
ಬೆಂಗಳೂರು (ಜು.24) : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ವಿರೋಧಪಕ್ಷ ನಾಯಕರ ಸಭೆಗೆ ಆಗಮಿಸಿದ್ದ ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದ ಬಗ್ಗೆ ಬಿಜೆಪಿ ಹಾಗೂ ಜೆಡಿಎಸ್ ನಿಯೋಗವು ದೂರು ನೀಡಿದ ಬೆನ್ನಲ್ಲೇ, ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿರುವುದಾಗಿ ತಿಳಿದು ಬಂದಿದೆ.
ನಗರದ ಖಾಸಗಿ ಹೋಟೆಲ್ನಲ್ಲಿ ಜು.17 ಹಾಗೂ 18ರಂದು ರಾಷ್ಟ್ರೀಯ ಮಟ್ಟದ ವಿರೋಧಪಕ್ಷಗಳ ನಾಯಕರ ಸಭೆ ನಡೆದಿತ್ತು. ಸಭೆಯಲ್ಲಿ ವಿರೋಧಪಕ್ಷಗಳ ಪ್ರತಿನಿಧಿಗಳಿಗೆ ಆತಿಥ್ಯ ನೀಡಲು ಶಿಷ್ಟಾಚಾರಕ್ಕೆ ವಿರುದ್ಧವಾಗಿ 25 ಮಂದಿ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ತನ್ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಕರ್ನಾಟಕದ ವ್ಯವಹಾರಗಳಿಗೆ ಯಾವುದೇ ರೀತಿಯ ಸಂಬಂಧವಿಲ್ಲದ ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿರುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ- ಜೆಡಿಎಸ್ ನಿಯೋಗದ ಸದಸ್ಯರು ರಾಜ್ಯಪಾಲರಿಗೆ ಲಿಖಿತ ದೂರು ಸಲ್ಲಿಸಿದ್ದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಬಿಜೆಪಿ ಪ್ರತಿಭಟನೆ
ಜತೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ರಾಜಕೀಯ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ಪಕ್ಷದವರ ಔತಣಕೂಟದಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ 10 ಮಂದಿ ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಿದ್ದಾರೆ. ಈ ಎಲ್ಲಾ ಘಟನೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ವರದಿ ಪಡೆದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಒಟ್ಟಾರೆ ಪ್ರಕರಣದ ವಿವರ ಹಾಗೂ ಯಾರಾರಯರಿಗೆ ರಾಜ್ಯದ ಅತಿಥಿ ಸ್ಥಾನಮಾನ ನೀಡಲಾಗಿತ್ತು? ಆತಿಥ್ಯಕ್ಕೆ ಯಾರಾರಯರನ್ನು ನಿಯೋಜಿಸಲಾಗಿತ್ತು? ಈ ವೇಳೆ ಉಂಟಾಗಿರುವ ಲೋಪಗಳೇನು ಎಂಬುದರ ಬಗ್ಗೆ ರಾಜ್ಯಪಾಲರು ವಿವರಣೆ ಕೇಳಿರುವುದಾಗಿ ತಿಳಿದುಬಂದಿದೆ.
ಐಎಎಸ್ ಅಧಿಕಾರಿಗಳ ದುರ್ಬಳಕೆ, ದಲಿತ ಅಸ್ತ್ರ ಹಿಡಿದು ಬಿಜೆಪಿ-ಕಾಂಗ್ರೆಸ್ ಹೋರಾಟ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ