ದೊಡ್ಡಬಳ್ಳಾಪುರದಲ್ಲಿ ಕನ್ನಡ ರಥ ಸ್ವಾಗತಕ್ಕೆ ಅದ್ಧೂರಿ ಸಿದ್ದತೆ

By Kannadaprabha NewsFirst Published Dec 13, 2022, 3:23 AM IST
Highlights

 ಹಾವೇರಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿಯನ್ನು ಹೊತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ಕನ್ನಡ ರಥ ಇದೇ 14ರಂದು ಬುಧವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುತ್ತಿದ್ದು, ದೊಡ್ಡಬಳ್ಳಾಪುರ ತಾಲೂಕಿಗೆ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆಗಳು ನಡೆದಿವೆ.

ದೊಡ್ಡಬಳ್ಳಾಪುರ (ಡಿ.13) ಹಾವೇರಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿಯನ್ನು ಹೊತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ಕನ್ನಡ ರಥ ಇದೇ 14ರಂದು ಬುಧವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುತ್ತಿದ್ದು, ದೊಡ್ಡಬಳ್ಳಾಪುರ ತಾಲೂಕಿಗೆ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂ.ಗ್ರಾ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಬಿ.ಎನ್‌.ಕೃಷ್ಣಪ್ಪ ತಿಳಿಸಿದರು.

ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ಸೋಮವಾರ ನಡೆದ ಕನ್ನಡ ರಥ ಸ್ವಾಗತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಸಾಪ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡದ ಸ್ವಾಭಿಮಾನದ ಸಂಕೇತ ಕನ್ನಡ ರಥದ ಜಾಥಾ ಹಮ್ಮಿಕೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭುವನಗಿರಿಯಲ್ಲಿ ಚಾಲನೆಗೊಂಡಿದೆ. ಸಮ್ಮೇಳನಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಥ ಸಂಚರಿಸಲಿದೆ. ಬುಧವಾರ ಮಧ್ಯಾಹ್ನ 12 ಗಂಟೆ ವೇಳೆಗೆ ದೊಡ್ಡಬಳ್ಳಾಪುರ ತಾಲೂಕಿಗೆ ಆಗಮಿಸಲಿದೆ ಎಂದರು.

 

ಡಿ.28ಕ್ಕೆ ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವ: ಡಿಸಿ ಆರ್‌.ಲತಾ

ಜಿಲ್ಲಾಡಳಿತದ ಸಹಯೋಗದಲ್ಲಿ ಕಾರ‍್ಯಕ್ರಮ ಆಯೋಜಿಸಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸ್ಥಳೀಯ ತಾಲೂಕು ಆಡಳಿತದ ಸಹಯೋಗದಲ್ಲಿ ಜಾಥಾ ನಡೆಯಲಿದೆ. ಜಾಥಾದಲ್ಲಿ ಕನ್ನಡಪರ ಸಂಘಟನೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅರ್ಥಪೂರ್ಣ ಉತ್ಸವ ನಡೆಸಲು ಉದ್ದೇಶಿಸಲಾಗಿದೆ ಎಂದು ವಿವರಿಸಿದರು.

ಜಿಲ್ಲಾ ಕಸಾಪ ಗೌರವ ಕಾರ‍್ಯದರ್ಶಿ ಪ್ರೊ.ಕೆ.ಆರ್‌.ರವಿಕಿರಣ್‌ ಮಾತನಾಡಿ, ಗೌರಿಬಿದನೂರು ತಾಲೂಕಿನಿಂದ ರಥ ಆಗಮಿಸುತ್ತಿದೆ. ತಾಲೂಕಿನ ಗಡಿ ಭಾಗವಾದ ಗುಂಜೂರು ಬಳಿ ದೊಡ್ಡಬಳ್ಳಾಪುರ ತಾಲೂಕಿಗೆ ಬರಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ. ಕಂಟನಕುಂಟೆ ಬಳಿ ಪೂಜಾ ಕಾರ‍್ಯಕ್ರಮ ಬಳಿಕ, ದೊಡ್ಡಬಳ್ಳಾಪುರದ ಪ್ರವಾಸಿ ಮಂದಿರ ವೃತ್ತದಲ್ಲಿ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುವುದು. ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದ್ದು, ಸಂಜೆ ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ವೇದಿಕೆ ಕಾರ‍್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

Pancharatna Rathayatra: ದೊಡ್ಡಬಳ್ಳಾಪುರ ಗೆಲ್ಲೋದೆ ನಮ್ಮ ಗುರಿ: ಎಚ್‌.ಡಿ.ಕುಮಾರಸ್ವಾಮಿ

ಸಭೆಯಲ್ಲಿ ತಾಲೂಕು ಕಸಾಪ ಅಧ್ಯಕ್ಷರಾದ ದೊಡ್ಡಬಳ್ಳಾಪುರದ ಪಿ.ಗೋವಿಂದರಾಜು, ದೇವನಹಳ್ಳಿಯ ಆರ್‌.ಕೆ.ನಂಜೇಗೌಡ, ಹೊಸಕೋಟೆಯ ಮುನಿರಾಜು, ಜಿಲ್ಲಾ ಕಸಾಪ ಕೋಶಾಧ್ಯಕ್ಷ ಡಾ.ಮುನಿರಾಜು, ಕಲಾವಿದರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ, ಜಿಲ್ಲಾಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಮಾಜಿ ನಗರಸಭಾ ಸದಸ್ಯ ಜಿ.ಸತ್ಯನಾರಾಯಣ್‌, ಆರ್‌.ಕೆಂಪರಾಜು, ಕನ್ನಡ ಪಕ್ಷದ ಮುಖಂಡ ಸಂಜೀವನಾಯಕ್‌, ಕಜಾಪ ಕಾರ‍್ಯದರ್ಶಿ ಡಿ.ಪಿ.ಆಂಜನೇಯ, ಕರವೇ ರಾಜ್ಯ ಪ್ರಧಾನ ಕಾರ‍್ಯದರ್ಶಿ ರಾಜಘಟ್ಟರವಿ, ಕಲಾವಿದ ಹೊಸಳ್ಳಿ ವಾಸುದೇವ್‌ ಸೇರಿದಂತೆ ವಿವಿಧ ಕನ್ನಡ ಸಂಘಟನೆಗಳ ಮುಖಂಡರು ಹಾಜರಿದ್ದರು.

click me!