
ಬೆಂಗಳೂರು (ಸೆ.11): ಕನ್ನಡ ಚಿತ್ರರಂಗದಲ್ಲಿ ಜೀವಮಾನ ಸೇವೆಯನ್ನು ಪರಿಗಣಿಸಿದ ರಾಜ್ಯ ಸರ್ಕಾರ ನಟ ಡಾ.ವಿಷ್ಣುವರ್ಧನ್ ಹಾಗೂ ಇತ್ತೀಚೆಗೆ ಇಹಲೋಕ ತ್ಯಜಿಸಿದ ನಟಿ ಬಿ. ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಇಬ್ಬರಿಗೂ ಮರಣೋತ್ತರ ಪ್ರಶಸ್ತಿ ನೀಡಲಾಗುತ್ತದೆ. ಜೊತೆಗೆ, ಕನ್ನಡದ ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದ ಎಲ್ಲ ಸಿನಿಮಾ ಗಣ್ಯರಿಂದ ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ ಕೇಳಿಬಂದಿತ್ತು. ಕಳೆದೊಂದು ತಿಂಗಳಿಂದ ವಿಷ್ಣುವರ್ಧನ್ಗೆ ಕರ್ನಾಟಕ ಪ್ರಶಸ್ತಿ ನೀಡಲೇಬೇಕು ಎಂದು ನೂರಕ್ಕೂ ಅಧಿಕ ಹಿರಿಯ ಕಲಾವಿದರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಿದ್ದರು.
ಇತ್ತೀಚೆಗೆ ಬೆಂಗಳೂರಿನ ಅಭಿಮಾನ್ ಸ್ಟೂಡಿಯೋದಲ್ಲಿದ್ದ ವಿಷ್ಣುವರ್ಧನ್ ಸ್ಮಾರಕವನ್ನು ರಾತ್ರೋರಾತ್ರಿ ತೆರವು ಮಾಡಲಾಗಿದ್ದರಿಂದ, ಅಭಿಮಾನಿಗಳ ಆಕ್ರೋಶ ಕಟ್ಟೆ ಒಡೆದಿತ್ತು. ಅಭಿಮಾನ್ ಸ್ಟೂಡಿಯೋದಲ್ಲಿ 20 ಅಡಿ ಜಾಗ ಕೊಡದ ಸರ್ಕಾರದ ವಿರುದ್ಧ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದರು. ಇದೀಗ ಸಾಹಸಸಿಂಹ ವಿಷ್ಣುವರ್ಧನ್ಗೆ ಕರ್ನಾಟಕ ಪ್ರಶಸ್ತಿ ನೀಡುವ ಮೂಲಕ ಎಲ್ಲರ ಆಕ್ರೋಶ ತಣಿಸುವ ಕಾರ್ಯಕ್ಕೆ ಮುಂದಾಗಿದೆ.
ಆಸ್ಪತ್ರೆಗಳ ನಿರ್ಮಾಣ: ಬೆಂಗಳೂರಿನ ಯಲಹಂಕ ತಾಲ್ಲೂಕಿನ ಬೆಳ್ಳಹಳ್ಳಿ ಮತ್ತು ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ತಲಾ ₹50 ಕೋಟಿ ವೆಚ್ಚದಲ್ಲಿ, 100 ಹಾಸಿಗೆ ಸಾಮರ್ಥ್ಯದ ಎರಡು ಅತ್ಯಾಧುನಿಕ ಆಸ್ಪತ್ರೆಗಳನ್ನು ನಿರ್ಮಿಸಲು ಸಂಪುಟ ಅನುಮೋದನೆ ನೀಡಿದೆ. ಒಟ್ಟು ₹100 ಕೋಟಿ ವೆಚ್ಚದಲ್ಲಿ ಈ ಕಾಮಗಾರಿಗಳು ನಡೆಯಲಿವೆ.
ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಹಾಗೂ ಅರಣ್ಯಾಧಾರಿತ ಸೂಕ್ಷ್ಮ ಸಮುದಾಯಗಳ 6,856 ವಸತಿ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಸೋಲಿಗ, ಹಸಲರು, ಗೌಡಲು, ಸಿದ್ಧಿ, ಕುಡಿಯ, ಮಲೆಕುಡಿಯ, ಕಾಡುಕುರುಬ, ಇರುಳಿಗ, ಬೆಟ್ಟ ಕುರುಬ, ಮತ್ತು ಪಣಿಯನ್ ಸಮುದಾಯಗಳಿಗೆ ಸೇರಿದ ಈ ಕುಟುಂಬಗಳಿಗಾಗಿ ₹160 ಕೋಟಿ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲು ಅನುಮೋದನೆ ದೊರೆತಿದೆ. ಈ ಮಹತ್ವಾಕಾಂಕ್ಷಿ ಯೋಜನೆಗೆ 'ಮುಖ್ಯಮಂತ್ರಿಗಳ ಆದಿವಾಸಿ ಗೃಹ ಭಾಗ್ಯ ಯೋಜನೆ' ಎಂದು ಹೆಸರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ