ರಾಜ್ಯದ ಮೇಕೆದಾಟು ಡ್ಯಾಂ ಶೀಘ್ರ ಆರಂಭ

By Kannadaprabha NewsFirst Published Jul 8, 2021, 7:35 AM IST
Highlights
  • ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಅಣೆಕಟ್ಟು ಯೋಜನೆ
  • ಅತಿ ಶೀಘ್ರದಲ್ಲಿ ಕಾರ್ಯಾರಂಭ ಮಾಡಲು ಕ್ರಿಯಾಯೋಜನೆ
  • CM ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ

ಬೆಂಗಳೂರು(ಜು.08):  ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅತಿ ಶೀಘ್ರದಲ್ಲಿ ಕಾರ್ಯಾರಂಭ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕ್ರಿಯಾ ಯೋಜನೆಗೆ ಸಂಬಂಧಪಟ್ಟಂತೆ ವಾರಾಂತ್ಯದಲ್ಲಿ ಕಾನೂನು ತಜ್ಞರು ಮತ್ತು ತಾಂತ್ರಿಕ ಪರಿಣಿತರ ಜತೆ ಚರ್ಚೆ ಮಾಡಲಿದ್ದಾರೆ. ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ನಲ್ಲಿ ಮಿಸಲೇನಿಯಸ್‌ ಅರ್ಜಿ ಮಾತ್ರ ಬಾಕಿ ಇದೆ. ಈ ಕುರಿತು ಮುಖ್ಯಮಂತ್ರಿಗಳು ಇದೇ ವಾರ ಸಭೆ ನಡೆಸಲಿದ್ದಾರೆ. ಯೋಜನೆಯ ಅನುಷ್ಠಾನಕ್ಕೆ ಯಾವ ಯಾವ ಒಪ್ಪಿಗೆ ಪಡೆಯಬೇಕು, ಮುಂದೆ ಯಾವ ರೀತಿ ಹೋಗಬೇಕು ಎಂಬುದರ ಕುರಿತು ಕಾನೂನು ಪರಿಣತರ ಜತೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಮೇಕೆದಾಟು; BSYಗೆ ಸ್ಟಾಲಿನ್ ಉತ್ತರ, ಮತ್ತೆ ತಮಿಳುನಾಡು ಕ್ಯಾತೆ!

ಕಾವೇರಿ ನೀರು ನಿರ್ವಹಣೆಯಲ್ಲಿ ಮುಖ್ಯ ಪಾತ್ರವಹಿಸುವ ಭವಿಷ್ಯದ ಯೋಜನೆಯಾಗಿದೆ, ಜೊತೆಗೆ ಸಂಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆಯಲ್ಲಿ ಮಹತ್ವದ ಪಾತ್ರ ವಹಿಸುವ ಸಮಾನಾಂತರ ಅಣೆಕಟ್ಟು ಇದಾಗಲಿದೆ. ಆದ್ದರಿಂದ ಈ ಯೋಜನೆಯನ್ನು ಜಾರಿ ಮಾಡಲು ಕ್ರಿಯಾಯೋಜನೆ ಸಿದ್ದಪಡಿಸುವ ಸಂಬಂಧ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಮುಂಗಾರು ಅಧಿವೇಶನದ ಬಗ್ಗೆ ಈವರೆಗೆ ಯಾವುದೇ ನಿರ್ಧಾರವಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

click me!