ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮತ್ತೆ ಒತ್ತಾಯ!

By Govindaraj SFirst Published Jun 16, 2023, 11:02 PM IST
Highlights

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಆಗಬೇಕು ಎನ್ನುವುದು ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ದಿನಗಳ ಬೇಡಿಕೆ. ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಈ ಸಂಬಂಧ ಅಭಿಯಾನವೇ ನಡೆದಿತ್ತು. 

ಭರತ್‌ರಾಜ್ ಕಲ್ಲಡ್ಕ, ಏಷ್ಯಾನೆಟ್ ಸುವರ್ಣ ನ್ಯೂಸ್, ಕಾರವಾರ

ಉತ್ತರ ಕನ್ನಡ (ಜೂ.16): ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಆಗಬೇಕು ಎನ್ನುವುದು ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ದಿನಗಳ ಬೇಡಿಕೆ. ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಈ ಸಂಬಂಧ ಅಭಿಯಾನವೇ ನಡೆದಿತ್ತು. ಇನ್ನು ಅಂದು ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡಿತ್ತು. ಸದ್ಯ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬಂದಿದ್ದು, ಜಿಲ್ಲೆಯಲ್ಲಿ ಇನ್ನಾದರೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತಾರೋ ಅನ್ನುವ  ನಿರೀಕ್ಷೆಯನ್ನು ಜನರು ಹೊಂದಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. 

ಹೌದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕೆನ್ನುವುದು ಜಿಲ್ಲೆಯ ಜನರ ಬಹುದಿನದ ಬೇಡಿಕೆ. ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದ ಪರಿಣಾಮ ಪ್ರತಿನಿತ್ಯ ಚಿಕಿತ್ಸೆಗಾಗಿ ಹೊರ ಜಿಲ್ಲೆ, ಹೊರ ರಾಜ್ಯದ ಆಸ್ಪತ್ರೆಗಳಿಗೆ ಓಡಾಡುವ ಪರಿಸ್ಥಿತಿ ಇದ್ದು, ಜಿಲ್ಲೆಯಲ್ಲಿಯೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಹೋರಾಟವೇ ನಡೆದಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನರು ದೊಡ್ಡ ಹೋರಾಟ ನಡೆಸಿದ್ದು, ಸ್ವತಃ ಆರೋಗ್ಯ ಸಚಿವರೇ ಜಿಲ್ಲೆಗೆ ಬಂದು ಆಸ್ಪತ್ರೆ ಮಾಡಲು ಸ್ಥಳ ಪರಿಶೀಲನೆ ಮಾಡಿಕೊಂಡು ಹೋಗಿದ್ದರು. 

ಕೃಷಿ ಜತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ಚಲುವರಾಯಸ್ವಾಮಿ

ಅಲ್ಲದೇ, ಆಸ್ಪತ್ರೆ ನಿರ್ಮಾಣಕ್ಕೆ ಸಿದ್ದತೆ ನಡೆಸಿದ್ದರೂ ಆಸ್ಪತ್ರೆ ಮಾತ್ರ ನಿರ್ಮಾಣ ಆಗಿರಲಿಲ್ಲ. ಅಂದು ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡಿದ್ದು, ತಮ್ಮ ಸರ್ಕಾರ ಆಡಳಿತಕ್ಕೆ ಬಂದ ಕೆಲವೇ ದಿನದಲ್ಲಿ ಶಂಕುಸ್ಥಾಪನೆ ಮಾಡುವುದಾಗಿ ಹೇಳಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಿದ್ದು, ನುಡಿದಂತೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದೆಯೇ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಎದುರಾಗಿದ್ದು, ಶೀಘ್ರದಲ್ಲಿ ಮಾಡುವಂತೆ ಆಗ್ರಹಿಸಿದ್ದಾರೆ. ಇನ್ನು ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ದೊಡ್ಡ ಅಭಿಯಾನವೇ ನಡೆದಿತ್ತು. 

ಜಿಲ್ಲೆಯಾದ್ಯಂತ ಪ್ರತಿಭಟನೆಗಳು ಸಹ ನಡೆದಿದ್ದು, ಬಿಜೆಪಿ ಸರ್ಕಾರಕ್ಕೆ ಇದು ಮುಜುಗರ ತರುವಂತೆ ಮಾಡಿತ್ತು. ಜಿಲ್ಲೆಯ ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಲಿ ಸ್ಥಳ ಪರಿಶೀಲನೆ ಸಹ ಮಾಡಿ ನಿಗದಿ ಮಾಡಿದ್ದರು. ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡದೇ ಇರುವುದು ಬಿಜೆಪಿಗೆ ಚುನಾವಣೆಯಲ್ಲಿ ಹಿನ್ನೆಡೆಗೆ ಕಾರಣವಾಗಿತ್ತು. ಸದ್ಯ ಇದರ ರಾಜಕೀಯ ಲಾಭ ಪಡೆದ ಕಾಂಗ್ರೆಸ್ ಆಸ್ಪತ್ರೆ ನಿರ್ಮಾಣ ಮಾಡುವ ಮೂಲಕ ಜನರ ವಿಶ್ವಾಸ ಗಳಿಸಲಿದೆಯೇ ಎನ್ನುವ ಪ್ರಶ್ನೆ ಸಾರ್ವಜನಿಕರದ್ದು. 

ರಾಜ್ಯದಲ್ಲಿ ಅರಣ್ಯ ವ್ಯಾಪ್ತಿಯನ್ನು ಶೇ.33ಕ್ಕೆ ಹೆಚ್ಚಿಸಲು ಸರ್ಕಾರ ಪ್ರಯತ್ನ: ಸಚಿವ ಈಶ್ವರ ಖಂಡ್ರೆ

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಬಳಿ ಕೇಳಿದರೆ ನಾವು ನೂರಕ್ಕೆ ನೂರರಷ್ಟು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡೇ ಮಾಡುತ್ತೀವಿ ಅನ್ನುತ್ತಿದ್ದಾರೆ. ಸರ್ಕಾರ ರಚನೆಯಾಗಿ ಆರು ತಿಂಗಳ ಒಳಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡುವುದಾಗಿ ಕಾಂಗ್ರೆಸ್ ಹೇಳಿತ್ತು. ಸದ್ಯ ಈವರೆಗೆ ಈ ಬಗ್ಗೆ ಚರ್ಚೆಗೆ ಮುಂದಾಗಿಲ್ಲ. ಇನ್ನಾದರೂ ಅಧಿಕಾರಿಗಳ ಸಭೆ ನಡೆಸಿ ಶೀಘ್ರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ಮಾಡುವ ಮೂಲಕ ಜನರು ಬೇಡಿಕೆಯನ್ನು ಕಾಂಗ್ರೆಸ್ ಈಡೇರಿಸಲಿ ಎನ್ನುವುದು ಜಿಲ್ಲೆಯ ಜನರ ಆಗ್ರಹವಾಗಿದೆ. 

click me!