
ಸಿದ್ದು ಚಿಕ್ಕಬಳ್ಳೇಕೆರೆ
ಬೆಂಗಳೂರು (ಡಿ.4): ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿ ಇನ್ನು ಮುಂದೆ ಪಪ್ಪಾಯ, ಬಾಳೆಗೆ ಪ್ರೋತ್ಸಾಹಧನ ಸಿಗುವುದಿಲ್ಲ. ಇದರಿಂದಾಗಿ ಲಕ್ಷಾಂತರ ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ.
ಹಲವು ವರ್ಷಗಳಿಂದ ನರೇಗಾ ಯೋಜನೆಯಡಿ ರಾಜ್ಯದಲ್ಲಿ ಸಾವಿರಾರು ರೈತರು ಹೆಕ್ಟೇರ್ಗೆ ಅನುಗುಣವಾಗಿ ಸಾಕಷ್ಟು ಪ್ರೋತ್ಸಾಹಧನ ಪಡೆದು ಪಪ್ಪಾಯ ಮತ್ತು ಬಾಳೆ ಬೆಳೆಯುತ್ತಿದ್ದರು. ಆದರೆ ಇತ್ತೀಚೆಗೆ ನರೇಗಾದಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಪರಿಶೀಲಿಸಲು ಆಗಮಿಸಿದ್ದ ಕೇಂದ್ರ ತಂಡವು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಂಡಿರುವುದು ರೈತರಿಗೆ ಸಂಕಷ್ಟ ಉಂಟು ಮಾಡಿದೆ.
‘ಬಾಳೆ ಮತ್ತು ಪಪ್ಪಾಯಗಳು ದ್ವಿವಾರ್ಷಿಕ ಬೆಳೆಗಳಾಗಿದ್ದು ನರೇಗಾದಡಿ ಅನುಷ್ಠಾನಗೊಳಿಸಲು ಅವಕಾಶವಿಲ್ಲ. ತಕ್ಷಣವೇ ಇದನ್ನು ಸ್ಥಗಿತೊಳಿಸಬೇಕು’ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಸೂಚಿಸಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಆಯುಕ್ತರು ತೋಟಗಾರಿಕಾ ಇಲಾಖೆ ನಿರ್ದೇಶಕರಿಗೆ ನ.21ರಂದು ಪತ್ರ ಬರೆದಿದ್ದಾರೆ.
‘2026-27ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಕ್ರಿಯಾ ಯೋಜನೆಯಲ್ಲಿ ಬಾಳೆ ಮತ್ತು ಪಪ್ಪಾಯ ಬೆಳೆಗಳನ್ನು ಮುಂದಿನ ಆದೇಶದವರೆಗೂ ಸೇರ್ಪಡಿಸಬಾರದು. ಈಗಾಗಲೇ 2025-26ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಅನುಮೋದನೆಗೊಂಡು ಅನುಷ್ಠಾನವಾಗದಿರುವ ಕಾಮಗಾರಿಗಳನ್ನು ತಕ್ಷಣವೇ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
‘ಪಪ್ಪಾಯ ಮತ್ತು ಬಾಳೆ ಬೆಳೆಗಳು ಪ್ರದೇಶಾಭಿವೃದ್ಧಿ ಚಟುವಟಿಕೆಯಲ್ಲಿ ಅವಶ್ಯಕತೆ ಇದ್ದರೆ ಸೂಕ್ತ ಕಾರಣಗಳೊಂದಿಗೆ ಪ್ರಸ್ತಾವನೆ ಸಲ್ಲಿಸಿದರೆ ಅನುಮತಿ ನೀಡುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಕೋರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.
‘ಪಪ್ಪಾಯ ಮತ್ತು ಬಾಳೆ ಬೆಳೆಯಲು ತೋಟಗಾರಿಕಾ ಇಲಾಖೆ ಮೂಲಕ ನರೇಗಾದಿಂದ ಸಾಕಷ್ಟು ಪ್ರೋತ್ಸಾಹಧನ ಸಿಗಲಿದೆ. ಇದರಿಂದಾಗಿ ಉತ್ತಮ ಆದಾಯ ಗಳಿಸಬಹುದು. ಆದ್ದರಿಂದ ತೋಟಗಾರಿಕಾ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳಬೇಕು. ಪಪ್ಪಾಯ ಮತ್ತು ಬಾಳೆ ಬೆಳೆಗಳಿಗೆ ಪ್ರೋತ್ಸಾಹಧನ ಮುಂದುವರೆಯುವಂತೆ ಮಾಡಬೇಕು’ ಎಂಬ ಒತ್ತಾಯ ರೈತರಿಂದ ಕೇಳಿಬಂದಿದೆ.
ನರೇಗಾ ಯೋಜನೆಯಡಿ ಪಪ್ಪಾಯ ಮತ್ತು ಬಾಳೆ ಬೆಳೆಗಳನ್ನು ಬೆಳೆಯುವುದರಿಂದ ರೈತರಿಗೆ ಬಹಳಷ್ಟು ಅನುಕೂಲವಾಗಲಿದೆ. ಆದ್ದರಿಂದ ಅವಕಾಶ ನೀಡುವಂತೆ ಶೀಘ್ರದಲ್ಲೇ ರಾಜ್ಯ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅವರು ಇದನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಿದ್ದಾರೆ.
- ಆರ್.ಗಿರೀಶ್, ತೋಟಗಾರಿಕೆ ಇಲಾಖೆ ನಿರ್ದೇಶಕ..
ಪಪ್ಪಾಯ ಮತ್ತು ಬಾಳೆಯನ್ನು ನರೇಗಾ ಯೋಜನೆಯಡಿ ಬೆಳೆಯಲು ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರ ಒತ್ತಡ ಹೇರಬೇಕು. ವಿದೇಶಗಳಿಂದ ಹಣ್ಣುಗಳನ್ನು ಆಮದು ಮಾಡಿಕೊಳ್ಳದೇ ನಮ್ಮ ರೈತರು ಬೆಳೆದ ಹಣ್ಣುಗಳನ್ನು ಸೇವಿಸುವ ಪರಿಸ್ಥಿತಿ ನಿರ್ಮಾಣವಾಗಬೇಕು.
- ವೀರೇಶ ಸೊಬರದಮಠ, ರೈತ ಮುಖಂಡ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ