
ಚಿಕ್ಕಮಗಳೂರು (ಜೂ.5): ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಆರ್ಸಿಬಿ ವಿಜಯೋತ್ಸವದ ವೇಳೆ ನೂಕುನುಗ್ಗಲಿನಿಂದ 11 ಜನ ಸಾವನ್ನಪ್ಪಿದ ದುರಂತ ಘಟನೆಗೆ ಸಿಟಿ ರವಿ ಅವರು ತೀವ್ರ ಸಂತಾಪ ಸೂಚಿಸಿದರು. ಈ ಘಟನೆ 'ಸರ್ಕಾರದ ಪ್ರಾಯೋಜಿತ ಹತ್ಯಾಕಾಂಡ ಎಂದು ಕರೆದರು ಆಕ್ರೋಶ ವ್ಯಕ್ತಪಡಿಸಿದರು.
ಪ್ರಚಾರದ ಹಪಾಹಪಿಯಿಂದ ದುರಂತ:
ಇದು ಸರ್ಕಾರದ ಪ್ರಚಾರದ ಹಪಹಪಿತನದಿಂದ ಸಂಭವಿಸಿದ ಸಾವು. ಜನ ಸೇರಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿತ್ತು, ಸರ್ಕಾರವೇ ಈ ಕಾರ್ಯಕ್ರಮವನ್ನು ಘೋಷಿಸಿತ್ತು. ಆದರೂ, ಜನರ ಸುರಕ್ಷತೆಗೆ ಯಾವುದೇ ಕ್ರಮ ಕೈಗೊಳ್ಳದೆ ಸರ್ಕಾರ ನಿರ್ಲಕ್ಷ್ಯ ವಹಿಸಿದ ಪರಿಣಾಮ ಕಾಲ್ತುಳಿತ ಸಂಭವಿಸಿದೆ. ಸರ್ಕಾರಕ್ಕೆ ಜನರ ರಕ್ಷಣೆ ಆದ್ಯತೆಯಾಗಬೇಕಿತ್ತೇ ಹೊರತು, ಪ್ರಚಾರದ ತೆವಲು ಅಲ್ಲ. ಈ ದುರಂತಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನೈತಿಕ ಹೊಣೆಯನ್ನು ಹೊರಬೇಕು ಎಂದು ಒತ್ತಾಯಿಸಿದರು.
ಅಲ್ಲು ಅರ್ಜುನ್ ಜೈಲಿಗೆ ಕಳಿಸಿದಿರಿ, ಈಗ ನೀವು ಹೋಗಬೇಕು ತಾನೆ?
ಈ ಹಿಂದೆ ಮಹಿಳೆಯೊಬ್ಬಳು ಮೃತಪಟ್ಟಿದ್ದಕ್ಕೆ ತೆಲುಗು ನಟ ಅಲ್ಲು ಅರ್ಜುನ್ ಎ1 ಮಾಡಿ ಜೈಲಿಗೆ ಹಾಕಿದ್ರಿ . ಈಗ ನೀವೇ ಜೈಲಿಗೆ ಹೋಗಬೇಕು, ಮಾನ ಮಾರ್ಯಾದೆ ಇದ್ರೆ ರಾಜೀನಾಮೆ ಕೊಡಿ. ಬೇರೆಯವರ ಪ್ರಕರಣಗಳಾದಾಗ ಸಂವಿಧಾನ ಕಾನೂನು ಎನ್ನುವ ನೀವು, ನಿಮ್ಮದೇ ಪ್ರಯೋಜಿತಾ ಸಾವುಗಳಾದಾಗ ಅದು ನಮ್ದಲ್ಲ ಅಂತ ಕಾಗಕ್ಕ-ಗೂಬಕ್ಕನ ಕಥೆ ಹೇಳೋಕೆ ಶುರು ಮಾಡ್ತೀರಿ ಎಂದು ಹರಿಹಾಯ್ದರು.
ನ್ಯಾಯಾಂಗ ತನಿಖೆ ಆಗಬೇಕು:
ಸಿ.ಟಿ. ರವಿ ಮ್ಯಾಜಿಸ್ಟ್ರೇಟ್ ತನಿಖೆಯನ್ನು ವಿರೋಧಿಸಿದ್ದು, ಈ ಪ್ರಕರಣದ ತನಿಖೆಯನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು. ಮ್ಯಾಜಿಸ್ಟ್ರೇಟ್ ತನಿಖೆಯಿಂದ ಸತ್ಯ ಬಯಲಿಗೆ ಬರುವುದಿಲ್ಲ ಎಂದ ಸಿಟಿ ರವಿ ಅವರು, ಮೃತರ ಕುಟುಂಬಗಳಿಗೆ ತಕ್ಷಣವೇ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಈ ಘಟನೆಯ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಸರ್ಕಾರ ಪೂರ್ವ ತಯಾರಿ ಇಲ್ಲದೇ ಆತುರದಲ್ಲಿ ಕಾರ್ಯಕ್ರಮ ಮಾಡಲಾಗಿದೆ. ಸರ್ಕಾರದ ಈ ನಿರ್ಲಕ್ಷ್ಯದಿಂದ 11ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯಾವುದೇ ಪೂರ್ವಸಿದ್ಧತೆ ಇಲ್ಲದೆ ಕಾರ್ಯಕ್ರಮ ಆಯೋಜಿಸಿದ್ದು ದುರಂತಕ್ಕೆ ಕಾರಣವಾಯಿತು ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ