
ಬೆಂಗಳೂರು (ಜ.26): ಸಂಗೊಳ್ಳಿ ರಾಯಣ್ಣನ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪ್ರತಿ ಸರ್ಕಾರಿ ಕಾಲೇಜಿನಲ್ಲಿ ಸ್ಥಾಪಿಸಬೇಕೆಂದು ಆದೇಶ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ (ರಿ) ವತಿಯಿಂದ ದೇವರಾಜ ಅರಸು ವೃತ್ತದ (ಖೋಡೆ ಸರ್ಕಲ್) ಬಳಿ ಆಯೋಜಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 192ನೇ ಸ್ಮರಣೋತ್ಸವ ಅಂಗವಾಗಿ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿ ಮಾತನಾಡಿದರು.
ನಮ್ಮ ಮಕ್ಕಳಿಗೆ ಯಾರು ನಿಜವಾಗಿಯೂ ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಸ್ವಾತಂತ್ರ್ಯಕ್ಕೆ ಹೋರಾಡಿದರು ಎಂದು ತಿಳಿಯಬೇಕು. ನಮ್ಮ ಮಕ್ಕಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನು ಗುರುತಿಸುವ ಕೆಲಸವಾಗಬೇಕು. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡುವ ಬಗ್ಗೆ ಆ ಭಾಗದ ನಾಯಕರನ್ನು ವಿಶ್ವಾಸಕ್ಕೆ ಪಡೆದು ತೀರ್ಮಾನ ಮಾಡಲಾಗುವುದು. ಸಂಗೊಳ್ಳಿ ರಾಯಣ್ಣನ ಸ್ಫೂರ್ತಿ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೂ ಭಾರತ ಸುರಕ್ಷಿತವಾಗಿ ಇರಲಿದೆ. ಸಂಗೊಳ್ಳಿ ರಾಯಣ್ಣ ಮಾಡಿದ ಕಾರ್ಯಗಳಲ್ಲಿ ಒಂದೆರಡನ್ನಾದರೂ ನಾವು ಮಾಡಿದರೆ ದೇಶಕ್ಕೆ ಒಳಿತಾಗಲಿದೆ ಎಂದರು.
ಸುಧಾಕರ್ 1 ಸವಾಲಿಗೆ ನಲುಗಿದ ಕಾಂಗ್ರೆಸ್: ಸಿಎಂ ಬೊಮ್ಮಾಯಿ
40 ವರ್ಷ ಮುನ್ನವೇ ಸ್ವಾತಂತ್ರ್ಯ ಹೋರಾಟ: ನೀವು ಒಬ್ಬ ಸಂಗೊಳ್ಳಿ ರಾಯಣ್ಣನನ್ನು ನೇಣಿಗೆ ಹಾಕಿದರೆ ಪ್ರತಿ ಮನೆಯಲ್ಲಿ ಒಬ್ಬ ಸಂಗೊಳ್ಳಿ ರಾಯಣ್ಣ ಹುಟ್ಟುತ್ತಾನೆ ಎಂದಿದ್ದರು. ಸ್ವತಂತ್ರದ ಮೊದಲನೇ ಸ್ವಾತಂತ್ರ್ಯ ಹೋರಾಟಕ್ಕೂ 40 ವರ್ಷ ಮುನ್ನವೇ ದೇಶದ ಮೊದಲ ಸ್ವಾತಂತ್ರ್ಯ ಹೋರಾಟ ಮಾಡಿದ್ದು ಕಿತ್ತೂರು ರಾಣಿ ಚೆನ್ನಮ್ಮ. ಅವರೆಲ್ಲರೂ ಹೋರಾಟ ಮಾಡಿರದಿದ್ದರೆ, ಇಷ್ಟು ಬೇಗ ಸ್ವಾತಂತ್ರ್ಯ ಲಭಿಸುತ್ತಿರಲಿಲ್ಲ. ಅವರ ಸಾಹಸದ ಕಥೆ ಮಕ್ಕಳಿಗೆ ಹೇಳುವುದು ಅಗತ್ಯ. ಸ್ವತಂತ್ರ ಬಂದ ನಂತರ ಒಗ್ಗಟ್ಟಿನಿಂದ, ಮುಂದುವರೆದರೆ ಮಾತ್ರ ಈ ದೇಶಕ್ಕೆ ಭವಿಷ್ಯವಿದೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದರು.
ರಾಯಣ್ಣನ ಶೌರ್ಯ, ದೇಶಭಕ್ತಿ ಇಂದಿಗೂ ಜೀವಂತ: ಸಂಗೊಳ್ಳಿ ರಾಯಣ್ಣ ಇಂದಿಗೂ ನಮ್ಮ ನಡುವೆ ಜೀವಂತವಿದ್ದಾರೆ. ಸಾವಿನ ನಂತರವೂ ನಮ್ಮ ನಡುವೆ ಇದ್ದಾರೆ. ಅವರ ಸಾಹಸ , ಶೌರ್ಯ, ಧೈರ್ಯ, ದೇಶಭಕ್ತಿಗಳ ವಿಚಾರದಲ್ಲಿ ಪ್ರೇರಣಾ ಶಕ್ತಿಯಾಗಿದ್ದಾರೆ. ಸಂಗೊಳ್ಳಿ ರಾಯಣ್ಣ ಸ್ಮರಣೆಗಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದು, ಬೆಂಗಳೂರಿನ ರೈಲು ನಿಲ್ದಾಣಕ್ಕೆ ಅವರ ಹೆಸರು, ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆ ಮಾಡುವುದು ಬಹಳ ಯೋಗ್ಯ ಕೆಲಸ ವಾಗಿದೆ. ಈ ಸ್ಥಳ ಪಡೆಯಲೂ ಸಣ್ಣ ಹೋರಾಟವಾಯಿತು. ವಾಟಾಳ್ ನಾಗರಾಜ್, ರೇವಣ್ಣ ಎಲ್ಲರೂ ಸೇರಿ ಈ ಕೆಲಸವನ್ನು ಮಾಡಿದ್ದಾರೆ ಎಂದರು.
ಸಿದ್ದು ಆಡಳಿತದ 59 ಪ್ರಕರಣ ಲೋಕಾಯುಕ್ತ ತನಿಖೆಗೆ: ಸಿಎಂ ಬೊಮ್ಮಾಯಿ
184 ಕೋಟಿ ವೆಚ್ಚದಲ್ಲಿ ರಾಯಣ್ಣ ವಸತಿ ಶಾಲೆ: ರಾಜ್ಯದಲ್ಲಿ 184 ಕೋಟಿ ರೂ.ಗಳ ವೆಚ್ಚದಲ್ಲಿ ಸಂಗೊಳ್ಳಿ ರಾಯಣ್ಣ ವಸತಿ ಶಾಲೆಯನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ನಮ್ಮ ಮನವಿಯ ಮೇರೆಗೆ ರಕ್ಷಣಾ ಶಾಲೆಯನ್ನು ನೀಡಿ ಈಗಾಗಲೇ ಶಾಲೆ ಪ್ರಾರಂಭವಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ. ಸಂಗೊಳ್ಳಿ ರಾಯಣ್ಣನ ಹೆಸರಿನ ಶಾಲೆ ಸೇನಾನಿಗಳಿಗೆ ತರಬೇತಿ ನೀಡುವ ಶಾಲೆಯಾಗಿದೆ.ನಂದಗಡದಲ್ಲಿ ಸ್ಮಾರಕ, ರಾಕ್ ಗಾರ್ಡನ್, ವಸ್ತು ಸಂಗ್ರಹಾಲಯ ನಿರ್ಮಾಣವಾಗುತ್ತಿದೆ. ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿದೆ. ಇವೆಲ್ಲಾ ಬಹಳ ಅಗತ್ಯ ವಿರುವ ಕೆಲಸಗಳು ಎಂದರು.
ರಾಯಣ್ಣನ ಹುಟ್ಟು, ಸಾವು ಪವಿತ್ರ ದಿನಗಳು: ಕ್ರಾಂತಿವೀರ ಸಂಗೊಳ್ಳಿ ಅಪ್ರತಿಮ ದೇಶಭಕ್ತ, ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ಭಾರತದ ಸ್ವತಂತ್ರ ಹೋರಾಟದ ಕಹಳೆಯನ್ನು ಕಿತ್ತೂರು ರಾಣಿ ಚನ್ನಮ್ಮನೊಂದಿಗೆ ಊದಿದ ಮಹಾಸೇನಾನಿ. ಇವರ ಸ್ಮರಣೆಯನ್ನು ಮಾಡುವುದು ನಮ್ಮೆಲ್ಲರ ಕರ್ತವ್ಯ. ಅವರು ಹುಟ್ಟಿದ್ದು ಆಗಸ್ಟ್ 15. ಅವರನ್ನು ನೇಣಿಗೇರಿಸಿದ ದಿನ ಜನವರಿ 26. ಭಾರತದ ಇತಿಹಾಸದಲ್ಲಿ ವಿಶಿಷ್ಟವಾದ ಎರಡು ಪ್ರವಿತ್ರ ದಿನಗಳಂದು ಸಂಗೊಳ್ಳಿ ರಾಯಣ್ಣನ ಹುಟ್ಟು ಮತ್ತು ಸಾವು ಆಗಿರುವುದು ಕಾಕತಾಳೀಯ ಎಂದರು.
ಮೋಸದಿಂದ ಸಂಗೊಳ್ಳಿ ರಾಯಣ್ಣ ಸೆರೆ: ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರು ಮೋಸದಿಂದ ಸೆರೆ ಹಿಡಿದು, ಹುಲಿಯನ್ನು ಹಿಡಿದಿದ್ದೇವೆ. ಇನ್ನೊಬ್ಬ ಸಂಗೊಳ್ಳಿ ರಾಯಣ್ಣ ಹುಟ್ಟಬಾರದು ಎಂದು ನೇಣಿಗೇರಿಸಿದರು. ಖಾನಾಪುರದ ನಂದಗಡದಲ್ಲಿ ಇದು ಜರುಗಿದಾಗ ಎಲ್ಲರ ಕಣ್ಣಿನಲ್ಲಿ ನೀರಿತ್ತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಈ ವೇಳೆ ಸಚಿವರಾದ ಎಂ.ಟಿ. ಬಿ. ನಾಗರಾಜ್, ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಮಾಜಿ ಶಾಸಕ ವಾಟಾಳ್ ನಾಗರಾಜ್, ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ