
ಶಿವಮೊಗ್ಗ(ಮೇ.07): ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಿ ತ್ಯಾಜ್ಯ ವಿಲೇವಾರಿ ಆರಂಭಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಇದುವರೆಗೆ 271 ಗ್ರಾಮ ಪಂಚಾಯಿತಿ ಪೈಕಿ ಕೇವಲ 53 ಗ್ರಾಮ ಪಂಚಾಯಿತಿ ಘನತ್ಯಾಜ್ಯ ಘಟಕಗಳಿಗೆ ಜಮೀನು ಗುರುತಿಸಿ ಪ್ರಸ್ತಾವ ಸಲ್ಲಿಸಿದ್ದು, 48 ಪ್ರಸ್ತಾವಗಳಿಗೆ ಅನುಮೋದನೆ ದೊರೆತಿದೆ. ಕೇವಲ 12 ಗ್ರಾಮ ಪಂಚಾಯತ್ಗಳು ಕಾರ್ಯ ಆರಂಭಿಸಿದ್ದು, ಜಮೀನು ಅಂತಿಮಗೊಳಿಸದ ಗ್ರಾಪಂ ತಮ್ಮಲ್ಲಿರುವ ಹಳೆ ಕಟ್ಟಡಗಳಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯ ಆರಂಭಿಸಬೇಕು. ಈಗಾಗಲೇ ಅನುದಾನ ಬಿಡುಗಡೆಯಾಗಿರುವ ಗ್ರಾಪಂ ವಾಹನ, ಬಕೆಟ್ ಖರೀದಿ, ಶೆಡ್ ನಿರ್ಮಾಣ ಇತ್ಯಾದಿ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಪ್ರತಿ ಮನೆಗೆ ಕುಡಿವ ನೀರು:
ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ಮನೆಗೆ ಕುಡಿಯುವ ನೀರು ಒದಗಿಸುವ ಮನೆ ಮನೆಗೆ ಗಂಗೆ ಯೋಜನೆಯಡಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸೂಚಿಸಲಾಗಿದೆ. ಈಗಾಗಲೇ ನಲ್ಲಿ ಸಂಪರ್ಕ ಇರುವ ಮನೆಗಳನ್ನು ಹೊಸದಾಗಿ ಕ್ರಿಯಾ ಯೋಜನೆಯಲ್ಲಿ ಸೇರಿಸಬಾರದು. ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯವನ್ನು ಆಯಾ ಗ್ರಾಮ ಪಂಚಾಯಿತಿಗಳೇ ಇನ್ನು ಮುಂದೆ ನಿರ್ವಹಿಸಬೇಕು. ಇದಕ್ಕಾಗಿ ಅನುದಾನವನ್ನು ಒದಗಿಸಲಾಗುವುದು ಎಂದು ಸಚಿವರು ಹೇಳಿದರು.
ಪಿಡಿಒಗಳಿಗೆ ಎಚ್ಚರಿಕೆ:
ಕೆಲವು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರದೆ, ಶಿವಮೊಗ್ಗ ನಗರದಲ್ಲಿ ವಾಸ್ತವ್ಯವಿದ್ದು ದೂರವಾಣಿಗೂ ಸಿಗದಿರುವ ಬಗ್ಗೆ ದೂರುಗಳು ಬರುತ್ತಿವೆ. ಪಿಡಿಒಗಳು ಕಡ್ಡಾಯವಾಗಿ ಪ್ರತಿದಿನ ಕಚೇರಿಯಲ್ಲಿ ಹಾಜರಿದ್ದು, ಸಾರ್ವಜನಿಕರಿಗೆ ಸ್ಪಂದಿಸಬೇಕು. ತಮ್ಮ ವರ್ತನೆಯನ್ನು ತಿದ್ದಿಕೊಳ್ಳದ ಪಿಡಿಒಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.
ಕುಡಿದು ಪ್ರಜ್ಞೆಯೇ ಇಲ್ಲ, ಹೆಣ್ಮಗಳೊಂದಿಗೆ ರಸ್ತೆ ಬದಿ ಮಲಗಿದ ತಂದೆ..!
ಉದ್ಯೋಗ ಖಾತ್ರಿ ಅನುಷ್ಠಾನ:
ಎನ್ಆರ್ಇಜಿ ಅಡಿ ಈ ವರ್ಷ 218 ಕೋಟಿ ರು. ಅನುದಾನ ನಿಗದಿಪಡಿಸಲಾಗಿದ್ದು, ಎಲ್ಲಾ ಇಲಾಖೆಗಳು ತಮಗೆ ನಿಗದಿಪಡಿಸಿರುವ ಮಾನವ ದಿನಗಳ ಗುರಿಯನ್ನು ಪೂರ್ಣಗೊಳಿಸಬೇಕು. ಸಾಮಾಜಿಕ ಅರಣ್ಯ ಇಲಾಖೆ ಇದುವರೆಗೆ ಯಾವುದೇ ಗುರಿಯನ್ನು ಸಾಸಿರುವುದಿಲ್ಲ. ಹಿಂದಿನ ವರ್ಷದ ಅಪೂರ್ಣ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಸಚಿವರು ಹೇಳಿದರು.
ತೆರಿಗೆ ನಿಗದಿ ವೈಜ್ಞಾನಿಕ ಮಾಡಿ:
ಪ್ರತಿ ಗ್ರಾಮ ಪಂಚಾಯಿತಿ ಎರಡು ವರ್ಷಗಳಿಗೊಮ್ಮೆ ಮೌಲ್ಯ ಮಾಪನ ಮಾಡಿ ತೆರಿಗೆಯನ್ನು ವೈಜ್ಞಾನಿಕವಾಗಿ ಮರು ನಿಗದಿಪಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅತೀಕ್ ತಿಳಿಸಿದರು. ಇಲಾಖೆ ಆಯುಕ್ತ ಅನಿರುದ್ಧ ಶ್ರವಣ್, ಸಿಇಒ ಎಂ.ಎಲ್. ವೈಶಾಲಿ, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ