
ಬೆಂಗಳೂರು (ಫೆ.3) ಭಾರತೀಯ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸುವ ಪ್ರವೃತ್ತಿ ಮತ್ತೆ ಮುಂದುವರಿದಿದೆ. ಪದೇಪದೇ ಕನ್ನಡದ ಮೇಲೆ ಇಂತಹ ಮಲತಾಯಿ ಧೋರಣೆ ತೋರುತ್ತಿರುವುದು ಕನ್ನಡಿಗ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರೈಲ್ವೆ ಬೋರ್ಡ್ನ ಈ ನಿರ್ಧಾರದಿಂದಾಗಿ ಸ್ಥಳೀಯ ಭಾಷೆಯಲ್ಲೇ ಪರೀಕ್ಷೆ ಬರೆಯುವ ಕನಸು ಕಂಡಿದ್ದ ಸಾವಿರಾರು ಅಭ್ಯರ್ಥಿಗಳು ಈಗ ಕಂಗಾಲಾಗಿದ್ದಾರೆ.
ರೈಲ್ವೆ ಇಲಾಖೆಯ ಬಡ್ತಿ ಹುದ್ದೆಗಳ ಪರೀಕ್ಷೆಯ ಅಧಿಸೂಚನೆಯಲ್ಲಿ ಕನ್ನಡಕ್ಕೆ ಸಂಪೂರ್ಣವಾಗಿ ಅವಕಾಶ ನಿರಾಕರಿಸಲಾಗಿದೆ. ಪರೀಕ್ಷಾರ್ಥಿಗಳು ಕಡ್ಡಾಯವಾಗಿ ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲೇ ಪರೀಕ್ಷೆ ಬರೆಯಬೇಕು ಎಂದು ಅಧಿಸೂಚನೆ ಹೊರಡಿಸಲಾಗಿದೆ. ಈ ನಿಯಮದಿಂದಾಗಿ ವರ್ಷಾನುಗಟ್ಟಲೆ ಸೇವೆ ಸಲ್ಲಿಸಿ, ಬಡ್ತಿಯ ನಿರೀಕ್ಷೆಯಲ್ಲಿದ್ದ ಕನ್ನಡಿಗ ಸಿಬ್ಬಂದಿಗೆ ಭಾಷೆಯ ಸಮಸ್ಯೆ ದೊಡ್ಡ ಗೋಡೆಯಾಗಿ ಪರಿಣಮಿಸಿದೆ.
ಈ ಬಾರಿ ರೈಲ್ವೆ ಬೋರ್ಡ್ ಮಾರ್ಗಸೂಚಿಯಂತೆ ಪರೀಕ್ಷೆಯನ್ನು CBT (Computer Based Test) ಅಂದರೆ ಗಣಕಯಂತ್ರದ ಮೂಲಕ ನಡೆಸಲಾಗುತ್ತಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿರುವುದರಿಂದ ಕನ್ನಡದಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲು ಸಾಧ್ಯವಿಲ್ಲ ಎಂಬ ವಿಚಿತ್ರ ತಾಂತ್ರಿಕ ಕಾರಣವನ್ನು ಇಲಾಖೆ ನೀಡುತ್ತಿದೆ. ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದರೂ, ಕನ್ನಡದಲ್ಲಿ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎನ್ನುವ ಇಲಾಖೆಯ ಉತ್ತರ ಹಾಸ್ಯಾಸ್ಪದವಾಗಿದೆ ಎಂದು ಪರೀಕ್ಷಾರ್ಥಿಗಳು ದೂರಿದ್ದಾರೆ.
ಪರೀಕ್ಷಾರ್ಥಿಗಳ ಭವಿಷ್ಯ ಅಯೋಮಯ
ಇಲಾಖೆಯ ಈ ಹಠಮಾರಿ ಧೋರಣೆಯಿಂದಾಗಿ ಕನ್ನಡಿಗ ಪರೀಕ್ಷಾರ್ಥಿಗಳಿಗೆ ದಿಕ್ಕು ತೋಚದಂತಾಗಿದೆ. ಹಿಂದಿ ಮತ್ತು ಇಂಗ್ಲಿಷ್ ಭಾಷೆ ಮೇಲೆ ಹಿಡಿತವಿಲ್ಲದ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸುವ ಆತಂಕ ಎದುರಾಗಿದೆ. ರಾಜ್ಯ ಸರ್ಕಾರ ಮತ್ತು ಕನ್ನಡ ಸಂಘಟನೆಗಳು ಈ ಕೂಡಲೇ ಮಧ್ಯಪ್ರವೇಶಿಸಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ