ಮೋದಿ ಅವರ ಅಧಿಕಾರದ ಅಶ್ವಮೇಧ ಕುದುರೆಯ ಓಟವನ್ನು ಕಟ್ಟಿಹಾಕುವ ಸಾಮರ್ಥ್ಯ ಇರುವುದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಮಾತ್ರ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರದ ಅಶ್ವಮೇಧ ಕುದುರೆಯ ಓಟವನ್ನು ಕಟ್ಟಿಹಾಕುವ ಸಾಮರ್ಥ್ಯ ಇರುವುದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಮಾತ್ರ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾದ ಬಳಿಕ ಬಿಜೆಪಿಯ ಅಧಿಕಾರದ ದಾಹಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿದೆ. ದೇಶದ ವಿವಿಧೆಡೆ ನಡೆದ 11 ಚುನಾವಣೆ ಮತ್ತು ಇತ್ತೀಚೆಗೆ ಮೂರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಮಾಡಲಾಗಿದೆ ಎಂದರು.
ಮುಸ್ಲಿಂ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು: ಪಕ್ಷದ ಮತ್ತು ಅಲ್ಪಸಂಖ್ಯಾತರ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಬೇಕಾದರೆ ಅವರ ಭಾವನೆಗಳಿಗೆ ಸ್ಪಂದಿಸಬೇಕಾಗಿದ್ದು, ಮುಸ್ಲಿಂ ಸಮುದಾಯಕ್ಕೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡ ಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರು ಕುಮಾರಸ್ವಾಮಿಗೆ ಮನವಿ ಮಾಡಿದರು.
ಮುಸ್ಲಿಂ ಸಮುದಾಯದವರನ್ನು ಪೊಲೀಸರು ಭಯೋತ್ಪಾದನೆ ಆರೋಪದ ಮೇಲೆ ವಶಕ್ಕೆ ಪಡೆದು ಕಿರುಕುಳ ನೀಡುತ್ತಿದ್ದಾರೆ. ಇದನ್ನು ತಪ್ಪಿಸಲು ನ್ಯಾಷನಲ್ ಇಂಟಿಗ್ರಿಷನ್ ಕಾಯ್ದೆಯಡಿ ಪರಿಶೀಲನಾ ಸಮಿತಿ ಯೊಂದನ್ನು ರಚಿಸಬೇಕು. ಇದರಿಂದ ಸಮುದಾ ಯಕ್ಕೆ ನ್ಯಾಯ ಒದಗಿಸುವ ಪ್ರಯತ್ನ ಮಾಡಬಹುದು ಎಂದರು.