
ಬೆಂಗಳೂರು (ಫೆ.19) ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಶಾಲೆಗಳ ಪ್ರವೇಶದ್ವಾರದಲ್ಲಿರುವ ಘೋಷವಾಕ್ಯ ಬದಲಾವಣೆ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮೊದಲು ಶಾಲೆಗಳ ಪ್ರವೇಶದ್ವಾರದಲ್ಲಿದ್ದ 'ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ" ಘೋಷವಾಕ್ಯ. ಇದೀಗ ಈ ಘೋಷವಾಕ್ಯ ಬದಲು 'ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು' ಎಂದು ಬದಲಾವಣೆ ಮಾಡಲಾಗಿದೆ. ಸರ್ಕಾರದ ಈ ನಡೆಯಿಂದ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರೆ ಟ್ವಿಟರ್ ಎಕ್ಸ್ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆಗಳೆಂದರೆ ಪವಿತ್ರ ತಾಣ ಇದನ್ನು ಅರ್ಥೈಸಿಕೊಳ್ಳದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ಮನಸ್ಥಿತಿ, ಇಲಾಖೆಯ ಹಿರಿಯ IAS ಅಧಿಕಾರಿಯ ಮೂಲಕ ಸರ್ಕಾರಿ ವಸತಿ ಶಾಲೆಗಳ ದ್ವಾರದಲ್ಲಿ ಬರೆಸಲಾಗಿದ್ದ "ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ” ಎಂಬ ಘೋಷವಾಕ್ಯವನ್ನು ಬದಲಿಸಿ “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ" ಎಂದು ಬರೆಸಲು ಪ್ರಾರಂಭಿಸಿದೆ. ಮೊನ್ನೆಯಷ್ಟೇ ಇದೇ ಶಾಲೆಗಳಲ್ಲಿ ಧಾರ್ಮಿಕ ಹಬ್ಬ , ಪೂಜೆಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿ ಇದರಿಂದ ‘ಕೈ’ಸುಡಲು ಆರಂಭವಾದ ಬೆನ್ನಲ್ಲೇ ಆದೇಶ ಹಿಂಪಡೆದು ತನ್ನ ಹಿಂದೂ ವಿರೋಧಿ ಮನಸ್ಥಿತಿಯನ್ನು ಅದುಮಿಟ್ಟುಕೊಂಡಿದ್ದ ಸರ್ಕಾರ ಇದೀಗ ಮತ್ತೊಂದು ಮತಿಗೇಡಿತನಕ್ಕೆ ‘ಕೈ’ಹಾಕಿ ವಿಕೃತಿ ಮೆರೆದಿದೆ, ಜತೆಗೇ ವಿದ್ಯಾರ್ಥಿಗಳನ್ನು ಶಿಕ್ಷಕರ ವಿರುದ್ಧ ಎತ್ತಿಕಟ್ಟಲು ಈ ಸಾಲುಗಳು ಪ್ರಚೋದನೆ ನೀಡುವಂತಿದೆ ಎಂದಿದ್ದಾರೆ.
ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ ಸರ್ಕಾರ! ಜ್ಞಾನದೇಗುಲದಲ್ಲೇ ಹೊತ್ತಿಕೊಳ್ತು ಮತ್ತೊಂದು ಕಿಡಿ!
ಕೈ ಮುಗಿದು ಒಳೆಗೆ ಬಾ ….ಎಂಬ ರಾಷ್ಟ್ರಕವಿ ಕುವೆಂಪು ಅವರ ಪದ್ಯದ ಸಾಲುಗಳಿಂದ ಪ್ರೇರಣೆ ಪಡೆದು ನಾಡಿನ ಅನೇಕ ಶಿಕ್ಷಣ ಸಂಸ್ಥೆಗಳು ‘"ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಎಂದು ಘೋಷವಾಕ್ಯ ಬರೆಸಿವೆ, ಇದನ್ನೇ ಸರ್ಕಾರಿ ಶಾಲೆಗಳಲ್ಲೂ ಅನುಸರಿಸಲಾಗಿದೆ. ‘ವಿದ್ಯಾ ದದಾತಿ ವಿನಯಂ….ವಿದ್ಯೆ ಎಂದರೆ ವಿನಯ, ವಿನಯ ವಿದ್ದೆಡೆ ಮಾತ್ರ ವಿದ್ಯೆ ಒಲಿಯುವುದು, ವಿದ್ಯಾಲಯವನ್ನು ದೇಗುಲದಂತೆ ಭಾವಿಸಿ "ಕೈ ಮುಗಿದು ಒಳಗೆ ಬನ್ನಿ’’ ಎಂಬ ಸದ್ವಿನಯ, ಸಂಸ್ಕಾರ, ಶ್ರದ್ಧಾಗುಣಗಳನ್ನು ನೆನಪಿಸುವ ಈ ಸಾಲು ಯಾವ ಧರ್ಮದವರನ್ನು ನೋಯಿಸುತ್ತದೋ ತಿಳಿಯದಾಗಿದೆ? ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಜನರಿಗೆ ಸ್ಪಷ್ಟನೆ ನೀಡಬೇಕಿದೆ ಎಂದು ಆಗ್ರಹಿಸಿದ್ದಾರೆ.
ದೇಶದ ಆರನೇ ಹಾಗೂ ಕರ್ನಾಟಕ ರಾಜ್ಯದ ಮೊದಲನೇ ವಿಶ್ವವಿದ್ಯಾಲಯವಾಗಿರುವ ಶ್ರೀಮನ್ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಮೈಸೂರು ವಿಶ್ವವಿದ್ಯಾಲಯದ ಧ್ಯೇಯ ವಾಕ್ಯ ‘ನಹಿ ಜ್ಞಾನೇನ ಸದೃಶಂ’ ಅಂದರೆ ‘ಜ್ಞಾನಕ್ಕೆ ಸಮನಾದುದು ಯಾವುದು ಇಲ್ಲ’ ಎಂಬುದು, ಈ ಘೋಷವಾಕ್ಯ ವಿಶ್ವವಿದ್ಯಾಲಯದ ಕಾರ್ಯಸೌಧವನ್ನು ಅಲಂಕರಿಸಿದೆ ಜತೆಗೇ ವಿದ್ಯೆಯ ಅಧಿದೇವತೆ ಸರಸ್ವತಿಯನ್ನೂ ಪಡಿಮೂಡಿಸಲಾಗಿದೆ. ತನ್ನ ಅಧೀನದಲ್ಲಿದೆ ಎಂಬ ಅಹಃ ನಿಂದ , ಭಗವದ್ಗೀತೆಯ ಈ ಶ್ಲೋಕ ಹಾಗೂ ಸರಸ್ವತಿಯನ್ನು ತೆಗೆಸುವ
ಐತಿಹಾಸಿಕ ಪ್ರಮಾದ ವೆಸಗಲೂ ಈ ಕಾಂಗ್ರೆಸ್ ಸರ್ಕಾರ ಹಿಂದೇಟು ಹಾಕುವುದಿಲ್ಲ ಎನಿಸುತ್ತಿದೆ.
ವಸತಿ ಶಾಲೆಗಳ ಮೇಲೆ ಬರೆಸಲಾಗಿದ್ದ ಈ ಹಿಂದಿನ “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ" ಘೋಷ ವಾಕ್ಯ ಮತ್ತೆ ಬರೆಸದೇ ಹೋದರೆ ಹಾಗೂ ಈ ಆದೇಶದ ಹಿಂದಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳದೇ ಹೋದರೆ ಮುಂದಾಗುವ ಪರಿಣಾಮಗಳನ್ನು ಸರ್ಕಾರ ಎದುರಿಸಬೇಕಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ತುಮಕೂರು : ಮಾದರಿ ಶಾಲೆಗಳ ಮಾರ್ಗದರ್ಶಿ: 5 ಶಾಲೆಗಳು ಆಯ್ಕೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ