
ಬೆಂಗಳೂರು (ಸೆ.13): ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವುದಕ್ಕಾಗಿ 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, 2,200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಣ ಶಿಕ್ಷಕರು ಮತ್ತು 100 ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆ ಮೂಲಗಳ ಪ್ರಕಾರ, 2500 ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆ ಪ್ರಸ್ತಾವನೆಗೆ ಇದೀಗ ಒಪ್ಪಿಗೆ ಸಿಕ್ಕಿದೆ.
ಇದರಿಂದ ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಾತಿಗೆ ಸೂಕ್ತ ಅಧಿಸೂಚನೆ ಸಿದ್ಧಪಡಿಸಿ ಪ್ರಕಟಿಸಬೇಕಿದೆ. ಪ್ರಸ್ತುತ 15 ಸಾವಿರ ಪದವೀಧರ ಶಿಕ್ಷಕರ ನೇಮಕ (6ರಿಂದ 8ನೇ ತರಗತಿ) ಪ್ರಕ್ರಿಯೆ ಪ್ರಗತಿಯಲ್ಲಿದೆ. 15 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದ ದಿನದಿಂದಲೂ ಪ್ರೌಢ ಶಾಲಾ ಶಿಕ್ಷಕ ಹುದ್ದೆ ಆಕಾಂಕ್ಷಿಗಳು ತಮಗೆ ಅವಕಾಶ ಯಾವಾಗ ಎಂದು ಪ್ರಶ್ನಿಸುತ್ತಿದ್ದರು. 2014-15ರ ನಂತರ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ನಡೆದಿರಲಿಲ್ಲ. ಏಳೆಂಟು ವರ್ಷಗಳ ಬಳಿಕ ಇದೀಗ ಆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಸದ್ಯ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 6 ಸಾವಿರಕ್ಕೂ ಹೆಚ್ಚಿನ ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಶಿಕ್ಷಣ ಸಚಿವ ನಾಗೇಶ್ ಮೇಲೆ ಭ್ರಷ್ಟಾಚಾರ ಆರೋಪ ಮಾಡಿಲ್ಲ: ಕ್ಯಾಮ್ಸ್
ಸರ್ಕಾರಿ ಪಿಯು ಕಾಲೇಜಿಗೆ 778 ಬೋಧಕರ ನೇಮಕ: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಸಚಿವರು, ಸರ್ಕಾರಿ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಅಕ್ರಮ ಶಾಲೆ ಆರಂಭದಲ್ಲಿ ಸಿದ್ದು ಪಾಲೆಷ್ಟು?: ‘ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರದ ಅವಧಿಯಲ್ಲಿ ಸಿಬಿಎಸ್ಇ ಶಾಲೆಗಳ ಆರಂಭಕ್ಕೆ ನಿರಾಕ್ಷೇಪಣಾ ಪತ್ರ (ಎನ್ಒಸಿ) ನೀಡಲು ನಿಯಮಗಳನ್ನೇ ರೂಪಿಸದೆ ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ನಿಮ್ಮ ಪಾತ್ರ ಎಷ್ಟಿದೆ?’. ಇದು ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಖಾಸಗಿ ಶಾಲಾ ಸಂಘಟನೆ ರುಪ್ಸಾ ಆರೋಪವನ್ನು ಪ್ರಸ್ತಾಪಿಸಿ ಈ ಅಕ್ರಮದಲ್ಲಿ ಶಿಕ್ಷಣ ಸಚಿವರ ಪಾಲೆಷ್ಟುಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ನೀಡಿರುವ ತಿರುಗೇಟು.
ಶಿಕ್ಷಣ ಕುರಿತ ದೂರು ಪರಿಶೀಲನೆಗೆ ಪ್ರತ್ಯೇಕ ಆಯೋಗ: ಸಚಿವ ಬಿ.ಸಿ.ನಾಗೇಶ್
ಈ ಸಂಬಂಧ ‘ಭ್ರಷ್ಟಕಾಂಗ್ರೆಸ್’ ಎಂಬ ಹ್ಯಾಶ್ಟ್ಯಾಗ್ ಮೂಲಕ ಸರಣಿ ಟ್ವೀಟ್ ಮಾಡಿರುವ ಅವರು, ಪಾರದರ್ಶಕ, ಪ್ರಾಮಾಣಿಕ, ಸುರಕ್ಷಿತ ಶೈಕ್ಷಣಿಕ ವಾತಾವರಣ ನಿರ್ಮಿಸಲು ಹೊರಟ ಬಿಜೆಪಿ ಸರ್ಕಾರದ ವಿರುದ್ಧ ಕ್ರಿಮಿನಲ್ ಕೇಸ್ ಸೇರಿ ಹಲವು ಆರೋಪಗಳಿರುವ ಬೆಂಬಲಿಗನ ಮೂಲಕ ಆಧಾರರಹಿತ ಆರೋಪಗಳನ್ನು ಮಾಡಿಸಿ ನಿಯಮಬಾಹಿರ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವ ನಿಮಗೆ ಮಾತನಾಡಲು ಯಾವ ನೈತಿಕತೆ ಇದೆ? ನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟುಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ