ರಾಜ್ಯದ ಅಕ್ರಮ ಆಸ್ತಿಗಳಿಂದ ತೆರಿಗೆ ವಸೂಲಿಗೆ ಚಿಂತನೆ: ಬೆಂಗಳೂರು ಬಿಟ್ಟು ಇತರ ನಗರಗಳಿಗೆ ಅನ್ವಯ

Published : Oct 20, 2023, 05:45 AM IST
ರಾಜ್ಯದ ಅಕ್ರಮ ಆಸ್ತಿಗಳಿಂದ ತೆರಿಗೆ ವಸೂಲಿಗೆ ಚಿಂತನೆ: ಬೆಂಗಳೂರು ಬಿಟ್ಟು ಇತರ ನಗರಗಳಿಗೆ ಅನ್ವಯ

ಸಾರಾಂಶ

ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಇತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅಕ್ರಮ ಬಡಾವಣೆ ಮತ್ತು ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣಗೊಂಡಿರುವ ಕಟ್ಟಡಗಳ ಮಾಲೀಕರಿಂದ ನಿರ್ವಹಣಾ ಶುಲ್ಕ ರೂಪದಲ್ಲಿ ತೆರಿಗೆ ವಸೂಲಿ ಮಾಡುವ ಸಂಬಂಧ ಸರ್ಕಾರಕ್ಕೆ ಶಿಫಾರಸು ಮಾಡಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಧ್ಯಕ್ಷತೆಯ ಸಚಿವ ಸಂಪುಟ ಉಪಸಮಿತಿ ಚಿಂತನೆ ನಡೆಸಿದೆ.

ಬೆಂಗಳೂರು (ಅ.20) : ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಇತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅಕ್ರಮ ಬಡಾವಣೆ ಮತ್ತು ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣಗೊಂಡಿರುವ ಕಟ್ಟಡಗಳ ಮಾಲೀಕರಿಂದ ನಿರ್ವಹಣಾ ಶುಲ್ಕ ರೂಪದಲ್ಲಿ ತೆರಿಗೆ ವಸೂಲಿ ಮಾಡುವ ಸಂಬಂಧ ಸರ್ಕಾರಕ್ಕೆ ಶಿಫಾರಸು ಮಾಡಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಧ್ಯಕ್ಷತೆಯ ಸಚಿವ ಸಂಪುಟ ಉಪಸಮಿತಿ ಚಿಂತನೆ ನಡೆಸಿದೆ.

ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆ 1976 (ಕೆಎಂಸಿ ಕಾಯ್ದೆ) ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ಕ್ಕೂ ಅಳವಡಿಕೆಯಿಂದಾಗುವ ಸಾಧಕ-ಬಾಧಕ ಪರಿಶೀಲಿಸಲು ರಚಿಸಿರುವ ಸಚಿವ ಸಂಪುಟ ಉಪಸಮಿತಿಯ ಮೊದಲ ಸಭೆ ಗುರುವಾರ ವಿಧಾನಸೌಧದಲ್ಲಿ ನಡೆಯಿತು.

ಇವರಿಗಿಲ್ಲ ಬರ: ಶಾಸಕರು, ಸಚಿವರ ವೇತನ ಏರಿಕೆಗೆ ಸಂಪುಟ ಒಪ್ಪಿಗೆ!

ಸಭೆಯಲ್ಲಿ ಮಾತನಾಡಿದ ಈಶ್ವರ್‌ ಖಂಡ್ರೆ, ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ 54.91 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳಿದ್ದು, ಅವುಗಳಲ್ಲಿ 20.55 ಲಕ್ಷ ಆಸ್ತಿಗಳು ಮಾತ್ರ ನಿಯಮದಂತೆ ಅನುಮತಿ ಪಡೆದು ಕಟ್ಟಡ ನಿರ್ಮಿಸಿ ತೆರಿಗೆ ಪಾವತಿಸುತ್ತಿವೆ. ಉಳಿದ 34.35 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳು ಅನಧಿಕೃತವಾಗಿದ್ದು, ಅವುಗಳಿಂದ ತೆರಿಗೆ ವಸೂಲಿಯಾಗುತ್ತಿಲ್ಲ. ಆದರೂ, ಆ ಆಸ್ತಿಗಳಿಗೆ ನಗರ ಸ್ಥಳೀಯ ಸಂಸ್ಥೆಗಳು ನೀರು, ರಸ್ತೆ ಸೇರಿದಂತೆ ಇನ್ನಿತರ ಮೂಲಸೌಕರ್ಯಗಳನ್ನು ನೀಡಬೇಕಿದೆ. ಇದು ನಗರ ಸ್ಥಳೀಯ ಸಂಸ್ಥೆಗಳಿಗೆ ಹೊರೆಯಾಗುತ್ತಿದೆ. ಹೀಗಾಗಿ ಅನಧಿಕೃತ ಕಟ್ಟಡ, ಆಸ್ತಿಗಳಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ವಹಿಯಲ್ಲಿ ಖಾತೆ ನೀಡಿ ಆಸ್ತಿ ತೆರಿಗೆ ಸಂಗ್ರಹಿಸುವ ಮಾದರಿಯನ್ನು ಇತರ ನಗರ ಸ್ಥಳೀಯ ಸಂಸ್ಥೆಗಳಿಗೂ ಅಳವಡಿಸಬಹುದು. ಜತೆಗೆ ಆಸ್ತಿಗಳಿಗೆ ಬಿ ಖಾತೆ ನೀಡಿ ದಂಡ ಸಹಿತ ತೆರಿಗೆ ವಸೂಲಿ ಮಾಡಬಹುದಾಗಿದೆ ಎಂದು ಹೇಳಿದರು.

5 ಸಾವಿರ ಕೋಟಿ ರು. ಆದಾಯದ ನಿರೀಕ್ಷೆ:

34.35 ಲಕ್ಷ ಅನಧಿಕೃತ ಆಸ್ತಿಗಳಿಂದ 4ರಿಂದ 5 ಸಾವಿರ ರು. ನಿರ್ವಹಣಾ ಶುಲ್ಕ ಅಥವಾ ಆಸ್ತಿ ತೆರಿಗೆ ಸಂಗ್ರಹವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಪಸಮಿತಿಯು ಸರ್ಕಾರಕ್ಕೆ ಸಲ್ಲಿಸುವ ವರದಿಯಲ್ಲಿ ಉಲ್ಲೇಖಿಸಲು ಸಭೆಯಲ್ಲಿ ಚರ್ಚಿಸಲಾಯಿತು.

ಸಚಿವರಾದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌, ಪೌರಾಡಳಿತ ಸಚಿವ ರಹೀಂಖಾನ್‌, ಅಧಿಕಾರಿಗಳಾದ ಮನೀಷ್‌ ಮೌದ್ಗಿಲ್‌ ಸೇರಿದಂತೆ ಇತರರಿದ್ದರು.

ಅಕ್ರಮ ಬಡಾವಣೆಯ ನಿವೇಶನ ಮಾರಾಟ ತಡೆಗೆ ಕ್ರಮ

ಅಕ್ರಮ ಬಡಾವಣೆಗಳ ನಿರ್ಮಾಣ ತಡೆಯಲು ಆರ್‌ಟಿಸಿಯ 11ನೇ ಕಾಲಂನಲ್ಲಿ ಅಕ್ರಮ ಬಡಾವಣೆ ಎಂದು ನಮೂದಿಸಿದರೆ ಕಾವೇರಿ ತಂತ್ರಾಂಶದ ಮೂಲಕ ಅದರ ಮಾಹಿತಿ ಉಪ ನೋಂದಣಾಧಿಕಾರಿಗಳಿಗೆ ತಿಳಿದು ಅಕ್ರಮ ಬಡಾವಣೆಯಲ್ಲಿ ನಿವೇಶನ ಮಾರಾಟ ತಡೆಯಬಹುದು. ಈ ಬಗ್ಗೆ ಸರ್ಕಾರಕ್ಕೆ ನೀಡುವ ವರದಿಯಲ್ಲಿ ತಿಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಭೆಯಲ್ಲಿ ತಿಳಿಸಿದರು.

ಕರಡು ವರದಿ ಸಿದ್ಧತೆಗೆ ಸೂಚನೆ

ಅನಧಿಕೃತ ಕಟ್ಟಡಗಳಿಗೆ ನಿರ್ವಹಣಾ ಶುಲ್ಕ ರೂಪದಲ್ಲಿ ತೆರಿಗೆ ವಿಧಿಸುವುದು, ಬಡಾವಣೆಗಳ ಮಂಜೂರಾತಿ, ನಕ್ಷೆ ಮಂಜೂರಾತಿ ಪ್ರಕ್ರಿಯೆ ಸರಳಗೊಳಿಸುವುದು ಹಾಗೂ ನಕ್ಷೆ ಉಲ್ಲಂಘನೆ ಮತ್ತು ನಕ್ಷೆ ಮಂಜೂರಾತಿಯೇ ಇಲ್ಲದ ಕಟ್ಟಡ ನಿರ್ಮಾಣಕ್ಕೆ ಕಡಿವಾಣ ಹಾಕುವ ಕುರಿತು ಕರಡು ಸಿದ್ಧಪಡಿಸಿ ಮುಂದಿನ ಗುರುವಾರ ನಡೆಯಲಿರುವ ಉಪಸಮಿತಿ ಸಭೆಯಲ್ಲಿ ಮಂಡಿಸುವಂತೆ ಅಧಿಕಾರಿಗಳಿಗೆ ಸಭೆಯಲ್ಲಿದ್ದ ಸಚಿವರು ಸೂಚಿಸಿದರು.

ಸದ್ಯಕ್ಕೆ ರಾಜ್ಯದಲ್ಲಿ ಅಕ್ರಮ-ಸಕ್ರಮ ಇಲ್ಲ

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಅಕ್ರಮ-ಸಕ್ರಮ ಯೋಜನೆ ಜಾರಿ ಸಾಧ್ಯವಿಲ್ಲ. ಈ ಸಂಬಂಧ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದು, ಇನ್ನು ಮುಂದೆ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅವಕಾಶವಿಲ್ಲ. ಹಲವು ವರ್ಷಗಳಿಂದ ಅಕ್ರಮವಾಗಿ ನಿರ್ಮಾಣವಾಗಿರುವ ವಸತಿ ಕಟ್ಟಡಗಳಿಗೆ ದಂಡ ವಿಧಿಸಿ ಸಕ್ರಮ ಮಾಡಿಕೊಡುವ ಬಗ್ಗೆ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡುವ ಕೆಲಸ ಆಗಬೇಕಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ವಿವರಿಸಿದರು.

ಅಕ್ರಮ ಆಸ್ತಿ ಪ್ರಕರಣ ಮತ್ತೆ ಸಂಕಷ್ಟ ; ಡಿಕೆಶಿ ವಾದ ಒಪ್ಪದ ಹೈಕೋರ್ಟ್‌

ಅಕ್ರಮ ತಡೆಗೆ ಕಾಯ್ದೆಗೆ ಬಲ

ಅರಣ್ಯ ಕಾಯ್ದೆಯಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸುವುದರ ಜತೆಗೆ, ಒತ್ತುವರಿದಾರರನ್ನು ಬಂಧಿಸಿ ಶಿಕ್ಷೆಗೊಳಪಡಿಸಲೂ ಅವಕಾಶವಿದೆ. ಅದೇ ರೀತಿ ಕಂದಾಯ ಭೂಮಿಯನ್ನು ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಲಭ್ಯವಿರುವ ಕಾಯ್ದೆಗೆ ತಿದ್ದುಪಡಿ ತರಬೇಕಿದೆ. ಅರಣ್ಯ ಕಾಯ್ದೆಯಲ್ಲಿನ ಅಂಶಗಳನ್ನೂ ಸೇರಿಸಬಹುದು ಎಂದು ಈಶ್ವರ್‌ ಖಂಡ್ರೆ ಸಲಹೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ