
ಚಾಮರಾಜನಗರ(ಮಾ.02): ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲ ಕಾಡಿನಲ್ಲಿ ವಾಸಿಸುವ ಬೇಡಗಂಪಣರನ್ನು ಎಸ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬಿಜೆಪಿ ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಿದ ಬಳಿಕ ಬೇಡಗಂಪಣ ಮತ್ತು ಸೋಲಿಗರೊಂದಿಗೆ ನಡೆದ ಸಂವಾದದಲ್ಲಿ ಬುಧವಾರ ಮಾತನಾಡಿ, ಸೋಲಿಗರ ಸಮುದಾಯಕ್ಕೆ ವಿಶೇಷ ಗಮನ ನೀಡಲಿದ್ದೇವೆ. ಕಾಡಿನಲ್ಲಿ ವಾಸಿಸುವವರಿಗೆ ಸೌಲಭ್ಯ ಕೊಡಲು ಅರಣ್ಯ ಕಾಯ್ದೆಗೆ ಕೆಲ ತಿದ್ದುಪಡಿ ತರಲಾಗುವುದು ಎಂದು ಪ್ರಕಟಿಸಿದರು.
ಮಹದೇಶ್ವರ ಬೆಟ್ಟದ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು. ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಅನುದಾನವನ್ನು ಮಹಿಳಾ ಸಂಘಕ್ಕೂ ಕೊಡಲಾಗುವುದು. ಸಣ್ಣ, ಅತಿ ಸಣ್ಣ ಕೈಗಾರಿಕೆ ಸ್ಥಾಪನೆಗೆ ಗರಿಷ್ಠ ಅನುದಾನ ನೀಡಲಾಗುವುದು. ಕಾಡಂಚಿನಲ್ಲಿರುವ ಜನರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ನಡ್ಡಾ ಕಾರ್ಯಕ್ರಮಕ್ಕೇ ಸಚಿವ ಸೋಮಣ್ಣ ಗೈರು..!
ವಿಜಯ ಸಂಕಲ್ಪ ರಥ ಯಾತ್ರೆಗೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಿದ್ದೇವೆ. ಬಿಜೆಪಿ ಗೆಲುವಿನ ಸಂಕಲ್ಪ ಸಿದ್ಧಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
ಇದೇ ವೇಳೆ ಪ್ರಧಾನಿ ಮೋದಿ ವಿಶ್ವಮಾನ್ಯ ನಾಯಕರು ಎಂದ ಅವರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಗ್ಯಗಳ ಸರದಾರ. ರಾಜ್ಯದ ಜನರಿಗೆ ಅವರು ಲೂಟಿ ಭಾಗ್ಯ ನೀಡಿದ್ದಾರೆ. ಅವರ ಅನ್ನಭಾಗ್ಯ ಕಳ್ಳತನ ಮಾಡುವವರ ಪಾಲಿನ ಭಾಗ್ಯವಾಗಿತ್ತು ಎಂದರು.
ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ ಮಾಡುತ್ತಿದ್ದಾರೆ. ಆದರೆ ತಿಹಾರ್ ಜೈಲಿಗೆ ಹೋಗಿ ಬಂದ ಡಿ.ಕೆ.ಶಿವಕುಮಾರ್ ಅವರೇ ನಿಜವಾದ ಭ್ರಷ್ಟರು ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ