ಕರಾವಳಿಯಲ್ಲೇ ಉದ್ಯೋಗ ಸೃಷ್ಟಿಗೆ ಕ್ರಮ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Sujatha NR   | Kannada Prabha
Published : Jul 28, 2025, 08:03 AM IST
DCM DK Shivakumar

ಸಾರಾಂಶ

ಕರಾವಳಿ ಜನತೆ ಉದ್ಯೋಗಕ್ಕಾಗಿ ಬೇರೆಡೆ ಹೋಗುವುದನ್ನು ತಪ್ಪಿಸಿ ಅಲ್ಲೇ ಉದ್ಯೋಗ ಸೃಷ್ಟಿಯಾಗುವಂತೆ ಮಾಡಬೇಕಿದೆ -  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 

ಬೆಂಗಳೂರು : ಕರಾವಳಿ ಜನತೆ ಉದ್ಯೋಗಕ್ಕಾಗಿ ಬೇರೆಡೆ ಹೋಗುವುದನ್ನು ತಪ್ಪಿಸಿ ಅಲ್ಲೇ ಉದ್ಯೋಗ ಸೃಷ್ಟಿಯಾಗುವಂತೆ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಕುಂದಾಪ್ರ ಕನ್ನಡ -2025 ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿನ 340 ಕಿ.ಮೀ. ಇರುವ ಕರಾವಳಿ ಪ್ರದೇಶಕ್ಕಾಗಿ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಬಳಿಕ ಅಲ್ಲಿ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪನೆ ಬಗ್ಗೆ ಯೋಚಿಸುತ್ತೇವೆ. ಹೊಟೆಲ್‌, ಬ್ಯಾಂಕ್‌, ಉದ್ಯಮ ವಲಯಕ್ಕೆ ಕರಾವಳಿ ಕೊಡುಗೆ ಅಪಾರ. ಉಡುಪಿ ಪಂಚಾಯತಿ ಒಂದರಲ್ಲೇ ಮೂರು ಮೆಡಿಕಲ್ ಕಾಲೇಜಿದೆ. ಅಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಜತೆಗೆ ಅಲ್ಲೇ ಉದ್ಯೋಗ ಸೃಷ್ಟಿಗೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.

ನಮ್ಮ ಪರಂಪರೆ, ಭಾಷೆ, ಸಂಸ್ಕೃತಿ ಉಳಿಸಿಕೊಳ್ಳುವುದು ಅತ್ಯಂತ ಅಗತ್ಯ. ಕುಂದಾಪುರದ ವೈಭವ ಉಳಿಸಿಕೊಳ್ಳಲು ಬೆಂಗಳೂರಿನಲ್ಲಿ ಆಚರಣೆ ಮಾಡುತ್ತಿರುವುದು ವಿಶೇಷ. ಯಕ್ಷಗಾನ, ಕಂಬಳ, ನಾಟಕ ಸೇರಿ ಇತರೆಲ್ಲ ಸಂಸ್ಕೃತಿ ಕಾಪಾಡಿಕೊಂಡು ಹೋಗಲು, ಉತ್ತೇಜಿಸಲು ಬದ್ಧವಾಗಿದ್ದೇವೆ ಎಂದು ಹೇಳಿದರು.

ಗ್ರೇಟರ್‌ ಬೆಂಗಳೂರಿಂದ ಕನ್ನಡಿಗರು ರಾಜಧಾನಿಯಲ್ಲಿ ಒಡೆದುಹೋಗುತ್ತಾರೆ ಎಂದು ಹಲವರು ಟೀಕಿಸಿದ್ದಾರೆ. ಆದರೆ, ಬೆಂಗಳೂರು ರಾಜ್ಯದ ಎಲ್ಲ ಕನ್ನಡಿಗರ ಹೃದಯ. ಕಲಬುರ್ಗಿಯಿಂದ ಕುಂದಾಪುರದವರೆಗಿನ ಎಲ್ಲ ಕನ್ನಡಿಗರು ಇಲ್ಲಿದ್ದಾರೆ. ಕುಂದಾಪುರ, ಉಡುಪಿಯಿಂದ ಬಂದವರು ಯಾರೂ ನಾವು ಎಲ್ಲಿಂದಲೋ ಇಲ್ಲಿ ಬಂದಿದ್ದೇವೆ ಎಂಬ ಭಾವನೆ ಇಟ್ಟುಕೊಳ್ಳುವುದು ಬೇಡ. ಇದು ನಿಮ್ಮ ರಾಜ್ಯ. ನಿಮ್ಮ ರಾಜಧಾನಿ. ಇದನ್ನು ಉಳಿಸಿಕೊಳ್ಳುವುದು ನಿಮ್ಮ ಹೊಣೆ ಎಂದರು.

‘ಊರ ಗೌರವ’ ಪುರಸ್ಕಾರ ಪಡೆದ ಸಿನಿಮಾ ನಿರ್ದೇಶಕ ಯೋಗರಾಜ ಭಟ್ ಮಾತನಾಡಿ, ವ್ಯಕ್ತಿಗಿಂತ ಊರು ದೊಡ್ಡದು. ಭಾಷಾಭಿಮಾನವೂ ದೊಡ್ಡದು. ನಮ್ಮ ಭಾಷೆಯನ್ನು ನಾವು ಮಾತನಾಡುವುದೇ ಬದುಕು. ನಾನು ಬೆಳೆದಿದ್ದು ಧಾರವಾಡ ಆದರೂ ಮನೆಯಲ್ಲಿ ಕುಂದಾಪುರದ ವಾತಾವರಣವಿತ್ತು. ಭಾಷಾಭಿಮಾನ ತುಂಬಾ ದೊಡ್ಡದು. ಎಷ್ಟಾಗುತ್ತದೋ ಅಷ್ಟರ ಮಟ್ಟಿಗೆ ನಮ್ಮ ಭಾಷೆಯನ್ನು ಆಡಬೇಕು. ಮನಸ್ಸಿನ ಆಳದಿಂದ ಭಾಷೆಯನ್ನು ಪ್ರೀತಿಸಿ ಎಂದು ಹೇಳಿದರು.

ಕುಂದಾಪ್ರ ಪ್ರತಿಷ್ಠಾನದ ಅಧ್ಯಕ್ಷ ದೀಪಕ್ ಶೆಟ್ಟಿ ಬಾರ್ಕೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂಆರ್‌ಜಿ ಗ್ರೂಪ್‌ನ ಸಿಎಂಡಿ ಪ್ರಕಾಶ್‌ ಶೆಟ್ಟಿ, ನಟಿ ರಕ್ಷಿತಾ, ನಟ ಶೈನ್‌ ಶೆಟ್ಟಿ, ಪ್ರವೀರ್‌ ಶೆಟ್ಟಿ ಇದ್ದರು. ಬೆಳಗ್ಗೆಯಿಂದ ಇಡೀ ದಿನ ಕುಂದಾಪುರದ ಸಂಸ್ಕೃತಿ ಬಿಂಬಿಸುವ ಹಲವು ಸಾಂಸ್ಕೃತಿಕ ಕಾರ್ಯಕ್ರಮ, ಊಟೋಪಚಾರ ಆಯೋಜಿಸಲಾಗಿತ್ತು.

ಪುಸ್ತಕ ಬಿಡುಗಡೆ:

ಗೀತ ಸಾಹಿತಿ ಪ್ರಮೋದ್ ಮರವಂತೆ ವಿರಚಿತ ‘ಸೆಕೆಂಡ್‌ ವೈಫ್‌’, ಆರ್‌.ಜೆ.ನಯನಾ ಅವರ ‘ಈ ಪಯಣ ನೂತನ’ , ವಸಂತ ಗಿಳಿಯಾರ್ ಅವರ, ‘ತೊಂಡೆ ಚಪ್ಪರ’ ಕೃತಿಗಳನ್ನು ‘ಕನ್ನಡಪ್ರಭ’ ಪುರವಣಿ ಸಂಪಾದಕ ಗಿರೀಶ್‌ರಾವ್ ಹತ್ವಾರ್‌ (ಜೋಗಿ) ಅವರು ಬಿಡುಗಡೆ ಮಾಡಿದರು. ಪ್ರಕಾಶಕ ಜಮೀಲ್‌ ಸಾವಣ್ಣ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!