ರೋಹಿಣಿ ಸಿಂಧೂರಿ ಕೇಸ್‌: ಡಿ.ರೂಪಾಗೆ ಮ್ಯಾಜಿಸ್ಪ್ರೇಟ್‌ ಕೋರ್ಟ್‌ ಸಮನ್ಸ್‌

By Kannadaprabha NewsFirst Published Mar 26, 2023, 7:44 AM IST
Highlights

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ 1 ಕೋಟಿ ರು. ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಸಂಬಂಧ ಆರೋಪಿಯಾದ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರಿಗೆ ನಗರದ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ. 

ಬೆಂಗಳೂರು (ಮಾ.26): ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ 1 ಕೋಟಿ ರು. ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಸಂಬಂಧ ಆರೋಪಿಯಾದ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರಿಗೆ ನಗರದ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ. ರೋಹಿಣಿ ಸಿಂಧೂರಿ ದಾಖಲಿಸಿರುವ ಖಾಸಗಿ ಕ್ರಿಮಿನಲ್‌ ದೂರಿನ ವಿಚಾರಣೆ ನಡೆಸಿದ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಪ್ರೇಟ್‌ ಕೋರ್ಟ್‌, ಶುಕ್ರವಾರ (ಮಾ.24) ಈ ಆದೇಶ ಮಾಡಿ ವಿಚಾರಣೆ ಮುಂದೂಡಿದೆ. ರೂಪಾ ಮೌದ್ಗಿಲ್‌ ಅವರು 2023ರ ಫೆ.18 ಮತ್ತು 19ರಂದು ತಮ್ಮ ಫೇಸ್‌ಬುಕ್‌ ಅಕೌಂಟ್‌ನಲ್ಲಿ ತಮ್ಮ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. 

ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ತಮ್ಮ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪಾ ಅವರು ಈ ಕೃತ್ಯ ಎಸಗಿದ್ದಾರೆ. ಅವರ ಈ ಕೃತ್ಯ ತಮ್ಮ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಕೋರ್ಟ್‌ಗೆ ಮಾ.3ರಂದು ಕ್ರಿಮಿನಲ್‌ ಮಾನನಷ್ಟಮೊಕದ್ದಮೆ ದಾಖಲಿಸಿದ್ದರು. ಅಲ್ಲದೆ, ಮಾನಹಾನಿ ಮಾಡಿ ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ.ರೂಪಾ ಅವರಿಂದ ಒಂದು ಕೋಟಿ ರುಪಾಯಿಯನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಸಿಂಧೂರಿ ಅವರು ದೂರಿನಲ್ಲಿ ಕೋರಿದ್ದಾರೆ.

ರೋಹಿಣಿ ವಿರುದ್ಧ ಮತ್ತೆ ರೂಪಾ ಫೇಸ್ಬುಕ್‌ ಪೋಸ್ಟ್‌: ಪತ್ರಿಕೆಯಲ್ಲಿ ಪ್ರಕಟವಾದ ವರದಿ ಲಗತ್ತಿಸಿ ಗರಂ

ರೂಪಾ ವಿರುದ್ಧ ಸಿಂಧೂರಿ 1 ಕೋಟಿ ರು. ಮಾನನಷ್ಟ ಕೇಸು: ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಗರದ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮಾನನಷ್ಟಮೊಕದ್ದಮೆ ದಾಖಲಿಸಿದ್ದಾರೆ. ಡಿ.ರೂಪಾ ಮೌದ್ಗಿಲ್‌ ಅವರು ಫೇಸ್‌ಬುಕ್‌, ಪತ್ರಿಕೆ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಮಾನಹಾನಿ ಮಾಡಿದ್ದಾರೆ. ಆದ್ದರಿಂದ, ಒಂದು ಕೋಟಿ ಹಣವನ್ನು ಪರಿಹಾರವಾಗಿ ಕೊಡಿಸಿಕೊಡಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಕೋರಿ ರೋಹಿಣಿ ಸಿಂಧೂರಿ ನಗರದ 24ನೇ ಎಸಿಎಂಎಂ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ರೋಹಿಣಿ ಸಿಂಧೂರಿ ಪರ ಹಾಜರಾದ ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರು, ದೂರುದಾರರು ಚಾಮರಾಜನಗರ ಹಾಗೂ ಮೈಸೂರಿನ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ಆರೋಪಿ ಡಿ.ರೂಪಾ, ದೂರುದಾರರ ವಿರುದ್ಧ ಕಪೋಲಕಲ್ಪಿತ ಆರೋಪ ಮಾಡಿದ್ದಾರೆ. ಆದ್ದರಿಂದ ದೂರನ್ನು ವಿಚಾರಣೆಗೆ ಅಂಗೀಕರಿಸಬೇಕು. ಆರೋಪಿ ರೂಪಾ ಮೌದ್ಗಿಲ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಅವರು ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿದರು. ರೂಪಾ ಅವರು ಇದೇ ಫೆ.18 ಮತ್ತು 19ರಂದು ತಮ್ಮ ಫೇಸ್‌ಬುಕ್‌ ಅಕೌಂಟ್‌ನಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. 

IAS vs IPS: ಡಿ.ರೂಪಾ, ರೋಹಿಣಿ ವಿರುದ್ಧ ಇಲಾಖಾ ವಿಚಾರಣೆಗೆ ಆದೇಶ

ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರುದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದ್ದಾರೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ದೂರಿನಲ್ಲಿ ರೋಹಿಣಿ ವಿವರಿಸಿದ್ದಾರೆ. ಅಲ್ಲದೆ, ಐಎಎಸ್‌ ನಿಯಮಗಳಿಗೆ ವಿರುದ್ಧವಾಗಿ ಮಾಧ್ಯಮಗಳ ಮುಂದೆ ಬಹಿರಂಗವಾಗಿ ನನ್ನನ್ನು ಟೀಕೆ ಮಾಡಿದಾರೆ. ಇದು ನನಗೆ ಮಾತ್ರವಲ್ಲದೆ ಸರ್ಕಾರಕ್ಕೂ ಮುಜುಗುರ ಉಂಟು ಮಾಡಿದೆ. ಆದ್ದರಿಂದ, ನನಗಾಗಿರುವ ಮಾನನಷ್ಟಕ್ಕೆ ಒಂದು ಕೋಟಿ ರು. ಪರಿಹಾರವಾಗಿ ಕೊಡಿಸಿಕೊಡಬೇಕು. ರೂಪಾ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ರೋಹಿಣಿ ಕೋರಿದ್ದಾರೆ.

click me!