
ಉತ್ತರ ಕನ್ನಡ(ಜ.10): ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನಲ್ಲಿರುವ ವಸತಿ ಶಾಲೆಯೊಂದರ ಕಳಪೆ ವ್ಯವಸ್ಥೆ ಕಂಡು ಪೋಷಕರೇ ಬೆಚ್ಚಿಬಿದ್ದಿದ್ದಾರೆ. ದಿಢೀರನೇ ಶಾಲೆಗೆ ಭೇಟಿ ಕೊಟ್ಟ ಪೋಷಕರು ಕೊಠಡಿ ಪರಿಶೀಲನೆ ವೇಳೆ ಆಘಾತಕಾರಿ ವಿಷಯ ಬಯಲಾಗಿದ್ದು, ಮಕ್ಕಳ ಭವಿಷ್ಯದ ಜೊತೆ ಶಿಕ್ಷಣ ಸಂಸ್ಥೆ ಚೆಲ್ಲಾಟವಾಡುತ್ತಿರುವುದು ಕಂಡುಬಂದಿದೆ.
ಹಳಿಯಾಳ ತಾಲೂಕಿನ ಕೇರವಾಡ ಕ್ರಾಸ್ ಸಮೀಪವಿರುವ ಸಾಂಬ್ರಾಣಿ ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಗಂಭೀರ ಅವ್ಯವಸ್ಥೆ ಆರೋಪ ಕೇಳಿಬಂದಿದೆ. 2025–26ನೇ ಶೈಕ್ಷಣಿಕ ಸಾಲಿನ ಪಾಲಕರ ಸಭೆಗೆ ಬಂದಿದ್ದ ಪೋಷಕರು ಶಾಲೆ ಹಾಗೂ ಹಾಸ್ಟೆಲ್ ಪರಿಶೀಲಿಸಿದಾಗ ಬೆಚ್ಚಿಬೀಳುವ ದೃಶ್ಯಗಳು ಕಂಡಿವೆ. ಆಹಾರ ದಾಸ್ತಾನು ಕೊಠಡಿಯಲ್ಲಿದ್ದ ಅಕ್ಕಿ ಮೂಟೆಗಳ ಮೇಲೆ ಇಲಿ, ಹಲ್ಲಿಯ ಮಲ ಕಂಡುಬಂದಿದ್ದು, ನುಸಿ ಹಾಗೂ ಕಸಕಡ್ಡಿಗಳಿಂದ ತುಂಬಿದ ಅಕ್ಕಿಯನ್ನೇ ಮಕ್ಕಳಿಗೆ ಅನ್ನ ಮಾಡಿ ಬಡಿಸಲಾಗುತ್ತಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ.
ವಿದ್ಯಾರ್ಥಿಗಳಿಗೆ ಪೂರೈಕೆಯಾಗುತ್ತಿರುವ ಆಹಾರದ ಗುಣಮಟ್ಟ ಅತ್ಯಂತ ಕಳಪೆಯಾಗಿದ್ದು, ಸುಮಾರು 5 ಕ್ವಿಂಟಾಲ್ ಬಳಸಲು ಯೋಗ್ಯವಲ್ಲದ ಗೋಧಿ ಹಾಗೂ ಕೊಳೆತ ತರಕಾರಿಗಳನ್ನು ದಾಸ್ತಾನು ಕೊಠಡಿಯಲ್ಲಿ ಪತ್ತೆಹಚ್ಚಲಾಗಿದೆ. 'ನಮ್ಮ ಮಕ್ಕಳು ಇಂತಹ ನಾರುವ ಆಹಾರವನ್ನೇ ತಿಂದು ಬದುಕುತ್ತಿದ್ದಾರಾ?' ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ. ಅಲ್ಲದೆ, ಕುಡಿಯುವ ನೀರಿನ ಟ್ಯಾಂಕ್ಗಳು ಸಹ ಕೊಳಕಾಗಿದ್ದು, ರೋಗರುಜಿನಗಳಿಗೆ ಆಹ್ವಾನ ನೀಡುವಂತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಸತಿ ನಿಲಯ ಹಾಗೂ ಶೌಚಾಲಯಗಳನ್ನು ಮಕ್ಕಳಿಂದಲೇ ಸ್ವಚ್ಛ ಮಾಡಿಸಲಾಗುತ್ತಿದೆ ಎಂಬ ಆಘಾತಕಾರಿ ಆರೋಪ ಕೇಳಿಬಂದಿದೆ. ಈ ಬಗ್ಗೆ ಧ್ವನಿ ಎತ್ತುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗಣಿತ ಶಿಕ್ಷಕ ಪ್ರಶಾಂತ್ ಎಂಬುವವರು ಕಿರುಕುಳ ನೀಡುತ್ತಿದ್ದಾರೆ ಎಂದು ಪಾಲಕರು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಸಮಸ್ಯೆ ಬಗ್ಗೆ ಮಾತನಾಡಿದರೆ ಶಾಲೆಯಿಂದ ಹೊರಹಾಕಿ ಟಿಸಿ ನೀಡುವುದಾಗಿ ಶಿಕ್ಷಕರು ಬೆದರಿಕೆ ಹಾಕುತ್ತಿದ್ದಾರೆ ಎಂದು ಪೋಷಕರು ಸಭೆಯಲ್ಲಿ ಕಿಡಿಕಾರಿದ್ದಾರೆ.
ಪರಿಶೀಲನೆಗೆ ಅಡ್ಡಿಪಡಿಸಿದ ಮೇಲ್ವಿಚಾರಕ: ಪಾಲಕರಿಂದ ಸಭೆ ಬಹಿಷ್ಕಾರ
ಆರಂಭದಲ್ಲಿ ಪೋಷಕರು ಒಳಗಡೆ ಹೋಗಿ ಪರಿಶೀಲನೆ ನಡೆಸಲು ವಸತಿ ನಿಲಯದ ಮೇಲ್ವಿಚಾರಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಇದರಿಂದ ಆಕ್ರೋಶಗೊಂಡ ವಿವಿಧ ತಾಲೂಕುಗಳಿಂದ ಬಂದಿದ್ದ ಪಾಲಕರು ಸಭೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಬಳಿಕ ಅನಿವಾರ್ಯವಾಗಿ ಪರಿಶೀಲನೆಗೆ ಅವಕಾಶ ನೀಡಿದಾಗ ಶಾಲೆಯ ಅಸಲಿ ಬಣ್ಣ ಬಯಲಾಗಿದೆ. ಪ್ರಾಂಶುಪಾಲರು ಸಮಜಾಯಿಷಿ ನೀಡಲು ಪ್ರಯತ್ನಿಸಿದರೂ ಪೋಷಕರು ಕೇಳುವ ಸ್ಥಿತಿಯಲ್ಲಿರಲಿಲ್ಲ. ತಕ್ಷಣವೇ ಮೇಲಾಧಿಕಾರಿಗಳು ಸ್ಥಳಕ್ಕೆ ಬಂದು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ