ದಸರಾ ಜಂಬೂ ಸವಾರಿಗೆ ಪ್ರಧಾನಿ ಮೋದಿ ಭೇಟಿ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

By Govindaraj SFirst Published Sep 18, 2022, 3:45 AM IST
Highlights

ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಚರ್ಚೆಗಳಿಗೆ ಕೊನೆಗೂ ತೆರೆಬಿದ್ದಿದೆ. ದಸರಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲ್ಲ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿ/ಮೈಸೂರು (ಸೆ.18): ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಚರ್ಚೆಗಳಿಗೆ ಕೊನೆಗೂ ತೆರೆಬಿದ್ದಿದೆ. ದಸರಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲ್ಲ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಕಾರ್ಯಾಲಯವು ದಸರಾ ಕಾರಾರ‍ಯಕ್ರಮದ ಕುರಿತು ಇತ್ತೀಚೆಗೆ ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿತ್ತು. ಈ ಹಿನ್ನೆಲೆಯಲ್ಲಿ ಸಮಾರೋಪದ ದಿನ ಮೋದಿ ಆಗಮಿಸುತ್ತಾರೆ ಎನ್ನುವ ಚರ್ಚೆ ಆರಂಭವಾಗಿತ್ತು. 

ಇದೀಗ ಪ್ರಧಾನಿ ಕಚೇರಿಯಿಂದಲೇ, ಅವರು ಬರಲು ಸಾಧ್ಯವಾಗುವುದಿಲ್ಲ ಎನ್ನುವ ಸಂದೇಶ ಬಂದಿದೆ ಎಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸ್ಪಷ್ಟೀಕರಣ ನೀಡಿದ್ದಾರೆ. ಮುಖ್ಯಮಂತ್ರಿ ಮಾತನ್ನು ಪುನರುಚ್ಚರಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎಸ್‌.ಟಿ.ಸೋಮಶೇಖರ್‌, ದಸರಾ ಜಂಬೂಸವಾರಿಗೆ ಪುಷ್ಪಾರ್ಚನೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲ್ಲ ಎಂದು ಹೇಳಿದ್ದಾರೆ. ಜತೆಗೆ, ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಭಾಗವಹಿಸುವ ಕಾರ್ಯಕ್ರಮದ ಪಟ್ಟಿ ಅಂತಿಮವಾಗುತ್ತಿದೆ. ಅರಮನೆ ಭೇಟಿ ಬಗ್ಗೆ ಮಾಹಿತಿ ಕೇಳಲಾಗಿದೆ. 

ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್‌: ಸಿಎಂ ಬೊಮ್ಮಾಯಿ ಅಶ್ವಾಸನೆ

ರಾಷ್ಟ್ರಪತಿಗಳಿಂದ ಅದಕ್ಕೆ ಅಧಿಕೃತ ಒಪ್ಪಿಗೆ ಸಿಕ್ಕಿಲ್ಲ ಎಂದರು. ಕೇಂದ್ರದ ನಾಲ್ಕು ಮಂತ್ರಿಗಳು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಇದೆ. ಅದರ ಆಧಾರದ ಮೇಲೆ ವೇದಿಕೆ ಮೇಲೆ ಕೂರುವವರ ಪಟ್ಟಿಅಂತಿಮಗೊಳ್ಳುತ್ತದೆ ಎಂದು ಇದೇ ವೇಳೆ ತಿಳಿಸಿದರು. ಜತೆಗೆ, ಈ ಬಾರಿಯ ದಸರೆಗೆ ಹಣ ಬಿಡುಗಡೆ ಮಾಡಿರುವುದಾಗಿ ಸ್ವತಃ ಮುಖ್ಯಮಂತ್ರಿ ಹೇಳಿದ್ದಾರೆ. ವಿದ್ಯುತ್‌ ದೀಪಾಲಂಕರಕ್ಕೆ .4.50 ಕೋಟಿ ನಿಗದಿ ಮಾಡಲಾಗಿದೆ. ಎಲ್ಲವನ್ನೂ ವ್ಯವಸ್ಥಿತವಾಗಿ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಇನ್ನೂ  ಬಿಡಿಎ ವಸತಿ ಯೋಜನೆ ಅವ್ಯವಹಾರ ವಿಷಯವಾಗಿ ಮಾಜಿ ಮುಖ್ಯಮಂತ್ರಿ ಯಡಿಯುರಪ್ಪ ವಿರುದ್ಧ ಮತ್ತೆ ಎಫ್‌ಐಆರ್‌ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ವಿರುದ್ಧ ಈ ಹಿಂದೆ ಇಂತಹ ಹಲವು ಕೇಸ್‌ಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಈ ಕೇಸ್‌ ಕೂಡಾ ವಿಫಲವಾಗಲಿದೆ. ಯಡಿಯೂರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವಾಗ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ ಲೋಕಾಯುಕ್ತದಲ್ಲಿ ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಇದು ಕೂಡಾ ಒಂದು. ಅವರ ವಿರುದ್ಧ ತನಿಖೆ ನಡೆಯುತ್ತಿದ್ದು, ಆ ಕೇಸ್‌ನಲ್ಲೂ ಗೆದ್ದು ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

10 ಪಾಲಿಕೆ ಸಫಾಯಿ ಕರ್ಮಚಾರಿಗಳಿಗೆ ಸ್ಕೂಟರ್‌: ಸಿಎಂ ಬೊಮ್ಮಾಯಿ

ಬಳ್ಳಾರಿ ವಿಮ್ಸ್‌ ಆಸ್ಪತ್ರೆಯಲ್ಲಿ ದುರ್ಘಟನೆ ನಡೆದರೂ ಆರೋಗ್ಯ ಸಚಿವ ಸುಧಾಕರ್‌ ಭೇಟಿ ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ, ದುರ್ಘಟನೆಯಿಂದ ನಮ್ಮ ಮನಸಿಗೂ ನೋವಾಗಿದೆ. ಈ ಬಗ್ಗೆ ತನಿಖೆ ಕೂಡಾ ನಡೆದಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗರಂ ಆಗೋದು ಅವರಿಗೆ ಬಿಟ್ಟವಿಚಾರ ಎಂದರು. ಸಂಪುಟ ವಿಸ್ತರಣೆ ವಿಷಯವಾಗಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

click me!