯಾರಾದರು ಲಂಚ ಕೇಳಿದರೆ ಯಾರನ್ನು ಸಂಪರ್ಕಿಸಬೇಕು ಎಂಬುದರ ಮಾಹಿತಿ ನೀಡುವ ಬೋರ್ಡ್ ಹಾಕಿಸಬೇಕು. ಕೆಲವರು ಆರ್ಟಿಇ ಕಾರ್ಯಕರ್ತರ ಹೆಸರಲ್ಲಿ ವಂಚಕರು ಸೇರಿದ್ದಾರೆ. ಅವರಿಗೆ ಹೆದರುವ ಅವಶ್ಯಕತೆ ಇಲ್ಲ. ಜಿಲ್ಲೆಯಲ್ಲಿ ಯಾವುದೇ ಅಕ್ರಮ ಕ್ಲಬ… ಗಳು ಇರಬಾರದು. ಗಾಂಜಾ, ರೇವಾ ಪಾರ್ಟಿ ಯಾವುದಕ್ಕೂ ಅವಕಾಶ ನೀಡದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಗಮನಹರಿಸಬೇಕು ಎಂದು ಶಿವಕುಮಾರ್ ಹೇಳಿದರು.
ಬೆಂಗಳೂರಿಂದ ತ್ಯಾಜ್ಯ ತಂದು ರಸ್ತೆಗಳ ಪಕ್ಕ ಸುರಿಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಗಡಿ ಪ್ರವೇಶ ದ್ವಾರದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಬೇಕಾಬಿಟ್ಟಿತ್ಯಾಜ್ಯ ನಿರ್ವಹಣೆಗೆ ಕಡಿವಾಣ ಹಾಕಬೇಕು. ಮುಖ್ಯವಾಗಿ ಬೆಂಗಳೂರಿನಿಂದ ಪ್ರವೆಶ ಪಡೆಯುವ ರಾಮನಗರ, ಕನಕಪುರ, ಮಾಗಡಿ ರಸ್ತೆಗಳಿಗೆ ಕ್ಯಾಮರಾ ಹಾಕಿದಲ್ಲಿ ಹೊರಗಿನ ಕಸ ವಿಲೇವಾರಿ ತಡೆಗಟ್ಟುವುದರ ಜೊತೆಗೆ ಅಪರಾಧ ಚಟುವಟಿಕೆ ತಡೆಗೂ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಸಿದ್ದರಾಮಯ್ಯ, ಡಿಕೆಶಿ ಮೆಟ್ಟು-ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ: ಶಾಸಕ ಯತ್ನಾಳ
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ.ಸುರೇಶ್, ಶಾಸಕರಾದ ಇಕ್ಬಾಲ… ಹುಸೇನ್, ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ, ಅ.ದೇವೇಗೌಡ, ಜಿಲ್ಲಾಧಿಕಾರಿ ಅವಿನಾಶ್, ಜಿಪಂ ಸಿಇಒ ದಿಗ್ವಿಜಯ… ಬೋಡ್ಕೆ, ಜಿಲ್ಲಾ ಎಸ್ಪಿ ಕಾರ್ತಿಕ್ ರೆಡ್ಡಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ