ನಗರೋತ್ಥಾನ ಅನುದಾನ ಹಿಂಪಡೆಯಲ್ಲ: ಸಚಿವ ಭೈರತಿ ಬಸವರಾಜ್

Kannadaprabha News   | Asianet News
Published : May 05, 2020, 03:34 PM IST
ನಗರೋತ್ಥಾನ ಅನುದಾನ ಹಿಂಪಡೆಯಲ್ಲ: ಸಚಿವ ಭೈರತಿ ಬಸವರಾಜ್

ಸಾರಾಂಶ

ಶಿವಮೊಗ್ಗ ಮಹಾನಗರ ಪಾಲಿಕೆಗೆ ಬಿಡುಗಡೆ ಮಾಡಲಾಗಿರುವ 125 ಕೋಟಿ ರುಪಾಯಿಗಳನ್ನು ಹಿಂಪಡೆಯುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಖಚಿತಪಡಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ. 

ಶಿವಮೊಗ್ಗ(ಮೇ.05): ನಗರೋತ್ಥಾನ ಯೋಜನೆಯಡಿ ಶಿವಮೊಗ್ಗ ಮಹಾನಗರ ಪಾಲಿಕೆಗೆ ಬಿಡುಗಡೆ ಮಾಡಲಾಗಿರುವ 125 ಕೋಟಿ ರು. ಅನುದಾನ ಯಾವುದೇ ಕಾರಣಕ್ಕೂ ಸರ್ಕಾರ ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ಸ್ಪಷ್ಪಪಡಿಸಿದರು.

ಸೋಮವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್‌ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಶಿವಮೊಗ್ಗ ನಗರದಲ್ಲಿ 24/7 ಕುಡಿಯುವ ನೀರಿನ ಯೋಜನೆ ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಆಗಸ್ಟ್‌ ವೇಳೆಗೆ ಟೆಂಡರ್‌ ಅವಧಿ ಮುಗಿಯುತ್ತಿದ್ದರೂ, ಇನ್ನೂ ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಂಡಿಲ್ಲ. ನಿಗದಿತ ಅವಧಿಯ ಒಳಗಾಗಿ ಯೋಜನೆ ಪೂರ್ಣಗೊಂಡು ನೀರು ಪೂರೈಕೆ ಆರಂಭವಾಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಇದೇ ರೀತಿ ಒಳಚರಂಡಿ ಕಾಮಗಾರಿ ಅರ್ಧದಲ್ಲಿದ್ದು, ಮುಂದಿನ ಮಳೆಗಾಲದ ಅವಧಿಯಲ್ಲಿ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳು ಮುಂದಿನ ಎರಡು ವರ್ಷಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಒಂದೇ ದಿನ ಗರ್ಭಿಣಿ ಸೇರಿ ಮೂವರಿಗೆ ಸೋಂಕು

ಬೆಂಗಳೂರಿನಲ್ಲಿ ಸಭೆ:

ಶಿವಮೊಗ್ಗ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯನ್ನು ಸದ್ಯದಲ್ಲಿಯೇ ಕರೆಯಲಾಗುವುದು. ಮುಂದಿನ ಜೂನ್‌ ಪ್ರಥಮ ವಾರದಲ್ಲಿ ತಾವು ಶಿವಮೊಗ್ಗಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಲಿದ್ದು, ಆ ಸಂದರ್ಭದಲ್ಲಿ ಎಲ್ಲಾ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸುವುದಾಗಿ ಸಚಿವರು ತಿಳಿಸಿದರು.

ಅಭಿವೃದ್ಧಿ ಮಾಹಿತಿ:

ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಅಭಿವೃದ್ಧಿ ಕಾರ್ಯಗಳ ಮಾಹಿತಿ ಒದಗಿಸಿದರು. ಕೊರೋನಾ ನಿಯಂತ್ರಣಕ್ಕೆ ಪಾಲಿಕೆ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಒಟ್ಟು 13 ಸಾವಿರ ಆಹಾರ ಪ್ಯಾಕೆಟ್‌ ಪೂರೈಸಲಾಗಿದೆ. ದಾನಿಗಳ ನೆರವಿನಿಂದ 2,880 ಪಡಿತರ ಕಿಟ್‌ ವಿತರಿಸಲಾಗಿದೆ. ಪ್ರತಿ ದಿನ 8 ಸಾವಿರ ಲೀಟರ್‌ನಂತೆ 2.13 ಲಕ್ಷ ಲೀಟರ್‌ ಹಾಲು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಸ್ತಾವ ಸಲ್ಲಿಕೆ:

ಮಹಾತ್ಮಾ ಗಾಂಧಿ ನಗರ ವಿಕಾಸ್‌ ಯೋಜನೆಯ 125 ಕೋಟಿ ರು. ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಬೇಕು. ಕಳೆದ ಎರಡು ವರ್ಷಗಳ ಎಸ್‌ಎಫ್‌ಸಿ ವಿಶೇಷ ಅನುದಾನ 20 ಕೋಟಿ ರು. ಬಿಡುಗಡೆ ಮಾಡಬೇಕು. ಕೈಗಾರಿಕಾ ಅಭಿವೃದ್ಧಿ ವಸಾಹತು ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ 10 ಕೋಟಿ ರು, ಎಸ್‌ಎಫ್‌ಸಿ ಮುಕ್ತನಿಧಿಯಲ್ಲಿ ಪಾಲಿಕೆಗೆ 4ನೇ ಕಂತು ಬಿಡುಗಡೆ ಮಾಡಬೇಕು. ಸ್ವಚ್ಛ ಭಾರತ ಮಿಷನ್‌ ಅಡಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ 2.38 ಕೋಟಿ ರು. ಬಿಡುಗಡೆ ಮಾಡಬೇಕು. ನಿವೇಶನರಹಿತರು ಅನಧಿಕೃತವಾಗಿ ನಿರ್ಮಿಸಿದ 975 ಪ್ರಕರಣಗಳಲ್ಲಿ ಆ ಮನೆಗಳನ್ನು ಸಕ್ರಮಗೊಳಿಸಬೇಕು ಎಂದು ಅವರು ಸಚಿವರಿಗೆ ಪ್ರಸ್ತಾವ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮೇಯರ್‌ ಸುವರ್ಣ ಶಂಕರ್‌, ಶಾಸಕರಾದ ಪ್ರಸನ್ನ ಕುಮಾರ್‌, ಆಯನೂರು ಮಂಜುನಾಥ, ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ