ಎಲ್ಲ ಹಗರಣ ಚರ್ಚೆಗೆ ಸ್ಪೀಕರ್‌ ಸಮ್ಮತಿ

Published : Sep 22, 2022, 04:23 AM IST
ಎಲ್ಲ ಹಗರಣ ಚರ್ಚೆಗೆ ಸ್ಪೀಕರ್‌ ಸಮ್ಮತಿ

ಸಾರಾಂಶ

ಸಿದ್ದು ಸರ್ಕಾರದ ಅಕ್ರಮಗಳು, ಈಗಿನ 40% ಕಮಿಷನ್‌ ಆರೋಪದ ಬಗ್ಗೆ ಇಂದು/ನಾಳೆ ಚರ್ಚೆ, ಗುತ್ತಿಗೆದಾರರು ಸರ್ಕಾರದ ಬಗ್ಗೆ ಮಾಡಿರುವ ಕಮಿಷನ್‌ ಆರೋಪ ವಿಧಾನಸಭೆಯಲ್ಲಿ ಪ್ರಸ್ತಾಪ

ವಿಧಾನಸಭೆ(ಸೆ.22):  ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪ್ರಸಕ್ತ ಸರ್ಕಾರದ 40 ಪರ್ಸೆಂಟ್‌ ಕಮಿಷನ್‌ ಆರೋಪ ಮತ್ತು ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಒಟ್ಟಿಗೆ ಸೇರಿಸಿ ಚರ್ಚೆಗೆ ಅವಕಾಶ ನೀಡಲಾಗುವುದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಹೇಳಿದ್ದಾರೆ. ಇಂದು(ಗುರುವಾರ) ಅಥವಾ ಶುಕ್ರವಾರ ಚರ್ಚೆಗೆ ಅವಕಾಶ ನೀಡುವ ಸಾಧ್ಯತೆಯಿದೆ.

ಬುಧವಾರ ಶೂನ್ಯವೇಳೆ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ರಾಜ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಚರ್ಚೆಗೆ ಅವಕಾಶ ನೀಡಬೇಕು’ ಎಂದು ನಿಲುವಳಿ ಸೂಚನೆ ಮಂಡಿಸಿದರು. ಆದರೆ, ಸಭಾಧ್ಯಕ್ಷರು, ‘ಇದನ್ನು ಕಚೇರಿಯಲ್ಲಿಯೇ ತಿರಸ್ಕರಿಸಲಾಗಿದ್ದು, ಬೇರೆ ಸ್ವರೂಪದಲ್ಲಿ ಚರ್ಚೆಗೆ ಅವಕಾಶ ನೀಡಲಾಗುವುದು’ ಎಂದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿದ್ದರಾಮಯ್ಯ, ‘ಪ್ರತಿಬಾರಿ ಈ ರೀತಿ ಮಾಡುವುದು ಸರಿಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಶಿಕ್ಷಕರ ನೇಮಕ ಅಕ್ರಮದಲ್ಲಿ ಶೀಘ್ರ ಇನ್ನಷ್ಟು ಬಂಧನ: ಸಚಿವ ನಾಗೇಶ್‌

‘ಈ ವಿಚಾರವು ಬಹಳ ಗಂಭಿರವಾಗಿದೆ. ರಾಜ್ಯದ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಇತ್ತೀಚೆಗೆ ಪ್ರಧಾನಿಗಳಿಗೂ ಪತ್ರ ಬರೆದಿದ್ದಾರೆ. ಕಾಮಗಾರಿ ಪಡೆಯಲು 40 ಪರ್ಸೆಂಟ್‌ ಕಮಿಷನ್‌ ಪಡೆಯಬೇಕು ಎಂಬ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಚರ್ಚೆಗೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡಬೇಕು. ತಿರಸ್ಕಾರ ಮಾಡಿರುವ ತೀರ್ಮಾನವನ್ನು ಪುನರ ಪರಿಶೀಲಿಸಬೇಕು’ ಎಂದು ಮನವಿ ಮಾಡಿದರು.

ಈ ವೇಳೆ ಕಾನೂನು ಮತ್ತು ಸಂಸದೀಯ ಜೆ.ಸಿ.ಮಾಧುಸ್ವಾಮಿ, ‘ಪ್ರತಿಪಕ್ಷದ ನಾಯಕರ ಮನವಿ ಸರಿಯಲ್ಲ. ಈ ಬಗ್ಗೆ ಅವರು ದಾಖಲೆಯನ್ನು ಒದಗಿಸಿಲ್ಲ. ಸಮರ್ಪಕವಾದ ದಾಖಲೆ ನೀಡದ ಕಾರಣ ನಿಲುವಳಿ ಸೂಚನೆಯಡಿ ಇದಕ್ಕೆ ಅವಕಾಶ ನೀಡಬಾರದು’ ಎಂದು ಕೋರಿದರು.

ಚರ್ಚೆಗೆ ಸಿದ್ಧ- ಸಿಎಂ:

ಈ ವೇಳೆ ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಈ ವಿಚಾರವು ಅತ್ಯಂತ ಗಂಭೀರವಾಗಿದೆ. ಭ್ರಷ್ಟಾಚಾರ ಇವತ್ತು, ನಿನ್ನೆಯದಲ್ಲ. ಬೇರೆ ಬೇರೆ ರೂಪದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಕಮಿಷನ್‌ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ಚರ್ಚೆಗೆ ಸಿದ್ಧವಿದೆ. ಸಮಯ ನಿಗದಿ ಮಾಡಿ, ನಾವು ಚರ್ಚೆಗೆ ಸಿದ್ಧ. ಯಾವುದೇ ಅಭ್ಯಂತರ ಇಲ್ಲ’ ಎಂದು ತಿಳಿಸಿದರು.

ತದನಂತರ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ನಿಯಮ 69ರಡಿ ಚರ್ಚೆಗೆ ಅವಕಾಶ ನೀಡಲಾಗುವುದು. ಇದೇ ವೇಳೆ ಬಿಜೆಪಿ ಸದಸ್ಯ ಪಿ.ರಾಜೀವ್‌ ಅವರೂ ಸಹ ಒಂದು ಪತ್ರ ನೀಡಿದ್ದಾರೆ. 2013-18ರ ಅವಧಿಯಲ್ಲಿ ಹಲವು ನೇಮಕಾತಿ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದು, ಚರ್ಚೆಗೆ ಅವಕಾಶ ನೀಡಬೇಕು ಎಂದು ಕೋರಿದ್ದಾರೆ. ಹೀಗಾಗಿ ಎರಡೂ ಸೇರಿಸಿ ಒಟ್ಟಿಗೆ ಅವಕಾಶ ನೀಡಲಾಗುವುದು’ ಎಂದು ಹೇಳಿದರು. ‘ಎರಡೂ ಒಟ್ಟಿಗೆ ಚರ್ಚೆ ನಡೆಸಲು ಯಾವುದೇ ಅಭ್ಯಂತರ ಇಲ್ಲ’ ಎಂದು ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ ಬಳಿಕ ಮುಂದಿನ ಕಾರ್ಯಕಲಾಪವನ್ನು ಸಭಾಧ್ಯಕ್ಷರು ಮುಂದುವರಿಸಿದರು.

ನೇಮಕ ಹಗರಣ ಬಗ್ಗೆ ಜಟಾಪಟಿ, ಕೋಲಾಹಲ: ಸದನದಲ್ಲಿ ಎಸ್‌ಐ ಕದನ

ಸಿದ್ದರಾಮಯ್ಯ ನಿಲುವಳಿ ಸೂಚನೆಯಲ್ಲಿ ಏನಿದೆ?

ರಾಜ್ಯದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಇತ್ತೀಚೆಗೆ ವಿವಿಧ ದಿನಾಂಕಗಳಂದು ಮುಖ್ಯಮಂತ್ರಿಗಳಿಗೆ, ಲೋಕೋಪಯೋಗಿ ಇಲಾಖೆಯ ಸಚಿವರಿಗೆ, ಮುಖ್ಯಕಾರ್ಯದರ್ಶಿಗಳಿಗೆ ಮತ್ತು ಇತರರಿಗೆ ಪತ್ರಗಳನ್ನು ಬರೆದಿದ್ದಾರೆ. ಪ್ರಧಾನಮಂತ್ರಿಗಳಿಗೂ ಪತ್ರ ಬರೆದಿದ್ದಾರೆ. ಕೋವಿಡ್‌ ನೆಪದಲ್ಲಿ ರಾಜ್ಯದ ಅಭಿವೃದ್ಧಿ ಚಟುವಟಿಕೆಗಳಿಗೆ ಸಮರ್ಪಕವಾಗಿ ಅನುದಾನಗಳನ್ನೇ ನೀಡಿರಲಿಲ್ಲ. ನೀಡಿರುವ ಅನುದಾನದಲ್ಲಿ ಶೇ.40ಕ್ಕಿಂತಲೂ ಹೆಚ್ಚು ಪಸೆಂರ್‍ಟೇಜ್‌ಗಳಿಗೂ ಮೀರಿ ಭ್ರಷ್ಟಾಚಾರ ನಡೆಯುತ್ತಿದೆಯೆಂಬ ಗಂಭೀರ ಆರೋಪಗಳನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ್ದಾರೆ.

ಕಾಮಗಾರಿ ಮುಂತಾದವುಗಳು ಕಳಪೆಯಾದರೆ ಅದರ ನೇರ ಪರಿಣಾಮ ರಾಜ್ಯ ಅಭಿವೃದ್ಧಿಯ ಮೇಲೆ ಆಗುತ್ತದೆ. ಉತ್ತಮ ರಸ್ತೆ, ಸೇತುವೆಗಳಿಲ್ಲದಿದ್ದರೆ ಮತ್ತು ಸಮರ್ಪಕ ಅಭಿವೃದ್ಧಿಯ ವಾತಾವರಣವಿಲ್ಲದಿದ್ದರೆ ರಾಜ್ಯದಲ್ಲಿ ಹೂಡಿಕೆ ಕಡಿಮೆಯಾಗುತ್ತದೆ. ಇದರಿಂದ ನಿರುದ್ಯೋಗದಂತಹ ಗಂಭೀರ ಸಮಸ್ಯೆಗಳು ಪ್ರಾರಂಭವಾಗುತ್ತದೆ. ಅಭಿವೃದ್ಧಿ ಮತ್ತು ಕಳಪೆ ಕಾಮಗಾರಿ, ಅಭಿವೃದ್ಧಿ ಮತ್ತು ಭ್ರಷ್ಟಾಚಾರ ಎರಡೂ ಒಟ್ಟಿಗೆ ಹೋಗಲು ಸಾಧ್ಯವಿಲ್ಲ. ಆದರೆ, ಇದಕ್ಕೆ ವ್ಯತಿರಿಕ್ತವಾದ ಪರಿಸ್ಥಿತಿ ರಾಜ್ಯದಲ್ಲಿದೆ. ಕಾಮಗಾರಿಗಳು ನಡೆದ ಒಂದೇ ವಾರದಲ್ಲಿ ಕಿತ್ತು ಹೋಗುತ್ತಿರುವ ನಿದರ್ಶನಗಳು ದಾಖಲಾಗುತ್ತಿವೆ. ಆದರೂ ದೂರು ನೀಡುತ್ತಿರುವ ಗುತ್ತಿಗೆದಾರರನ್ನೇ ಆರೋಪಿಗಳು, ಅಪರಾಧಿಗಳೆಂಬಂತೆ ಸರ್ಕಾರ ಬಿಂಬಿಸುತ್ತಿದೆ. ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ನಿಯಮ 60ರಡಿ ಪ್ರಸ್ತಾಪಿಸಲು ನಿಲುವಳಿ ಸೂಚನೆ ಕೊಡುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ