KSRTC ಐರಾವತ ಬಸ್‌ನಲ್ಲಿ 15 ಲಕ್ಷ ರು. ಬೆಳ್ಳಿದೀಪ ಪತ್ತೆ!

By Web DeskFirst Published Jan 12, 2019, 9:45 AM IST
Highlights

ಕೆಎಸ್‌ಆರ್‌ಟಿಸಿ ಐರಾವತ ಬಸ್‌ನಲ್ಲಿ 15 ಲಕ್ಷ ರು. ಬೆಳ್ಳಿದೀಪ ಪತ್ತೆ!| ಅಕ್ರಮವಾಗಿ ಸಾಗಿಸುತ್ತಿದ್ದ 41 ಕೇಜಿ ತೂಕದ 700 ದೀಪ ವಶ| ವಾರಸುದಾರರು ಯಾರೆಂದು ಗೊತ್ತಿಲ್ಲ ಎಂದ ಕಂಡಕ್ಟರ್‌

ಬೆಂಗಳೂರು[ಜ.12]: ಬೆಂಗಳೂರು- ವಿಜಯವಾಡ ಮಾರ್ಗದ ಐರಾವತ ಕ್ಲಬ್‌ ಕ್ಲಾಸ್‌ ಬಸ್ಸಿನಲ್ಲಿ ಶುಕ್ರವಾರ ಅಕ್ರಮವಾಗಿ ಸಾಗಿಸುತ್ತಿದ್ದ 15 ಲಕ್ಷ ರು. ಮೌಲ್ಯದ ಬೆಳ್ಳಿ ದೀಪಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂಬಂಧಪಟ್ಟಬಸ್ಸಿನ ಚಾಲಕ ಮತ್ತು ನಿರ್ವಾಹಕರನ್ನು ಅಮಾನತುಗೊಳಿಸಿ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ.

ಬೆಂಗಳೂರು ಕೇಂದ್ರೀಯ ವಿಭಾಗೀಯ ಘಟಕದ ಕೆಎ 57, ಎಫ್‌ 2844 ನಂಬರಿನ ಬಸ್‌ ಚಾಲಕ ಮತ್ತು ನಿರ್ವಾಹಕರ ಮೇಲೆ ಅನುಮಾನ ಬಂದ ಹಿನ್ನೆಲೆಯಲ್ಲಿ ಹೊಸಕೋಟೆ ಬಳಿಯ ಟೋಲ್‌ನಲ್ಲಿ ತಪಾಸಣೆ ನಡೆಸಲಾಗಿದೆ. ಬಸ್ಸಿನ ಡಿಕ್ಕಿಯಲ್ಲಿ ನಾಲ್ಕು ಬ್ಯಾಗುಗಳಲ್ಲಿ 40.950 ಕೇಜಿ ತೂಕದ 699 ಬೆಳ್ಳಿ ದೀಪಗಳು ಪತ್ತೆಯಾಗಿವೆ. ಈ ಬಗ್ಗೆ ನಿರ್ವಾಹಕರನ್ನು ವಿಚಾರಿಸಿದಾಗ ವಾರಸುದಾರರು ಯಾರು ಎಂಬುದು ತಮಗೆ ಗೊತ್ತಿಲ್ಲ ಎಂದು ಉತ್ತರಿಸಿದರು.

ಬಸ್‌ನಲ್ಲಿ ಬೆಳ್ಳಿ ವಸ್ತು ಸಾಗಿಸುತ್ತಿರುವ ಮಾಹಿತಿ ಮೊದಲೇ ಗೊತ್ತಿದ್ದರಿಂದ ತಪಾಸಣೆ ವೇಳೆ ಹೆಚ್ಚುವರಿಯಾಗಿ ಚಾಲಕ ಮತ್ತು ನಿರ್ವಾಹಕರನ್ನು ಕರೆದುಕೊಂಡು ಹೋಗಲಾಗಿತ್ತು. ಹಾಗಾಗಿ ಸದರಿ ಬಸ್‌ ಚಾಲಕ ಮತ್ತು ನಿರ್ವಾಹಕನನ್ನು ಇಳಿಸಿ ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದವರನ್ನು ನಿಯೋಜಿಸಿ ಬಸ್‌ ಕಾರ್ಯಾಚರಣೆ ಮಾಡಲಾಯಿತು. ನಂತರ ದೀಪಗಳನ್ನು ವಶಪಡಿಸಿಕೊಂಡ ಬಳಿಕ ಅವುಗಳನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.

ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಭಾಕರ್‌ ರೆಡ್ಡಿ, ವಿಭಾಗೀಯ ಭದ್ರತಾ ನಿರೀಕ್ಷಕಿ ರಮ್ಯ ಸಿ.ಕೆ., ಸಂಚಾರ ನಿಯಂತ್ರಕ ಛಲಪತಿ ಎಚ್‌.ಎಂ. ಅವರು ಈ ತಪಾಸಣೆ ನಡೆಸಿ ಕ್ರಮಕೈಗೊಂಡಿದ್ದಾರೆ.

ಕೆಎಸ್‌ಆರ್‌ಟಿಸಿಯಲ್ಲಿ ನಿರಂತರವಾಗಿ ಹಾಗೂ ಅನಿರೀಕ್ಷಿತವಾಗಿ ತಪಾಸಣಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಅನುಮಾನ ಬರುವ ಬಸ್ಸುಗಳನ್ನು ಪರಿಶೀಲಿಸಲಾಗುತ್ತದೆ. ಅದರಂತೆ ಶುಕ್ರವಾರ ತಪಾಸಣೆ ನಡೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

click me!