
ಬೆಂಗಳೂರು (ಮೇ.04): ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು ಎನ್ನಲಾದ ಮೈಸೂರು ಜಿಲ್ಲೆ ಕೆ.ಆರ್. ನಗರದ ಮಹಿಳೆಯ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಶುಕ್ರವಾರ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. ಈ ಸ್ಥಳದಲ್ಲಿ ಮಹಿಳೆ ಇದ್ದಾಳೆಯೇ ಎಂಬ ಶೋಧ ನಡೆಸಿದೆ ಈ ತಂಡಗಳು ಗುರುವಾರ ತಡರಾತ್ರಿಯಿಂದಲೇ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು, ಬೆಂಗಳೂರು ನಗರ ಸೇರಿದಂತೆ ವಿವಿಧೆಡೆ ತಲಾಶ್ ನಡೆಸುತ್ತಿವೆ.
ಎಚ್.ಡಿ.ರೇವಣ್ಣ ಅವರ ಹೊಳೆನರಸೀಪುರ, ಪಡುವಲಹಿಪ್ಪೆ, ಬೆಂಗಳೂರು ನಿವಾಸಿಗಳು, ತೋಟದ ಮನೆಗಳು, ರೇವಣ್ಣ ಅವರ ಸಂಬಂಧಿಕರು, ಸ್ನೇಹಿತರ ಮನೆಗಳು, ತೋಟದ ಮನೆಗಳು ಸೇರಿದಂತೆ ಸುಮಾರು 40ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿವೆ. ಎಲ್ಲಿಯೂ ಸದ್ಯಕ್ಕೆ ಆ ಮಹಿಳೆಯ ಸುಳಿವು ಸಿಕ್ಕಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ. ಮಹಿಳೆ ಅಪಹರಣ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಮೇ 2ರ ರಾತ್ರಿ ಎಫ್ಐಆರ್ ದಾಖಲಾಗಿತ್ತು. ದೂರುದಾರರು ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಸತೀಶ್ ಬಾಬು ಎಂಬುವವರ ಮೇಲೆ ಅಪಹರಣದ ಆರೋಪ ಮಾಡಿದ್ದಾರೆ.
ನಾಪತ್ತೆಯಾಗಿರುವ ಮಹಿಳೆಗೆ ಜೀವ ಬೆದರಿಕೆ ಇರುವ ಬಗ್ಗೆಯೂ ದೂರುದಾರರು ತಿಳಿಸಿದ್ದಾರೆ. ಇದೇ ವೇಳೆ, ನಾಪತ್ತೆಯಾಗಿರುವ ಮಹಿಳೆ ಮೇಲೆ ಸಂಸದ ಪ್ರಜ್ವಲ್ ರೇವಣ್ಣ ಈ ಹಿಂದೆ ಬೆದರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪವೂ ಕೇಳಿ ಬಂದಿದೆ. ಹೀಗಾಗಿ ಈ ಪ್ರಕರಣವು ಮಹತ್ವ ಪಡೆದುಕೊಂಡಿದೆ. ಆ ಮಹಿಳೆಯ ಜೀವಕ್ಕೆ ಅಪಾಯ ಇರುವುದರಿಂದ ಎಸ್ಐಟಿ ಅಧಿಕಾರಿಗಳು ಮಹಿಳೆಯ ಪತ್ತೆಗಾಗಿ ರಾತ್ರೋರಾತ್ರಿ ಸುಮಾರು 25ಕ್ಕೂ ಅಧಿಕ ಪೊಲೀಸರನ್ನೊಳಗೊಂಡ ವಿಶೇಷ ತಂಡಗಳನ್ನು ರಚಿಸಿದ್ದಾರೆ.
400 ರೇಪ್: ರಾಹುಲ್ ಗಾಂಧಿ ಹೇಳಿಕೆಗೆ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ
ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಅರ್ಜಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಗೊಳಗಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಶುಕ್ರವಾರ ನಡೆಯಲಿದೆ. ಎಚ್.ಡಿ.ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಂಡಿತು. ರೇವಣ್ಣ ಪರ ವಾದ ಮಂಡಿಸಿದ ವಕೀಲ ಮೂರ್ತಿ ಡಿ. ನಾಯ್ಕ್, ‘ನಮ್ಮ ಕಕ್ಷಿದಾರರ ವಿರುದ್ಧ ಇರುವ ಎಫ್ಐಆರ್ನಲ್ಲಿ ಜಾಮೀನು ನೀಡಬಹುದಾದ ಆರೋಪಗಳಿವೆ. ಆದರೆ, ಮ್ಯಾಜಿಸ್ಟ್ರೇಟ್ಗೆ ಅತ್ಯಾಚಾರ ಆರೋಪ ಸಲ್ಲಿಸಲು ಅರ್ಜಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ರೇವಣ್ಣ ಅವರು ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದಾರೆ. ಕಕ್ಷಿದಾರರಿಗೆ ನಿರೀಕ್ಷಣಾ ಜಾಮೀನು ನೀಡಬೇಕು’ ಎಂದು ಕೋರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ