ಸಿಬಿಐ ತನಿಖೆಗೆ ವಹಿಸಿ, ಸಿಎಂ ರಾಜೀನಾಮೆ ನೀಡುವವರೆಗೆ ಹೋರಾಟ ನಿಲ್ಲೋದಿಲ್ಲ: ಆರ್. ಅಶೋಕ್

By Kannadaprabha NewsFirst Published Jul 13, 2024, 6:30 AM IST
Highlights

ಎಂಡಿಎಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿದೆ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ನಿವೇಶನಗಳನ್ನು ಕಾನೂನಾತ್ಮಕವಾಗಿ ಪಡೆದುಕೊಂಡಿದ್ದೇವೆ ಎಂದು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
 

ಮೈಸೂರು(ಜು.13):   ಎಂಡಿಎ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಸಾವಿರಾರು ಕೋಟಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದ ಬಳಿ ಶುಕ್ರವಾರ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಂಡಿಎಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿದೆ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಪಾತ್ರವಿದೆ. ನಿವೇಶನಗಳನ್ನು ಕಾನೂನಾತ್ಮಕವಾಗಿ ಪಡೆದುಕೊಂಡಿದ್ದೇವೆ ಎಂದು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Latest Videos

ಸದನದಲ್ಲಿ ವಾಲ್ಮೀಕಿ, ಮುಡಾ ಹಗರಣ ಪ್ರಸ್ತಾಪ: ಅಶೋಕ್‌

ಕಾನೂನುಬಾಹಿರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ನಿವೇಶನ ಪಡೆದಿರುವುದರಿಂದ ರಾಜೀನಾಮೆ ಕೊಡುವ ತನಕ ಹೋರಾಟ ಮುಂದುವರಿಯಲಿದೆ. ವಾಲ್ಮೀಕಿ ನಿಗಮ, ಎಂಡಿಎ ಹಗರಣವನ್ನು ಸದನದಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಅವರು ಹೇಳಿದರು.

ಎಂಡಿಎ ಸ್ವಾಧೀನಪಡಿಸಿಕೊಂಡ ಜಮೀನಿನ ಬದಲಿಗೆ ಪಕ್ಕದಲ್ಲೇ ನಿವೇಶನ ಕೊಡಬೇಕು. ಅಥವಾ ಹೊಸದಾಗಿ ರಚನೆಯಾಗುವ ಬಡಾವಣೆಯಲ್ಲಿ ಕೊಡಬೇಕು. ಆದರೆ, ಈ ಸ್ವಾಧೀನಕ್ಕೂ ಮುನ್ನ ರಚನೆಯಾಗಿರುವ ಬಡಾವಣೆಯಲ್ಲಿ ನೀಡಿರುವುದರಿಂದ ಅಧಿಕಾರ ದುರುಪಯೋಗವಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಸೇರಿದಂತೆ ಪ್ರತಿಯೊಂದು ವ್ಯವಹಾರವೂ ಬೋಗಸ್ ಅಗಿದೆ ಎಂದು ಅವರು ದೂರಿದರು.

ವಿಪಕ್ಷ ನಾಯಕನಿಗೆ ಮಾಧ್ಯಮಗಳ ಮುಂದೆ ಸುಳ್ಳು ಹೇಳುವ ಹುಚ್ಚು ಹಿಡಿದಿದೆ: ಆರ್‌ ಅಶೋಕ್ ವಿರುದ್ಧ ಎಂ ಲಕ್ಷ್ಮಣ್ ಕಿಡಿ

ಸಿದ್ದರಾಮಯ್ಯ ಅವರು ಈಗ ಜಾತಿ ಅಸ್ತ್ರ ಬಳಸಿ ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್ ನಲ್ಲಿರುವ ಬಿ.ಕೆ. ಹರಿಪ್ರಸಾದ್ ಅವರೇ ನಾನೊಬ್ಬ ಅತಿ ಹಿಂದುಳಿದ ವರ್ಗಗಳ ನಾಯಕನೆಂದು ಹೇಳಿದ್ದಾರೆ. ಅಲ್ಲದೆ, ಬಿಜೆಪಿಯವರು ಬಿಟ್ಟರೂ ನಾನು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದು ಹೇಳಿದ್ದಾರೆ. ಹೀಗಾಗಿ, ಅವರನ್ನು ತುಳಿಯುವ ಪ್ರಶ್ನೆಯೇ ಬರುವುದಿಲ್ಲ ಎಂದು ಅವರು ತಿರುಗೇಟು ನೀಡಿದರು.

ಸಂವಿಧಾನದಲ್ಲಿ ಪ್ರತಿಪಕ್ಷಗಳಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ಕಾಂಗ್ರೆಸ್ ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ. ಸಂವಿಧಾನದ ಪುಸ್ತಕ ಹಿಡಿದು ರಾಹುಲ್ ಗಾಂಧಿ ಪ್ರಮಾಣ ವಚನ ಸ್ವೀಕರಿಸಿದರೆ, ಮತ್ತೊಂದು ಕಡೆ ಕರ್ನಾಟಕದಲ್ಲಿ ಚಳವಳಿ ಹತ್ತಿಕ್ಕುವ ಕೆಲಸ ಮಾಡಿ ಇಬ್ಬಂದಿ ನೀತಿ ಅನುಸರಿಸುತ್ತಿದೆ. ನಮ್ಮ ಅವಧಿ, ಜೆಡಿಎಸ್, ಕಾಂಗ್ರೆಸ್ ಸರ್ಕಾರದಲ್ಲಿ ಯಾರೇ ತಪ್ಪು ಮಾಡಿದ್ದರೂ ಬಂಧಿಸಲಿ ಎಂದು ಅವರು ತಿಳಿಸಿದರು.

click me!