
ಬೆಂಗಳೂರು(ಅ.24): ಉತ್ತರ ಕರ್ನಾಟಕದ ನೆರೆ ಹಾಗೂ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಎಚ್ಚರಿಕೆ ವಹಿಸಲು ಹಾಗೂ ಸಂತ್ರಸ್ತರಿಗೆ ಎಲ್ಲಾ ರೀತಿಯ ವೈದ್ಯಕೀಯ ಸೇವೆ ಸಲ್ಲಿಸಲು ಎಲ್ಲ ಆರೋಗ್ಯಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಸಮರೋಪಾದಿಯಲ್ಲಿ ಕಾರ್ಯೋನ್ಮುಖರಾಗುವಂತೆ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ಕುಮಾರ್ ಪಾಂಡೆ ತುರ್ತು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕಮಗಳೂರು, ಕೊಡಗು, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ನೆರೆ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಹಿರಿ ಕಿರಿಯ ಅಧಿಕಾರಿಗಳು ಹಾಗೂ ವೈದ್ಯರುಗಳು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ವೈದ್ಯಕೀಯ ಸೇವೆ ನೀಡಲು ಮುಂದಾಗಬೇಕು. ಪ್ರವಾಹ ಪೀಡಿತ ಜಿಲ್ಲೆಗಳ ಪರಿಹಾರ ಕಾರ್ಯದ ಮೇಲ್ವಿಚಾರಣೆಗಾಗಿ ಇಲಾಖೆಯ ಉತ್ತರ ಕರ್ನಾಟಕದ ಅಪರ ನಿರ್ದೇಶಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಜಿಲ್ಲೆಗಳ ಪರಿಸ್ಥಿತಿ ಕುರಿತು ದಿನದ 24 ಗಂಟೆಯೂ ಮಾಹಿತಿ ಸಂಗ್ರಹಿಸಿ ಆರೋಗ್ಯ ಸಚಿವರು, ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
64 ರಾಜ್ಯೋತ್ಸವ ಪ್ರಶಸ್ತಿಗೆ 1350 ಅರ್ಜಿ!
ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳು ಜಿಲ್ಲೆಗಳಿಗೆ ತೆರಳಿ ಅಲ್ಲಿಯೇ ವಾಸ್ತವ್ಯ ಹೂಡಬೇಕು. ಪ್ರವಾಹ ಪೀಡಿತರಿಗೆ ಸೂಕ್ತ ಆರೋಗ್ಯ ಸೇವೆ ಒದಗಿಸಬೇಕು. ನೋಡಲ್ ಅಧಿಕಾರಿಗಳು ತಾವು ಕೈಗೊಂಡ ಕ್ರಮದ ಕುರಿತು ದೈನಂದಿನ ವರದಿಯನ್ನು ಅಪರ ನಿರ್ದೇಶಕರಿಗೆ ನೀಡಬೇಕು. ಸಾಂತ್ವನ ಕೇಂದ್ರಗಳಿಗೆ ಅಗತ್ಯವಿರುವ ಎಲ್ಲ ಔಷಧ ಮತ್ತು ಸಲಕರಣೆಯನ್ನು ತ್ವರಿತವಾಗಿ ಸಾಗಿಸಬೇಕು.
ನನ್ನ ಮಕ್ಕಳು ಬರುತ್ತಿರುವುದೇ ನನಗೆ ದೊಡ್ಡ ಹಬ್ಬ : ಡಿಕೆಶಿ ತಾಯಿ ಗೌರಮ್ಮ
ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲಾ ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದ ಜಿಲ್ಲಾಧಿಕಾರಿಗಳ ನಿರ್ಣಯಗಳಿಗೆ ಸಂಪೂರ್ಣ ಸಹಕಾರ ನೀಡಿ ಸಂತ್ರಸ್ತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ