Uniform Civil Code: ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆಗೆ ಒತ್ತಡ!

Published : Nov 16, 2022, 06:26 AM ISTUpdated : Nov 16, 2022, 06:27 AM IST
Uniform Civil Code: ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆಗೆ ಒತ್ತಡ!

ಸಾರಾಂಶ

ಕರ್ನಾಟಕದಲ್ಲೂ ಏಕರೂಪ ನಾಗರಿಕ ಸಂಹಿತೆಗೆ ಒತ್ತಡ! ಸರ್ಕಾರಕ್ಕೆ ಹಾಕಲು ಆಡಳಿತಾರೂಢ ಬಿಜೆಪಿಯಿಂದಲೇ ನಿರ್ಧಾರ ಉತ್ತರಾಖಂಡ, ಹಿಮಾಚಲ, ಗುಜರಾತ್‌ ನಂತರ ರಾಜ್ಯದ ಸರದಿ

ಬೆಂಗಳೂರು (ನ.16) : ಉತ್ತರ ಭಾರತದ ಬಿಜೆಪಿ ಆಡಳಿತವಿರುವ ಕೆಲವು ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಅಧಿಕೃತ ಪ್ರಯತ್ನ ನಡೆದಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಈ ಸಂಹಿತೆ ಜಾರಿಗೆ ಮುಂದಾಗುವಂತೆ ಆಡಳಿತಾರೂಢ ಬಿಜೆಪಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಬಿಜೆಪಿ ಪಾಳೆಯದಲ್ಲಿ ಬಿರುಸಿನ ಚರ್ಚೆ ನಡೆದಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಗುರಿಯಾಗಿಸಿಕೊಂಡು ಏಕರೂಪ ನಾಗರಿಕ ಸಂಹಿತೆ ಅಸ್ತ್ರ ಪ್ರಯೋಗಿಸಬೇಕು ಎಂಬ ನಿಲವಿಗೆ ಬಂದಿದೆ ಎಂದು ತಿಳಿದು ಬಂದಿದೆ.

ಗೆದ್ದರೆ ಏಕರೂಪ ನಾಗರಿಕ ಸಂಹಿತೆ: ಹಿಮಾಚಲದಲ್ಲಿ ಬಿಜೆಪಿ ಪ್ರಣಾಳಿಕೆ

ಏನಿದು ಏಕರೂಪ ನಾಗರಿಕ ಸಂಹಿತೆ?

ದೇಶದಲ್ಲಿ ಹಿಂದು, ಮುಸ್ಲಿಂ, ಸಿಖ್ಖರು ಸೇರಿದಂತೆ ವಿವಿಧ ಧರ್ಮಗಳ ಜನರು ವಿವಾಹ, ಆಸ್ತಿ ಹಂಚಿಕೆ ಸೇರಿ ವಿವಿಧ ಉದ್ದೇಶಗಳಿಗೆ ತಮ್ಮ ಸಮುದಾಯದ ವೈಯಕ್ತಿಕ ಕಾನೂನುಗಳನ್ನು ಪಾಲಿಸುತ್ತಿದ್ದಾರೆ. ಎಲ್ಲ ಧರ್ಮದವರಿಗೂ ವಿವಾಹ, ವಿಚ್ಛೇದನ, ಆಸ್ತಿ, ದತ್ತುಗೆ ಸಂಬಂಧಿಸಿದ ವಿಚಾರಗಳಿಗೆ ಒಂದೇ ಕಾನೂನು ರೂಪಿಸುವುದೇ ಏಕರೂಪ ನಾಗರಿಕ ಸಂಹಿತೆ.

ಬಿಜೆಪಿ ಬೇಡಿಕೆ ಏನು?

  • ಉತ್ತರದ ರಾಜ್ಯಗಳಂತೆ ಕರ್ನಾಟಕದಲ್ಲೂ ಏಕರೂಪದ ನಾಗರಿಕ ಸಂಹಿತೆ ಜಾರಿಗೆ ತರಬೇಕು
  •  ಏಕರೂಪದ ನಾಗರಿಕ ಸಂಹಿತೆ ಜಾರಿಗೆ ಅಧ್ಯಯನ ನಡೆಸಲು ಸಮಿತಿಯೊಂದನ್ನು ರಚಿಸಬೇಕು
  • ಅಧ್ಯಯನ ಸಮಿತಿಗೆ ನಿವೃತ್ತ ಜಡ್ಜ್‌ರನ್ನು ನೇಮಿಸಿ, ತಜ್ಞರನ್ನು ಸದಸ್ಯರನ್ನಾಗಿ ಮಾಡಬೇಕು
  •  ತಜ್ಞರ ಸಮಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಬೇಕು
  •  ದಕ್ಷಿಣದಲ್ಲಿ ಬಿಜೆಪಿ ಸರ್ಕಾರವಿರೋದು ಕರ್ನಾಟಕದಲ್ಲಿ ಮಾತ್ರ, ಹೀಗಾಗಿ ವಿಳಂಬ ಮಾಡಬಾರದು

ಈಗಾಗಲೇ ಉತ್ತರಾಖಂಡ, ಹಿಮಾಚಲ ಪ್ರದೇಶ ಹಾಗೂ ಗುಜರಾತ್‌ ಸರ್ಕಾರಗಳು ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ದಿಕ್ಕಿನಲ್ಲಿ ಮೊದಲ ಹೆಜ್ಜೆ ಇರಿಸಿವೆ. ಇತ್ತೀಚೆಗಷ್ಟೇ ಗುಜರಾತ್‌ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಕೆಲದಿನಗಳ ಮೊದಲು ಈ ಏಕರೂಪ ನಾಗರಿಕ ಸಂಹಿತೆ ಜಾರಿ ತರುವ ಉದ್ದೇಶದಿಂದ ಅಧ್ಯಯನ ನಡೆಸಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ಘೋಷಿಸಿತ್ತು. ಅದಕ್ಕೂ ಮೊದಲು ಉತ್ತರಾಖಂಡ ಹಾಗೂ ಹಿಮಾಚಲಪ್ರದೇಶ ಸರ್ಕಾರಗಳು ಇದೇ ಹಾದಿ ಅನುಸರಿಸಿದ್ದವು.

ಉದ್ದೇಶ ಏನು?:

‘ದೇಶದಲ್ಲಿನ ಹಿಂದು, ಮುಸ್ಲಿಂ, ಸಿಖ್ಖರು ಸೇರಿದಂತೆ ದೇಶದ ವಿವಿಧ ಧರ್ಮಗಳ ಜನರು ವಿವಾಹ, ಆಸ್ತಿ ಹಂಚಿಕೆ ಸೇರಿ ವಿವಿಧ ಉದ್ದೇಶಗಳಿಗೆ ತಮ್ಮ ಸಮುದಾಯದ ವೈಯಕ್ತಿಕ ಕಾನೂನುಗಳನ್ನು ಪಾಲಿಸುತ್ತಿದ್ದಾರೆ. ಎಲ್ಲ ಧರ್ಮದವರಿಗೂ ವಿವಾಹ, ವಿಚ್ಛೇದನ, ಆಸ್ತಿ, ದತ್ತುಗೆ ಸಂಬಂಧಿಸಿದ ವಿಚಾರಗಳಿಗೆ ಒಂದೇ ಕಾನೂನು ರೂಪಿಸುವುದೇ ಏಕರೂಪ ನಾಗರಿಕ ಸಂಹಿತೆಯ ಉದ್ದೇಶವಾಗಿದೆ. ಇದು ಅತ್ಯಗತ್ಯವಾಗಿದ್ದು, ಇದನ್ನು ಕರ್ನಾಟಕದಲ್ಲೂ ಜಾರಿಗೊಳಿಸಲು ಪ್ರಯತ್ನ ಆರಂಭವಾಗಬೇಕು. ಪಕ್ಷದ ವತಿಯಿಂದ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದರು.

‘ಇತರ ರಾಜ್ಯಗಳಲ್ಲಿ ಮಾಡಿದಂತೆ ಏಕರೂಪ ನಾಗರಿಕ ಸಂಹಿತೆ ಜಾರಿ ತರುವ ಉದ್ದೇಶದಿಂದ ಅಧ್ಯಯನ ನಡೆಸಲು ಸಮಿತಿಯೊಂದನ್ನು ರಚಿಸಬೇಕು. ಆ ಸಮಿತಿಗೆ ನಿವೃತ್ತ ನ್ಯಾಯಮೂರ್ತಿಗಳನ್ನು ಅಧ್ಯಕ್ಷರನ್ನಾಗಿ ಮಾಡಿ ಹಲವು ತಜ್ಞರನ್ನು ಒಳಗೊಳ್ಳುವಂತಾಗಬೇಕು. ಸಮಿತಿ ಕೂಲಂಕಷವಾಗಿ ಅಧ್ಯಯನ ನಡೆಸಿ ನೀಡುವ ವರದಿಯನ್ನು ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಬಹುದು. ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಏಕೈಕ ರಾಜ್ಯ ಕರ್ನಾಟಕ ಮಾತ್ರ. ಹೀಗಿರುವಾಗ ಈ ವಿಷಯದಲ್ಲಿ ವಿಳಂಬ ಮಾಡದೆ ತಕ್ಷಣ ಸರ್ಕಾರ ಮುಂದೆ ಹೆಜ್ಜೆ ಇಡಬೇಕು ಎಂಬುದನ್ನು ಮನವರಿಕೆ ಮಾಡಿಕೊಡಲಾಗುವುದು’ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯಗಳು ಜಾರಿ ಮಾಡಲು ಸಾಧ್ಯವೇ?:

ಏಕರೂಪ ನಾಗರಿಕ ಸಂಹಿತೆಯನ್ನು ರಾಜ್ಯ ಸರ್ಕಾರಗಳು ಜಾರಿಗೆ ತರಲು ಸಾಧ್ಯವಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಇನ್ನೂ ಗೊಂದಲವಿದೆ. ‘ಸಂವಿಧಾನದ 44ನೇ ಪರಿಚ್ಛೇದದ 4ನೇ ಭಾಗದಲ್ಲಿ, ರಾಜ್ಯ ಸರ್ಕಾರಗಳು ಎಲ್ಲ ನಾಗರಿಕರಿಗೆ ಸಮಾನ ಕಾನೂನು ಜಾರಿಗೆ ತರಬಹುದಾಗಿದೆ ಎಂದು ತಿಳಿಸಲಾಗಿದೆ’ ಎಂದು ಗುಜರಾತ್‌ ಸಚಿವರು ಇತ್ತೀಚೆಗೆ ಹೇಳಿದ್ದರು. ಅದರ ಅನುಸಾರ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಉದ್ದೇಶವಿದೆ ಎಂಬ ವಾದ ಒಂದು ಕಡೆಯಿದೆ.

Uniform Civil Code: ಚುನಾವಣೆಗೂ ಮುನ್ನ ಗುಜರಾತ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ, ಸಮಿತಿ ರಚಿಸಿದ ಸರ್ಕಾರ!

ಆದರೆ, ಮತ್ತೊಂದೆಡೆ, ‘ಏಕರೂಪ ನಾಗರಿಕ ಸಂಹಿತೆ ಜಾರಿ ಅಧಿಕಾರ ಸಂಸತ್ತಿಗೆ ಮಾತ್ರವಿದೆ’ ಎಂಬ ಪ್ರತಿವಾದವೂ ಇದೆ. ಕಾಂಗ್ರೆಸ್‌ ಕೂಡ ಅದನ್ನೇ ಹೇಳುತ್ತಿದೆ. ಆದರೆ, ಸಮಿತಿ ರಚನೆ ಮಾಡುವ ಮೂಲಕ ಈ ವಿಷಯದ ಬಗ್ಗೆ ಚರ್ಚೆ ನಡೆಯಲಿ ಎಂಬ ಆಶಯವನ್ನು ಬಿಜೆಪಿ ಹೊಂದಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!