PSI Recruitment Scam: ಪಿಎಸ್‌ಐ ನೇಮಕ ಆದೇಶಕ್ಕೆ 9 ಶಾಸಕರ ಒತ್ತಡ

Published : Jun 05, 2022, 05:46 AM IST
PSI Recruitment Scam: ಪಿಎಸ್‌ಐ ನೇಮಕ ಆದೇಶಕ್ಕೆ 9 ಶಾಸಕರ ಒತ್ತಡ

ಸಾರಾಂಶ

*  ನೇಮಕಾತಿ ರದ್ದಾಗಿದ್ದರೂ ಪತ್ರ *  ಪ್ರಾಮಾಣಿಕರ ಪರವಾಗಿ ಮೂರೂ ಪಕ್ಷಗಳ ಶಾಸಕರ ಬ್ಯಾಟಿಂಗ್‌ *  ಕಳೆದ ವರ್ಷ 545 ಪಿಎಸ್‌ಐ ಹುದ್ದೆಗಳಿಗೆ ನಡೆದಿದ್ದ ಪರೀಕ್ಷೆ   

ಬೆಂಗಳೂರು(ಜೂ.05): ಪಿಎಸ್‌ಐ ಅಕ್ರಮ ನೇಮಕಾತಿ ಆರೋಪ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿರುವ ವೇಳೆಯಲ್ಲಿಯೇ ಆಡಳಿತಾರೂಢ ಬಿಜೆಪಿ ಸೇರಿದಂತೆ ಮೂರೂ ಪಕ್ಷದ 9 ಶಾಸಕರು ಪ್ರಾಮಾಣಿಕ ಅಭ್ಯರ್ಥಿಗಳ ಪರವಾಗಿ ಬ್ಯಾಟಿಂಗ್‌ ಮಾಡಿದ್ದು, ನೇಮಕಾತಿ ಆದೇಶ ಪ್ರತಿ ನೀಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಪ್ರಕರಣ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದೆ.

ಪತ್ರ ಬರೆದ ಒಂಭತ್ತು ಶಾಸಕರ ಪೈಕಿ ಆರು ಶಾಸಕರು ಬಿಜೆಪಿಯವರಾಗಿದ್ದು, ಇಬ್ಬರು ಕಾಂಗ್ರೆಸ್‌ ಮತ್ತು ಒಬ್ಬರು ಜೆಡಿಎಸ್‌ ಶಾಸಕರಾಗಿದ್ದಾರೆ. ಬಿಜೆಪಿ ಶಾಸಕರಾದ ಪಿ.ರಾಜೀವ್‌, ಸುನೀಲ್‌ ಬಿ.ನಾಯ್ಕ, ಕೆ.ರಘುಪತಿ ಭಟ್‌, ರಾಜಕುಮಾರ್‌ ಪಾಟೀಲ್‌ ತೇಲ್ಕೂರ, ಲಾಲಜಿ ಆರ್‌. ಮೆಂಡನ್‌, ಹರೀಶ್‌ ಪೂಂಜಾ, ಕಾಂಗ್ರೆಸ್‌ನ ಜೆ.ಎನ್‌.ಗಣೇಶ್‌, ಕೆ.ರಾಘವೇಂದ್ರ ಹಿಟ್ನಾಳ್‌ ಮತ್ತು ಜೆಡಿಎಸ್‌ನ ಕೆ.ಎಸ್‌.ಲಿಂಗೇಶ್‌ ಅವರು ಪತ್ರ ಬರೆದಿದ್ದಾರೆ.

PSI Recruitment Scam: ಪಿಎಸ್ಐ ಆಗಲು ಅಕ್ರಮದ ಹಾದಿ ತುಳಿದ ದಂಪತಿಗಳ ಬಂಧನ!

ಅಕ್ರಮ ಎಸಗಿದವರನ್ನು ವೈಜ್ಞಾನಿಕ ತಂತ್ರಜ್ಞಾನ ಬಳಸಿ ಪತ್ತೆ ಮಾಡಬಹುದು. ಹೀಗಾಗಿ ಅಕ್ರಮ ಎಸಗಿದವರನ್ನು ಪತ್ತೆ ಮಾಡಿ ಶಿಕ್ಷೆಗೊಳಪಡಿಸಬೇಕು. ಕೆಲವು ಎಸಗಿದ ಅಕ್ರಮದಿಂದ ಹಲವಾರು ಮಂದಿಗೆ ಅನ್ಯಾಯವಾಗುವುದು ಸರಿಯಲ್ಲ. ಅವರ ರಕ್ಷಣೆಗೆ ನಿಲ್ಲುವುದು ಸರ್ಕಾರ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಮರು ಪರೀಕ್ಷೆಗಿಂತ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಉತ್ತೀರ್ಣರಾದವರಿಗೆ ಆದೇಶ ಪ್ರತಿ ನೀಡಬೇಕು ಎಂದು ಶಾಸಕರು ಪತ್ರದಲ್ಲಿ ಉಲ್ಲೇಖಿಸಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಾಜಕೀಯ ತಿರುವು:

ಈ ಹಿಂದೆ ಗೃಹ ಸಚಿವರು ಪರೀಕ್ಷೆಯನ್ನು ರದ್ದುಪಡಿಸಿದ ಕ್ರಮವನ್ನು ಬಿಜೆಪಿಯ ಇದೇ ಶಾಸಕರು ಸ್ವಾಗತಿಸಿ ಬೆಂಬಲಿಸಿದ್ದರು. ಕಷ್ಟಪಟ್ಟು ಓದಿದವರಿಗೆ ಅಕ್ರಮದಿಂದ ಅನ್ಯಾಯವಾಗಿದೆ. ಆದ್ದರಿಂದ ನೇಮಕಾತಿ ರದ್ದು ಮಾಡಿ ಮರು ಪರೀಕ್ಷೆ ಮಾಡುವಂತೆ ಹೇಳಿ ಗೃಹ ಸಚಿವರ ಕ್ರಮವನ್ನು ಸಮರ್ಥಿಸಿಕೊಂಡಿದ್ದರು. ಇದೀಗ ಸಚಿವರಿಗೆ ಪತ್ರ ಬರೆದು ಆದೇಶ ಪ್ರತಿ ನೀಡುವಂತೆ ಒತ್ತಾಯಿಸಿದ್ದಾರೆ. ಈ ಮೂಲಕ ಇದು ರಾಜಕೀಯಕ್ಕೆ ತಿರುಗಿದೆ. ರಾಜಕೀಯ ಕಾರಣಕ್ಕಾಗಿಯೇ ಪತ್ರ ಬರೆದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಕಳೆದ ವರ್ಷ 545 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ನಡೆದಿದ್ದು, ಪರೀಕ್ಷೆ ಅಕ್ರಮ ನಡೆದಿರುವ ಬಗ್ಗೆ ಇತ್ತೀಚೆಗೆ ಬಹಿರಂಗಗೊಂಡಿತ್ತು. ತನಿಖೆ ಕೈಗೊಂಡ ಪೊಲೀಸರು 50ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ 30ಕ್ಕೂ ಹೆಚ್ಚು ಅಭ್ಯರ್ಥಿಗಳ ಬಂಧನವಾಗಿದೆ. ಅಲ್ಲದೇ, ಕೆಲ ಪೊಲೀಸರ ಬಂಧನವೂ ಆಗಿದೆ. ಪ್ರಕರಣವು ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿ ಚರ್ಚೆಗೆ ಗ್ರಾಸವಾಗಿತ್ತು. ತೀವ್ರ ವಿವಾದ ಸೃಷ್ಟಿಸುತ್ತಿದ್ದಂತೆ ಎಚ್ಚೆತ್ತ ಸರ್ಕಾರವು ಇಡೀ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಈ ಸಂಬಂಧ ಸರ್ಕಾರವು ಮುಂದಿನ ಪ್ರಕ್ರಿಯೆಯನ್ನು ನಡೆಸುತ್ತಿದೆ. ಈ ನಡುವೆ, ಶಾಸಕರ ಪತ್ರವು ರಾಜಕೀಯ ಚರ್ಚೆಗೆ ಕಾರಣವಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌