ಭ್ರೂಣ ಹತ್ಯೆ ತಡೆ ಕಾಯ್ದೆ ಇನ್ನಷ್ಟು ಬಿಗಿ: ಸಚಿವ ದಿನೇಶ್ ಗುಂಡೂರಾವ್

By Govindaraj SFirst Published Dec 3, 2023, 3:01 PM IST
Highlights

ಭ್ರೂಣ ಹತ್ಯೆ ತಡೆ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಅಗತ್ಯವಿದ್ದು, ಈ ಸಂಬಂಧ ಗೃಹ ಇಲಾಖೆ ಮತ್ತು ಆರೋಗ್ಯ ಇಲಾಖೆ ಸೇರಿಕೊಂಡು ಜಂಟಿಯಾಗಿ ಕಾನೂನು ಜಾರಿಗೆ ಚಿಂತನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಮಂಗಳೂರು/ಕೊರಟಗೆರೆ (ಡಿ.03): ಭ್ರೂಣ ಹತ್ಯೆ ತಡೆ ಕಾನೂನನ್ನು ಇನ್ನಷ್ಟು ಕಠಿಣಗೊಳಿಸುವ ಅಗತ್ಯವಿದ್ದು, ಈ ಸಂಬಂಧ ಗೃಹ ಇಲಾಖೆ ಮತ್ತು ಆರೋಗ್ಯ ಇಲಾಖೆ ಸೇರಿಕೊಂಡು ಜಂಟಿಯಾಗಿ ಕಾನೂನು ಜಾರಿಗೆ ಚಿಂತನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಡ್ಯ, ಮೈಸೂರಲ್ಲಿ ಬೆಳಕಿಗೆ ಬಂದಿರುವ ಭ್ರೂಣ ಹತ್ಯೆ ಪ್ರಕರಣದ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಭ್ರೂಣ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಂಡ್ಯದಲ್ಲಿ ಭ್ರೂಣ ಹತ್ಯೆ ಸಂಬಂಧ ನಾನು ಎಲ್ಲ ಕಡೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದೇನೆ. ಸಾರ್ವಜನಿಕರು ಸೇರಿ ಹಲವರಿಂದ ಮಾಹಿತಿ ಪಡೆಯಲಾಗಿದೆ. ಅದರಂತೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಅವರು ಆದೇಶ ಮಾಡಿದ್ದಾರೆ ಎಂದು ಹೇಳಿದರು.

ಡಯಾಲಿಸಿಸ್‌ ಯಂತ್ರ ಸರ್ಕಾರದಿಂದ ನಿರ್ವಹಣೆ?: ರಾಜ್ಯದಲ್ಲಿ ಸರ್ಕಾರದಿಂದಲೇ ಡಯಾಲಿಸ್‌ ಯಂತ್ರಗಳನ್ನು ಖರೀದಿಸಿ, ನಿರ್ವಹಿಸಲು ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗೂಂಡೂರಾವ್‌ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ರಾಜ್ಯದಲ್ಲಿ ಡಯಾಲಿಸಿಸ್ ವ್ಯವಸ್ಥೆ ನಾನು ಆರೋಗ್ಯ ಸಚಿವನಾಗುವ ಮೊದಲೇ ಗೊಂದಲದಲ್ಲಿತ್ತು. ಹಿಂದಿನ ಸರ್ಕಾರ ಇದರ ನಿರ್ವಹಣೆಯನ್ನು 2 ಏಜೆನ್ಸಿಗೆ ವಹಿಸಿತ್ತು, ಅದರಲ್ಲಿ ಒಂದು ಏಜೆನ್ಸಿ ಅರ್ಧದಲ್ಲೇ ಬಿಟ್ಟಿತ್ತು. ಏಜೆನ್ಸಿಯ ನಿರ್ವಹಣೆ ಸಮರ್ಪಕವಾಗಿರಲಿಲ್ಲ. 

ಮಧು ಬಂಗಾರಪ್ಪಗೆ ಅಧಿಕಾರದ ಮದ ನೆತ್ತಿಗೆ: ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

ಸಿಬ್ಬಂದಿಗೆ ಸಂಬಳ ಸರಿಯಾಗಿ ಪಾವತಿಸುತ್ತಿರಲಿಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ 4 ವಿಭಾಗದಲ್ಲಿ ಹೊಸ ಏಜೆನ್ಸಿಗಳಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಕೆಟ್ಟು ಹೋಗಿರುವ ಡಯಾಲಿಸಿಸ್ ಯಂತ್ರಗಳನ್ನು ಬದಲಾಯಿಸುವ ಕಾರ್ಯ ಈಗಿರುವ ಏಜೆನ್ಸಿ ಮಾಡಬೇಕು ಅಥವಾ ಹೊಸ ಏಜೆನ್ಸಿ ಬಂದ ಬಳಿಕ ಮಾಡಬೇಕಷ್ಟೆ. ಯಾವುದೂ ಆಗದೇ ಇದ್ದಲ್ಲಿ ಸರ್ಕಾರವೇ ಯಂತ್ರಗಳನ್ನು ಖರೀದಿಸಿ ನಿರ್ವಹಣೆ ಮಾಡಲು ಚಿಂತಿಸಿದೆ. 

ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್‌ಗಳು ಸೇರಿ ಹಲವು ಕಡೆ ಪರಿಶೀಲನೆ ಆಗಬೇಕಿದೆ. ಜತೆಗೆ ಈ ಸಂಬಂಧ ಗುಪ್ತಚರ ಮಾಹಿತಿಯನ್ನೂ ಸಂಗ್ರಹಿಸಬೇಕಿದೆ. ಪ್ರಕರಣದಲ್ಲಿ ಯಾರಿದ್ದಾರೆ, ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ಕಲೆ ಹಾಕಬೇಕಿದೆ. ಪೊಲೀಸ್ ಇಲಾಖೆ ಜತೆಗೆ ಆರೋಗ್ಯ ಇಲಾಖೆ ಕೂಡ ಸಹಕಾರ ನೀಡಬೇಕಿದೆ. ಈ ಮೂಲಕ ನಿಜಾಂಶ ತಿಳಿಯುವ ಕೆಲಸ ಆಗಲಿದೆ ಎಂದು ತಿಳಿಸಿದರು.

ಡಾ। ಸತೀಶ್‌ ಮೇಲೆ ದೂರುಗಳು ಇದ್ದವು: ಮಂಡ್ಯದ ವೈದ್ಯ ಡಾ. ಸತೀಶ್ ಆಯುಷ್ ಅಧಿಕಾರಿಯಾಗಿದ್ದು, ಅವರು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡರು ಎಂಬುದು ಗೊತ್ತಿಲ್ಲ. ಅವರ ಮೇಲೆ ಸಾಕಷ್ಟು ಆರೋಪ ಇತ್ತು, ಮೈಸೂರಲ್ಲೂ ದೂರುಗಳಿದ್ದವು. ಈ ಪ್ರಕರಣಕ್ಕೂ ಆತ್ಮಹತ್ಯೆಗೂ ಸಂಬಂಧ ಇದೆಯೋ ಗೊತ್ತಿಲ್ಲ. ಹೀಗಾಗಿ ನಾನು ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದರು.

ಪ್ರತಿ ಮನೆ ಮನೆಗೂ ತೆರಳಿ ಆರೋಗ್ಯ ತಪಾಸಣೆ: ಆರೋಗ್ಯ ಕರ್ನಾಟಕ ಅಭಿಯಾನದಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆ ಮನೆಗೆ ತೆರಳಿ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿರುವ ಕಾಯಿಲೆಗಳನ್ನು ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ಈ ಕಾರ್ಯಾಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಆರೋಗ್ಯ ತುಮಕೂರು ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ನಮ್ಮ ಇಲಾಖೆ ಗೃಹ ಆರೋಗ್ಯ ಎಂಬ ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕ್ರಮ ರೂಪಿಸಲು ಚಿಂತನೆ ನಡೆಸಿದ್ದು, ತುಮಕೂರು ಜಿಲ್ಲೆಯಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಗೃಹ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಗಾಣಿಗ ಜಾತಿಯ ಪ್ರಧಾನಿ ಮೋದಿಗೆ ಗಾಣಿಗರ ಸಮಸ್ಯೆ ಗೊತ್ತಿಲ್ಲವೇ?: ಸಿದ್ದರಾಮಯ್ಯ

ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಸ್ತಾನು ಇಲ್ಲದ ಔಷಧಿಗಳನ್ನು ವೈದ್ಯರು ರೋಗಿಗಳ ಔಷಧಿ ಚೀಟಿಗಳಲ್ಲಿ ಬರೆಯಬಾರದು, ಸರ್ಕಾರಿ ಆಸ್ಪತ್ರೆಗಳಿಗೆ ಬರುವವರು ಬಡವರಾಗಿರುತ್ತಾರೆ, ಅಂತಹವರಿಗೆ ನೆರವಾಗುವುದು ನಮ್ಮ ಕರ್ತವ್ಯ ಎಂದರು. ಆಸ್ಪತ್ರೆಗಳಲ್ಲಿ ದಾಸ್ತಾನು ಇರಬೇಕಾದ ಔಷಧಿಗಳನ್ನು ಪರಿಶೀಲನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. 

click me!