ರಾಜ್ಯದ ಎಂಟು ಜಿಲ್ಲೆಗಳಲ್ಲಿ ಬೇಸಿಗೆ ಮಳೆ

Kannadaprabha News   | Kannada Prabha
Published : Mar 16, 2026, 05:02 AM IST
Rain

ಸಾರಾಂಶ

ಧಾರವಾಡ, ಹಾವೇರಿ, ಉತ್ತರ ಕನ್ನಡ, ಕೊಡಗು, ಬೀದರ್‌, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ ಕೆಲ ಹೊತ್ತು ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಲವೆಡೆ ಭಾನುವಾರ ಮಧ್ಯಾಹ್ನ ಗುಡುಗು-ಸಿಡಿಲು ಸಹಿತ ಉತ್ತಮ ಮಳೆಯಾಗಿದೆ

ಬೆಂಗಳೂರು : ಧಾರವಾಡ, ಹಾವೇರಿ, ಉತ್ತರ ಕನ್ನಡ, ಕೊಡಗು, ಬೀದರ್‌, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ ಕೆಲ ಹೊತ್ತು ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ.

4-5 ಕಿ.ಮೀ. ಟ್ರಾಫಿಕ್‌ ಜಾಮ್‌

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಲವೆಡೆ ಭಾನುವಾರ ಮಧ್ಯಾಹ್ನ ಗುಡುಗು-ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ಕಣತಿ ಗ್ರಾಮದಲ್ಲಿ ಮರ ಬಿದ್ದು, 4-5 ಕಿ.ಮೀ. ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಜಿಲ್ಲಾ ಕೇಂದ್ರ ಮಡಿಕೇರಿ ಸೇರಿ ಕೊಡಗಿನ ಕೆಲವೆಡೆ ಸಾಧಾರಣ ಮಳೆಯಾಗಿದೆ. ಬೆಳಗಾವಿ ನಗರದ ಸುತ್ತಮುತ್ತ ಅರ್ಧ ಗಂಟೆಗೂ ಅಧಿಕ ಕಾಲ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡುವಂತಾಯಿತು.

ಆಲಿಕಲ್ಲು, ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ

ಧಾರವಾಡ ಜಿಲ್ಲೆಯ ಅಳ್ನಾವರದಲ್ಲಿ ಆಲಿಕಲ್ಲು, ಗುಡುಗು, ಗಾಳಿ ಸಹಿತ ಧಾರಾಕಾರ ಮಳೆ ಸುರಿದಿದ್ದು, ಆಲಿಕಲ್ಲುಗಳು ನೆಲದ ಮೇಲೆ ಮುತ್ತಿನ ರಾಶಿ ಹಾಕಿದಂತಾಗಿತ್ತು. ಬಿಸಿಲಿನ ತಾಪಕ್ಕೆ ಒಣಗುತ್ತಿದ್ದ ಕಬ್ಬಿನ ಬೆಳೆಗೆ ಈ ಮಳೆಯಿಂದಾಗಿ ಮರುಜೀವ ಬಂದಂತಾಗಿದೆ. ಗದ್ದೆಗಳಲ್ಲಿ ನೀರು ನಿಂತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ, ಮಾವಿನ ಬೆಳೆಗೆ ಹಾನಿಯಾಗಿದ್ದು, ಮಾವಿನ ಕಾಯಿಗಳನ್ನು ಘಾಸಿಗೊಳಿಸಿದೆ.ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಣಿಬೆನ್ನೂರು, ಹಿರೇಕೆರೂರು, ರಟ್ಟಿಹಳ್ಳಿ ಹಾಗೂ ಬ್ಯಾಡಗಿ ತಾಲೂಕಿನಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು. ಅಕಾಲಿಕ ಮಳೆಯಿಂದ ಮೆಕ್ಕೆಜೋಳ ಸೇರಿದಂತೆ ವಿವಿಧ ಬೆಳೆಗಳ ಒಕ್ಕಲುತನ ಮಾಡುತ್ತಿದ್ದ ರೈತರು ಸಮಸ್ಯೆ ಎದುರಿಸುವಂತಾಯಿತು.

ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನಾದ್ಯಂತ ಆಲಿಕಲ್ಲು, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಮುಂಡಗೋಡ ಸಮೀಪದ ಪಾಳಾ-ಹಾನಗಲ್ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮಾವಿನ ಮರ ಉರುಳಿ ಬಿದ್ದು ಸುಮಾರು 2 ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಗಾಳಿ, ಮಳೆಯ ರಭಸಕ್ಕೆ ಪಟ್ಟಣದ ಕೆಲವು ಬಡಾವಣೆಗಳಲ್ಲಿ ಮನೆಗಳ ಮೇಲ್ಚಾವಣಿಗಳು ಹಾರಿ ಹೋಗಿದ್ದು, ಗೃಹ ಬಳಕೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾದವು. ಭಟ್ಕಳ ತಾಲೂಕಿನ ವಿವಿಧೆಡೆ ರಾತ್ರಿ 7.40ರಿಂದ ಅರ್ಧ ತಾಸಿಗೂ ಹೆಚ್ಚು ಕಾಲ ಮಳೆ ಸುರಿಯಿತು.

ಔರಾದ್‌, ಕಮಲನಗರ, ಭಾಲ್ಕಿ, ಬಸವಕಲ್ಯಾಣ ಸೇರಿ ಬೀದರ್‌ ಜಿಲ್ಲೆಯ ಹಲವೆಡೆ ಸಂಜೆ ಒಂದು ತಾಸಿಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಯಿತು. ಶಿವಮೊಗ್ಗ ಸುತ್ತಮುತ್ತ ಮಳೆಯಾಗಿದ್ದು, ನಗರ ಹೊರವಲಯದ ಗೋಪಿ ಶೆಟ್ಟಿಕೊಪ್ಪದಲ್ಲಿ ಸಿಡಿಲಿಗೆ ತೆಂಗಿನಮರವೊಂದು ಹೊತ್ತಿ ಉರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈಲ್ವೇಲಿ ಕನ್ನಡಕ್ಕೆ ಅನ್ಯಾಯ: ಪರೀಕ್ಷೆ ಬಹಿಷ್ಕಾರ ನಿರ್ಧಾರ?
ಮಗನ ಮಾನಗೇಡಿ ಕೆಲಸಕ್ಕೆ ಇಡೀ ಕುಟುಂಬಕ್ಕೆ ಬಹಿಷ್ಕಾರ: ಮನನೊಂದು ನದಿಗೆ ಹಾರಿದ ತಾಯಿ