
ಬೆಂಗಳೂರು (ಜು.16) : ನಗರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಬಳಿಸಲ್ಪಟ್ಟಿರುವ ಸಾವಿರಾರು ಕೋಟಿ ರುಪಾಯಿ ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಭೂಕಬಳಿಕೆದಾರರಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕ ಅಧ್ಯಕ್ಷ ಎನ್.ಆರ್.ರಮೇಶ್(NR Ramesh) ಒತ್ತಾಯಿಸಿದ್ದಾರೆ.
ಈ ಸಂಬಂಧ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna byregowda Minister)ಅವರಿಗೆ ಪತ್ರ ಬರೆದಿದ್ದಾರೆ. ಅಧಿವೇಶನದಲ್ಲಿ ಬೆಂಗಳೂರು ನಗರ ಮಹಾನಗರ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಒತ್ತುವರಿ ಆಗಿರುವ ಸರ್ಕಾರಿ ಜಮೀನುಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವುದಾಗಿ ಸಚಿವರು ಹೇಳಿಕೆ ನೀಡಿದ್ದಾರೆ. ಮೊದಲು ತಮ್ಮ ಕ್ಷೇತ್ರದಲ್ಲಿ ಒತ್ತುವರಿ ಆಗಿರುವ ಸರ್ಕಾರಿ ಸ್ವತ್ತುಗಳನ್ನು ಕಬಳಿಕೆದಾರರಿಂದ ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಬಿಬಿಎಂಪಿಯಲ್ಲಿ 13 ಸಾವಿರ ಕೋಟಿ ಹಗರಣ: ಸಿಐಡಿಗೆ ವಹಿಸುವಂತೆ ಸಿಎಂಗೆ ಎನ್ನಾರ್ ರಮೇಶ್ ಪತ್ರ
ಕುವೆಂಪುನಗರ ವಾರ್ಡ್ ವ್ಯಾಪ್ತಿಯ ಸಿಂಗಾಪುರ ಗ್ರಾಮದ ಸರ್ವೆ ನಂಬರ್ 109ರ ಸುಮಾರು 2,300 ಕೋಟಿಗಿಂತ ಹೆಚ್ಚು ಮೌಲ್ಯದ 226.15 ಎಕರೆಯಷ್ಟುವಿಸ್ತೀರ್ಣದ ಸರ್ಕಾರಿ ಸ್ವತ್ತುಗಳನ್ನು ಹಲವಾರು ಮಂದಿ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿದ್ದಾರೆ. ಈ ಬಗ್ಗೆ ದಾಖಲೆಗಳ ಸಮೇತ ಈ ಹಿಂದೆಯೇ ಗಮನ ತರಲಾಗಿದೆ. ಅಂತೆಯೇ ಹುಣಸಮಾರನಹಳ್ಳಿ ತಾಲೂಕು ಪಂಚಾಯಿತಿ ಕೊಡಗಲಹಟ್ಟಿಗ್ರಾಮದ ಸರ್ವೆ ನಂಬರ್ 103ರ ಸುಮಾರು .325 ಕೋಟಿಗಿಂತ ಹೆಚ್ಚು ಮೌಲ್ಯದ 22.35 ಸರ್ಕಾರಿ ಸ್ವತ್ತನ್ನು ತಮ್ಮ ಹಿಂಬಾಲಕರಲ್ಲಿ ಒಬ್ಬಾರಾಗಿರುವ ಸುಜಾತಾ ಶ್ರೀನಿವಾಸ್ ಪತಿ ಶ್ರೀನಿವಾಸ್ ಮತ್ತವರ ಬೆಂಬಲಿಗರು ಕಬಳಿಸಿದ್ದಾರೆ. ಈ ಸಂಬಂಧ ವಿವಿಧ ತನಿಖಾ ಸಂಸ್ಥೆಗಳಲ್ಲಿ ದೂರುಗಳು ಸಹ ದಾಖಲಾಗಿವೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು ಮಹಾನಗರ, ಮತ್ತದರ ಸುತ್ತಮುತ್ತಲ ಪ್ರದೇಶಗಳಲ್ಲಿ ಒತ್ತುವರಿ ಆಗಿರುವ ಸರ್ಕಾರಿ ಸ್ವತ್ತುಗಳನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವ ಕಾರ್ಯಕ್ಕೆ ತಮ್ಮ ಕ್ಷೇತ್ರದಿಂದಲೇ ಚಾಲನೆಯನ್ನು ನೀಡಬೇಕು. ಈ ಮೂಲಕ ಬೇರೆಲ್ಲಾ ರಾಜಕಾರಣಿಗಳಿಗೆ ಮೇಲ್ಪಂಕ್ತಿಯಾಗಬೇಕು. ಒತ್ತುವರಿಯಾಗಿರುವ ಪ್ರದೇಶಗಳನ್ನು ಕಾನೂನು ರೀತಿ ಸರ್ಕಾರದ ವಶಕ್ಕೆ ತೆಗೆದುಕೊಳ್ಳಬೇಕು. ಇದರ ಜತೆಗೆ ಸರ್ಕಾರಿ ನೆಲಗಳ್ಳರ ವಿರುದ್ಧ ಕಾನೂನು ರೀತಿ ತನಿಖಾ ಸಂಸ್ಥೆಯಲ್ಲಿ ಪ್ರಕರಣ ದಾಖಲಿಸಬೇಕು. ಒಟ್ಟು .2,600 ಕೋಟಿಗಿಂತ ಹೆಚ್ಚು ಮೌಲ್ಯದ ಭೂಕಬಳಿಕೆ ಪ್ರಕರಣಗಳನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸಬೇಕು. ಈ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಹಣ ಪಡೆದು ಅನರ್ಹರಿಗೂ ಬಿಪಿಎಲ್ ಕಾರ್ಡ್: ಎನ್.ಆರ್. ರಮೇಶ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ