
ಬೆಂಗಳೂರು (ಜೂ.02): ‘ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು’ ಎಂಬ ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ರಾಜ್ಯದಲ್ಲಿ ಭಾನುವಾರವೂ ಪ್ರತಿಭಟನೆ ಮುಂದುವರೆದಿದೆ. ಚಾಮರಾಜನಗರ, ಬೀದರ್, ರಾಯಚೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಸಲಾಗಿದೆ. ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಪೊರಕೆ ಚಳವಳಿ ನಡೆಸಿ, ಕಮಲ್ ಭಾವಚಿತ್ರಕ್ಕೆ ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಬೀದರ್ನ ಔರದ್ನಲ್ಲಿ ಕರವೇ ಕಾರ್ಯಕರ್ತರು ಕಮಲ್ ಹೊಸ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದೆಂದು ಆಗ್ರಹಿಸಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಕಮಲ್ ಕನ್ನಡಿಗರ ಬಳಿ ಕ್ಷಮೆ ಕೇಳದಿದ್ದರೇ ರಾಜ್ಯದಲ್ಲಿ‘ಥಗ್ ಲೈಫ್’ ಸಿನಿಮಾ ನಿಷೇಧಿಸಬೇಕೆಂದು ಆಗ್ರಹಿಸಿ, ಕಮಲ್ರ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
"ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು " ಎಂಬ ತಪ್ಪು ಮತ್ತು ದುರುದ್ದೇಶಪೂರಿತ ಹೇಳಿಕೆ ನೀಡಿರುವ ಕಮಲ್ ಹಾಸನ್ ಅವರ "ಥಗ್ ಲೈಫ್ " ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ತಡೆಯಬೇಕು ಮತ್ತು ಕೂಡಲೇ ಏಳು ಕೋಟಿ ಕನ್ನಡಿಗರ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಮಲ್ ಹಾಸನ್ ಪ್ರತಿಕೃತಿ ಸುಟ್ಟು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕರವೇ ನಗರಾಧ್ಯಕ್ಷ ಶಿವಣ್ಣಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ, ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು ಎಂಬ ತಪ್ಪು ಮತ್ತು ದುರುದ್ದೇಶಪೂರಿತ ಹೇಳಿಕೆಯನ್ನು ನಟ-ರಾಜಕಾರಣಿ ಕಮಲ್ ಹಾಸನ್ ಅವರು ನೀಡಿದ್ದಾರೆ.
ಈ ಸುಳ್ಳು ಮತ್ತು ಆಧಾರರಹಿತ ಹೇಳಿಕೆಯು ಕನ್ನಡ ಭಾಷೆಯ ಶ್ರೀಮಂತ ಇತಿಹಾಸ, ಸಂಸ್ಕೃತಿ ಮತ್ತು ಸ್ವಾಭಿಮಾನಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಕನ್ನಡಿಗರಿಂದ ತೀವ್ರ ಖಂಡನೆ ಮತ್ತು ವಿರೋಧ ವ್ಯಕ್ತವಾದರೂ, ಕಮಲ್ ಹಾಸನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸದೆ, ತಮ್ಮ ಹೇಳಿಕೆಗೆ ಬದ್ಧರಾಗಿರುವುದು ಕನ್ನಡಿಗರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯು, ಕಮಲ್ ಹಾಸನ್ ಅವರ ಈ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ, ಅವರ ಹೊಸ ಚಿತ್ರ "ಥಗ್ ಲೈಫ್ " ಇದರ ಬಿಡುಗಡೆ ದಿನಾಂಕ ೫ ಜೂನ್ಗೆ ನಿಗದಿಯಾಗಿದೆ. ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ತಡೆಯುವ ನಿರ್ಧಾರವನ್ನು ನಾವು ಕೈಗೊಂಡಿದ್ದೇವೆ.
ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ. ಆದರೆ ಕರ್ನಾಟಕದಲ್ಲಿ ಈ ಚಿತ್ರದ ಬಿಡುಗಡೆಗೆ ಯಾವುದೇ ಸಹಕಾರವನ್ನು ನೀಡದಂತೆ ವಿನಂತಿಸುತ್ತೇವೆ. ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡದಂತೆ ಒತ್ತಾಯಿಸಿ ನಮ್ಮ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿದ್ದೇವೆ. ಕನ್ನಡ ಭಾಷೆಯ ಸ್ವಾಭಿಮಾನವನ್ನು ಮತ್ತು ಹಿರಿಮೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಹೋರಾಟ ಮಾಡಿರುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ಕಮಲ್ ಹಾಸನ್ ಅವರ ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದು ತಮ್ಮ ವಶಕ್ಕೆ ತೆಗೆದುಕೊಂಡರು. ಇದೇ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಉಪಾಧ್ಯಕ್ಷ ತೋಫಿಕ್ ಪಾಶಾ, ರಂಗರಾಜು, ಪ್ರದೀಪ್ ಗೌಡ, ಹರೀಶ್ ಇತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ