ಗ್ಯಾರಂಟಿ ಯೋಜನೆಯಿಂದ ಜನರ ತಲಾ ಆದಾಯ ಹೆಚ್ಚಳವಾಗಿದೆ: ಸಿಎಂ

By Kannadaprabha NewsFirst Published Mar 1, 2024, 5:56 PM IST
Highlights

ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಾಸನ (ಮಾ.1) :ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿಂದು ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ, ದೇಶದಲ್ಲಿ ಶೇ.18 ರಷ್ಟು ಜಿಡಿಪಿ ಬೆಳವಣಿಗೆಯಾಗಿ, ದೇಶದ ಅಭಿವೃದ್ಧಿಗೆ ಅತಿ ಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ಕರ್ನಾಟಕವಾಗಿದೆ. ಈ ಬೆಳವಣಿಗೆ ಗ್ಯಾರಂಟಿ ಯೋಜನೆಗಳ ಫಲ ಎಂಬುದನ್ನು ಅಂಕಿ ಅಂಶಗಳೇ ತೋರಿಸುತ್ತವೆ ಎಂದರು. 

ಅಂಗಾಂಗ ದಾನಿಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳ ಮೂಲಕ ಜನರ ಖಾತೆಗೆ ಬಂದ ಹಣದಿಂದಾಗಿ ಅವರಲ್ಲಿ ಕೊಳ್ಳುವ ಶಕ್ತಿ, ಉಳಿತಾಯದ ಶಕ್ತಿ ಹೆಚ್ಚಾಗಿದೆ. ಇದರ ಒಟ್ಟು ಪರಿಣಾಮ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ತೀವ್ರಗೊಂಡು ಆರ್ಥಿಕ ಪ್ರಗತಿ ಕಂಡಿದೆ.

ಮಹಿಳೆಯರು, ರೈತರು, ಕಾರ್ಮಿಕರು, ಹಿಂದುಳಿದವರು, ದುಡಿಯುವವರು, ಶ್ರಮಿಕರು ಎಲ್ಲರಿಗೂ ಅನುಕೂಲ ಆಗುವ ಜಾತಿ, ಧರ್ಮದ ಮಿತಿ ಇಲ್ಲದ ಕಾರ್ಯಕ್ರಮಗಳನ್ನು ನಾವು ರೂಪಿಸಿ, ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕರ್ನಾಟಕದಲ್ಲಿ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಯನ್ನೂ ಮಾಡಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ನೆಮ್ಮದಿ ಕಂಡುಕೊಳ್ಳುತ್ತಿದ್ದಾರೆ. ಈ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ನಾನಾ ನಾಟಕಗಳನ್ನು ಸೃಷ್ಟಿಸುತ್ತಿದೆ, ಭರ್ಜರಿ ನಾಟಕ ಆಡುತ್ತಿದೆ. ಬಿಜೆಪಿಯ ಟೀಕೆ, ನಾಟಕಗಳಿಗೆ ಮರುಳಾಗಬೇಡಿ ಎಂದು ಜನರಲ್ಲಿ ಮನವಿ ಮಾಡಿದ ಮುಖ್ಯಮಂತ್ರಿ, ಹಾಸನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಏರ್ ಪೋರ್ಟ್ ನಿರ್ಮಾಣಕ್ಕೆ ರಾಜ್ಯದ ಪಾಲಿನ ಹಣವನ್ನು ನಿರಂತರವಾಗಿ ನೀಡುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶ ಕೊಡದೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.
 

click me!