ಸೋಲಾರ್‌ ಪಾರ್ಕ್‌ಗೆ ಭೂಮಿ ಕೊಟ್ಟ ರೈತರ ಕಲ್ಯಾಣಕ್ಕೆ ಆದ್ಯತೆ: ಸಚಿವ ಸುನಿಲ್‌ ಕುಮಾರ್‌

Kannadaprabha News   | Asianet News
Published : Sep 30, 2021, 07:12 AM ISTUpdated : Sep 30, 2021, 07:16 AM IST
ಸೋಲಾರ್‌ ಪಾರ್ಕ್‌ಗೆ ಭೂಮಿ ಕೊಟ್ಟ ರೈತರ ಕಲ್ಯಾಣಕ್ಕೆ ಆದ್ಯತೆ: ಸಚಿವ ಸುನಿಲ್‌ ಕುಮಾರ್‌

ಸಾರಾಂಶ

*   ಪಾವಗಡದಲ್ಲಿರುವ ದೇಶದ ಅತಿದೊಡ್ಡ ಸೌರ ವಿದ್ಯುತ್‌ ಪಾರ್ಕ್‌ನಲ್ಲಿ ಸಚಿವ ಸುನೀಲ್‌ ಪರಿಶೀಲನೆ *   ಸಿಎಸ್‌ಆರ್‌ ನಿಧಿ ಬಳಸಿ ಮೂಲಸೌಕರ್ಯ ಅಭಿವೃದ್ಧಿಗೆ ಸೂಚನೆ *   ಸೋಲಾರ್‌ ಪಾರ್ಕ್‌ನಿಂದ 1,850 ಮೆಗಾ ವ್ಯಾಟ್‌ ವಿದ್ಯುತ್‌ ರಾಜ್ಯಕ್ಕೆ ಲಭ್ಯ

ಬೆಂಗಳೂರು(ಸೆ.30): ದೇಶದ ಅತಿ ದೊಡ್ಡ ಸೋಲಾರ್‌ ಪಾರ್ಕ್(Solar Park) ನಿರ್ಮಾಣಕ್ಕಾಗಿ ಭೂಮಿ ನೀಡಿದ ಪಾವಗಡ ರೈತರ ಕುಟುಂಬಗಳ ಕಲ್ಯಾಣ ಹಾಗೂ ಆ ಭಾಗದ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌(Sunil Kumar) ಹೇಳಿದ್ದಾರೆ.

ಪಾವಗಡದ ನಾಗಲಮಡಿಕೆಯಲ್ಲಿ 2,050 ಮೆಗಾವ್ಯಾಟ್‌ ಸಾಮರ್ಥ್ಯದ ಸೋಲಾರ್‌ ಪಾರ್ಕ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಯೋಜನೆಗಾಗಿ 12,718 ಎಕರೆ ಜಮೀನನ್ನು ರೈತರು ಗುತ್ತಿಗೆಗೆ ನೀಡಿದ್ದು, ಅವರಿಗೆ ವಾರ್ಷಿಕ 21 ಸಾವಿರ ರು. ನೀಡಲಾಗುತ್ತಿದೆ. ಆದರೆ ಶಾಲೆ, ಕುಡಿಯುವ ನೀರು ಮೊದಲಾದ ಮೂಲಸೌಕರ್ಯ ಅಭಿವೃದ್ಧಿ ಮಾಡಬೇಕೆಂದು ಸ್ಥಳೀಯ ರೈತರು ಮನವಿ ಮಾಡಿದ್ದಾರೆ. ಹೀಗಾಗಿ, ಸೋಲಾರ್‌ ವಿದ್ಯುತ್‌ ಉತ್ಪಾದಕ ಕಂಪನಿಗಳ ಸಿಎಸ್‌ಆರ್‌ ನಿಧಿ ಬಳಸಿ ಮೂಲಸೌಕರ್ಯ ಅಭಿವೃದ್ಧಿ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.

ವಿದ್ಯುತ್‌ ಉತ್ಪಾದಕ ಕಂಪನಿಗಳ ಸಿಎಸ್‌ಆರ್‌ ನಿಧಿಯಿಂದ 67.5 ಕೋಟಿ ರು. ಸಂಗ್ರಹವಾಗಿದೆ. ಈ ಹಣ ಬಳಸಿ ಶಾಲೆ, ರಸ್ತೆಗಳ ನಿರ್ಮಾಣ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಈ ಭಾಗದ ರೈತರು ನೀರಾವರಿ ಇಲ್ಲದೆ ಬರಡಾಗಿದ್ದ ಜಮೀನನ್ನು ಸರ್ಕಾರಕ್ಕೆ ನೀಡಿ ದೇಶದ ಇಂಧನ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಆದ್ದರಿಂದ ಈ ಭಾಗದ ಸರ್ವತೋಮುಖ ಅಭಿವೃದ್ಧಿಗೆ, ಭೂಮಿ ನೀಡಿದ ರೈತರ(Farmers) ಕುಟುಂಬಗಳ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದರು.

ಏಷ್ಯಾದ ಅತೀ ದೊಡ್ಡ ಸೌರ ಪಾರ್ಕ್ ವಿವಾದ: ಮೋದಿಗೆ ಡಿಕೆಶಿ ಟಾಂಗ್!

ಈ ಭಾಗದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಜೊತೆಗೆ ತುರ್ತು ಪರಿಸ್ಥಿತಿಯಲ್ಲಿ ಅಗ್ನಿಶಾಮಕ ವಾಹನದ ಅಗತ್ಯವಿದೆ ಎಂದು ಸ್ಥಳೀಯರು ಸಮಸ್ಯೆ ಹೇಳಿಕೊಂಡರು. ಇದಕ್ಕೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಶಿಕ್ಷಣ ಸಚಿವರು ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಕನ್ನಡ ನಾಮಫಲಕ ಅಳವಡಿಕೆಗೆ ತಾಕೀತು:

ಸೋಲಾರ್‌ ಪಾರ್ಕ್ನಲ್ಲಿ ಇಂಗ್ಲಿಷ್‌ ನಾಮಫಲಕಗಳ ಅಳವಡಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವರು, ಕೂಡಲೇ ಈ ನಾಮಫಲಕಗಳನ್ನು ತೆರವುಗೊಳಿಸಿ ಕನ್ನಡದ(Kannada) ಫಲಕಗಳನ್ನು ಅಳವಡಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನವೀಕರಿಸಬಹುದಾದ ಇಂಧನ ನೀತಿ ಜಾರಿ

ರಾಜ್ಯದಲ್ಲಿ 10 ಸಾವಿರ ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸುವ ಗುರಿಯೊಂದಿಗೆ ನೂತನ ನವೀಕರಿಸಬಹುದಾದ ಇಂಧನ ನೀತಿ ತರಲಾಗುವುದು ಎಂದು ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಸೋಲಾರ್‌ ಪಾರ್ಕ್ನಿಂದ 1,850 ಮೆಗಾ ವ್ಯಾಟ್‌ ವಿದ್ಯುತ್‌ ರಾಜ್ಯಕ್ಕೆ ಲಭ್ಯವಾಗುತ್ತಿದ್ದು, 200 ಮೆಗಾವ್ಯಾಟ್‌ ಅನ್ನು ಹೊರರಾಜ್ಯಕ್ಕೆ ಪೂರೈಸಲಾಗುತ್ತಿದೆ. 2020-21 ನೇ ಸಾಲಿನಲ್ಲಿ ತಿಂಗಳಿಗೆ 377.43 ದಶಲಕ್ಷ ಯುನಿಟ್‌ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು, 2022 ರ ವೇಳೆಗೆ 175 ಗಿಗಾ ವ್ಯಾಟ್‌ಗೆ ನವೀಕರಿಸಬಹುದಾದ ಇಂಧನ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡುವ ಗುರಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 10,000 ಮೆಗಾ ವ್ಯಾಟ್‌ ಉತ್ಪಾದಿಸುವ ಗುರಿಯೊಂದಿಗೆ ನೂತನ ನವೀಕರಿಸಬಹುದಾದ ಇಂಧನ ನೀತಿ ತರಲಾಗುವುದು ಎಂದು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್