
ಬೆಳಗಾವಿ (ನ.24): ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ನೇರವಾಗಿ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ, 'ಯಾರು ಮುಖ್ಯಮಂತ್ರಿಯಾಗಬೇಕು?' ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, 'ನಾನು ಮುಖ್ಯಮಂತ್ರಿ ಆಗಬೇಕು. 2028ಕ್ಕೆ ಸಮಯ ಬರಲಿ, ಆಗೋಣ' ಎಂದು ಘೋಷಿಸುವುದರ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.
ಇದೇ ವೇಳೆ ಬಿಜೆಪಿಯಲ್ಲಿ ತಮ್ಮ ಹಿರಿತನದ ಬಗ್ಗೆ ಮಾತನಾಡಿದ ಅವರು, 'ಬಿಜೆಪಿ ಪಕ್ಷದಲ್ಲಿ ನಾನು ಮತ್ತು ಆರ್ ಅಶೋಕ ಇಬ್ಬರೇ ಏಳು ಬಾರಿ ಶಾಸಕರಾಗಿ ಗೆದ್ದು ಬಂದಿರುವ ಹಿರಿಯರು. ಉಳಿದವರು ಎಲ್ಲರೂ ಕಿರಿಯರಿದ್ದಾರೆ. ನಾನು ಸಿಎಂ ಆಗ್ತಿನಿ ಅಂತಾ ಮಾಧ್ಯಮಗಳಿಗೆ ಹೇಳಿದ್ರೆ ಆಗುತ್ತಾ? ಎಂದು ಪ್ರಶ್ನಿಸಿದರು.
ಇತ್ತೀಚೆಗೆ ರಾಜ್ಯ ಬಿಜೆಪಿಯಲ್ಲಿ ಕೇಳಿಬರುತ್ತಿರುವ ನಾಯಕತ್ವದ ಕುರಿತು ಸ್ಪಷ್ಟಪಡಿಸಿದ ಜಾರಕಿಹೊಳಿ ಅವರು, ಡಿಕೆಶಿ ಅಷ್ಟೇ ಅಲ್ಲ, ನಾನು ವಿಜಯೇಂದ್ರ ನಾಯಕತ್ವವನ್ನೂ ಒಪ್ಪಲ್ಲ ಎಂದು ಖಡಾಖಂಡಿತವಾಗಿ ಹೇಳಿದರು. ಆದಾಗ್ಯೂ, ಈ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯಲ್ಲಿ ರಾಜಕೀಯ ಕ್ರಾಂತಿ ಇಲ್ಲ:
ಬಿಜೆಪಿಯಲ್ಲಿ ರಾಜಕೀಯ ಕ್ರಾಂತಿ ಆಗುವುದಿಲ್ಲ, ಪಕ್ಷದ ವರಿಷ್ಠರು ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ತಾವು ಬದ್ಧವಾಗಿರುತ್ತೇವೆ ಎಂದು ಪುನರುಚ್ಚರಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಸಹೋದರ ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು ಎಂಬ ವಿಚಾರದ ಕುರಿತು ಕೇಳಿದಾಗ, 'ಅದರ ಬಗ್ಗೆ ನನಗೆ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದ ಶಾಸಕ ಎಂದು ಜಾರಕಿಹೊಳಿ ಜಾರಿಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ