
ಬೆಂಗಳೂರು (ಜೂ.20): ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಚಿತ್ರೀಕರಿಸಿದ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿ ಸಂಬಂಧ ವಿಶೇಷ ತನಿಖಾ ದಳಕ್ಕೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್ ಪರ ವಕೀಲರು ‘ಡೀಫಾಲ್ಟ್ ಜಾಮೀನು ಕೋರಿದ್ದೇವೆ. ಈಗ ಈ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆಯಾಗಿದೆ’ ಎಂದು ನ್ಯಾಯಾಲಯಕ್ಕೆ ಪ್ರಕರಣದ ವಿವರ ನೀಡಿದರು. ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್ ಅವರು ಎಸ್ಐಟಿ ಪರ ನೋಟಿಸ್ ಪಡೆಯುವುದಾಗಿ ತಿಳಿಸಿದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ನೋಟಿಸ್ ಜಾರಿಗೊಳಿಸಿ ಜು.3ರ ಒಳಗೆ ಆಕ್ಷೇಪಣೆ ಸಲ್ಲಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.
ಪ್ರಕರಣದ ಹಿನ್ನೆಲೆ: 2019ರಲ್ಲಿ ಸಂಸದರ ಕೋಟಾದಲ್ಲಿ ತನ್ನ ಪುತ್ರನಿಗೆ ಕೇಂದ್ರೀಯ ವಿದ್ಯಾಲಯದಲ್ಲಿ ಸೀಟು ಕೊಡಿಸುವಂತೆ ಮಹಿಳೆಯು ಸಂಸದರಾಗಿದ್ದ ಪ್ರಜ್ವಲ್ರನ್ನು ಸಂಪರ್ಕಿಸಿದ್ದರು. ಈ ಸಂದರ್ಭದಲ್ಲಿ ಮಹಿಳೆಯ ಮೊಬೈಲ್ ನಂಬರ್ ಪಡೆದಿದ್ದ ಪ್ರಜ್ವಲ್, ಕರೆ ಮಾಡಿ ವಿವಸ್ತ್ರವಾಗಿ ಮೊಬೈಲ್ ಕ್ಯಾಮೆರಾದ ಮುಂದೆ ಬರುವಂತೆ ಪೀಡಿಸುತ್ತಿದ್ದರು ಎನ್ನುವ ಆರೋಪವಿದೆ.
ವಿವಸ್ತ್ರವಾಗಿ ಕ್ಯಾಮೆರಾ ಮುಂದೆ ಬಂದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡು, ಫೋಟೋಗಳನ್ನು ಸಂಗ್ರಹಿಸಿದ್ದ ಆರೋಪಿ, ತಾನು ಕರೆ ಮಾಡಿದಾಗ ಫೋನ್ ತೆಗೆಯದಿದ್ದರೆ ಅವುಗಳನ್ನು ಬಹಿರಂಗಗೊಳಿಸುವುದಾಗಿ ಬೆದರಿಸಿದ್ದರು ಎಂದು ಆರೋಪಿಸಲಾಗಿದೆ. ಮಾಜಿ ಸಂಸದ ಪ್ರಜ್ವಲ್ ವಿರುದ್ಧ ಮೂರು ಅ*ತ್ಯಾಚಾ*ರ ಮತ್ತು ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಸೇರಿ ಒಟ್ಟು ನಾಲ್ಕು ಪ್ರಕರಣ ದಾಖಲಾಗಿದ್ದು, ಒಂದು ಪ್ರಕರಣದಲ್ಲಿ ಈಗಾಗಲೇ ಶಿಕ್ಷೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ